ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದು, ಇವರು ಸಕ್ರಿಯ ಬಿಜೆಪಿ ಕಾರ್ಯಕರ್ತರು ಎನ್ನಲಾಗಿದೆ. ಗೋವುಗಳ ಅಕ್ರಮ ಸಾಗಾಟಕ್ಕೆ ಬಳಸಿದ್ದ ಮೂರು ವಾಹನ, 6 ದನ ಮತ್ತು 2 ಹೋರಿ ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ಹಿನ್ನೆಲೆ: ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಧರ್ಮಸ್ದಳ ಠಾಣೆಯ ಎಸ್ಐ ಅನಿಲ್ ಕುಮಾರ್ ನೇತೃತ್ವದ ತಂಡ ಜುಲೈ 12ರ ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ರಾತ್ರಿ 8-45ರ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ವಾಹನದಲ್ಲಿ ಆರು ದನಗಳು, ಎರಡು ಹೋರಿಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ತುಂಬಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿತ್ತು. ವಾಹನದಲ್ಲಿದ್ದವರನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿರುವುದು ವರದಿಯಾಗಿದೆ.
ಈ ಸುದ್ದಿ ಓದಿದ್ದೀರಾ? ಹಾಸನ | ಕರ್ತವ್ಯ ಲೋಪ; ಮೂವರು ಪಿಡಿಒಗಳ ಅಮಾನತು
ವಶಕ್ಕೆ ಪಡೆದ ಜಾನುವಾರುಗಳ ಅಂದಾಜು ಮೌಲ್ಯ ₹65,000 ಹಾಗೂ ವಾಹನಗಳ ಅಂದಾಜು ಮೌಲ್ಯ ₹7 ಲಕ್ಷ ಸೇರಿದಂತೆ ಒಟ್ಟು ಸೊತ್ತುಗಳ ಅಂದಾಜು ಮೊತ್ತ ₹7.65 ಲಕ್ಷ ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.