ಕುಟುಂಬದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಉಂಟಾದಾಗ ಕಾನೂನಿನ ಮುಖಾಂತರ ಅವರಿಗೆ ರಕ್ಷಣೆ ಹಾಗೂ ನೆರವು ಒದಗಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005ರಡಿ ಜಿಲ್ಲಾ ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005 ರಡಿ ಪ್ರಕರಣ ದಾಖಲಿಸಿಕೊಂದು ಅವರಿಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುವಂತೆ ಮಾಡಬೇಕು. ಕೌಟುಂಬಿಕ ದೌರ್ಜನ್ಯದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಮಹಿಳೆಯರಿಗೆ ಇರುವ ಕಾನೂನುಗಳ ಮಾಹಿತಿ ನೀಡಬೇಕು” ಎಂದು ಸೂಚಿಸಿದರು.
“ಜಿಲ್ಲೆಯಲ್ಲಿ ಪ್ರಸಕ್ತ ಮಾಹೆಯಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ 18 ಪ್ರಕರಣಗಳು ದಾಖಲಾಗಿದ್ದು, ಸಿಡಿಪಿಒ ಕಚೇರಿಯಲ್ಲಿ 7 ಪ್ರಕರಣ, ನ್ಯಾಯಾಲಯದಲ್ಲಿ 10 ಪ್ರಕರಣಗಳು ಸೇರಿದಂತೆ ಒಟ್ಟು 35 ಪ್ರಕರಣಗಳು ಇವೆ. ಇದರಲ್ಲಿ 8 ಪ್ರಕರಣಗಳು ಇತ್ಯರ್ಥವಾಗಿದ್ದು, ಇನ್ನು 27 ಪ್ರಕರಣಗಳು ಬಾಕಿ ಇವೆ. ಅವುಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಬೇಕು ಹಾಗೂ ಅವರಿಗೆ ಕಾನೂನಿನ ಅರಿವು ಮೂಡಿಸಲು ಅಧಿಕಾರಿಗಳು ಕ್ರಮ ವಹಿಸಬೇಕು” ಎಂದು ತಿಳಿಸಿದರು.
“ಮಕ್ಕಳು ಮತ್ತು ಗರ್ಭಿಣಿ ಮಹಿಳೆಗೆ ಪೌಷ್ಠಿಕಾಂಶದ ಕೊರತೆಯಾಗಬಾರದು. ಅಂಗನವಾಡಿ ಕೇಂದ್ರಗಳಿಂದ ಪೌಷ್ಠಿಕಾಂಶಯುಕ್ತ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಅವರು ಸದೃಢ ಆರೋಗ್ಯ ಹೊಂದುವಂತೆ ಮಾಡಬೇಕು” ಎಂದು ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಹಾವೇರಿ | ಕೆಲಸ ಮಾಡದ ಸಿಸಿ ಕ್ಯಾಮೆರಾಗಳು: ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ
“ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ಮಾತನಾಡಿ, “ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಅಡಿ 2023ರ ಎಪ್ರಿಲ್ನಿಂದ ಜೂನ್ ತಿಂಗಳ ಅಂತ್ಯಕ್ಕೆ ಒಟ್ಟು 23 ಪ್ರಕರಣಗಳು ದಾಖಲಾಗಿದ್ದು, 21 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. 2 ಬಾಲ್ಯ ವಿವಾಹಗಳು ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ. ನಗರದ ಎಂಸಿಸಿಬಿ ಬ್ಲಾಕ್ನಲ್ಲಿ ಉದ್ಯೋಗಸ್ಥ ಮಹಿಳೆಯರಿಗಾಗಿ 1989ರಲ್ಲಿ ಪ್ರಾರಂಭವಾದ ಸ್ನೇಹಾಲಯ ಎಂಬ ವಸತಿ ಗೃಹವಿದ್ದು, ಪ್ರಸ್ತುತ 18 ನಿವಾಸಿಗಳು ದಾಖಲಾಗಿದ್ದಾರೆ. 1989ರಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆಯಾಗಿದ್ದು, ನಂತರ ಯಾವುದೇ ಹಣ ಸಂಸ್ಥೆಗೆ ಬಿಡುಗಡೆಯಾಗಿಲ್ಲ” ಎಂದು ಮಾಹಿತಿ ನೀಡಿದರು.
ಈ ಸಬೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಸುರೇಶ್ ಕೆ ಇಟ್ನಾಳ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ, ಮ. ಕರೆಣ್ಣವರ, ಡಿಡಿಪಿಐ ತಿಪ್ಪೇಶಪ್ಪ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ ಕೆ ಸೇರಿದಂತೆ ಇತರರು ಇದ್ದರು.