ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಾಗರಿಕ ನೊಂದಣಿ ಪದ್ದತಿಯಡಿ ಜಿಲ್ಲಾ ಮಟ್ಟದ ಜನನ, ಮರಣಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ‘ ಜಿಲ್ಲೆಯಲ್ಲಿ ಜನನ, ಮರಣ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ, ಡಿಜಿಟಲೀಕರಣಗೊಳಿಸಲು ಕ್ರಮ ವಹಿಸುವಂತೆ ‘ ಅಧಿಕಾರಿಗಳಿಗೆ ಸೂಚನೆ ನೀಡಿದರು.
” ವಿದ್ಯಾರ್ಥಿಗಳಿಗೆ ಶಾಲಾ ಪ್ರವೇಶಕ್ಕಾಗಿ ಹಾಗೂ ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲು ಸಾರ್ವಜನಿಕರಿಗೆ ಜನನ ಪ್ರಮಾಣ ಪತ್ರಗಳು ಅತ್ಯಾವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಾಕಷ್ಟು ವರ್ಷಗಳಿಂದ ಲಭ್ಯವಿರುವ ಜನನ, ಮರಣ ಪತ್ರಗಳನ್ನು ಸೂಕ್ತವಾಗಿ ನಿರ್ವಹಿಸಬೇಕು. ಅಲ್ಲದೆ, ದಾಖಲೆಗಳನ್ನು ಮುಂದಿನ ಆರು ತಿಂಗಳೊಳಗೆ ಡಿಜಿಟಲೀಕರಣಗೊಳಿಸುವಂತೆ ” ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಾಮಾನ್ಯವಾಗಿ ಜನನ ಪ್ರಮಾಣ ಪತ್ರಗಳನ್ನು 21 ದಿನದೊಳಗೆ ನೀಡಬೇಕಾಗಿದೆ. ಜನನ, ಮರಣ ಪ್ರಮಾಣ ಪತ್ರಗಳನ್ನು ಡಿಜಿಟಲೀಕರಣ ಮಾಡುವುದರಿಂದ ಜನರು ಕಚೇರಿಗೆ ಅಲೆದಾಡುವುದು ತಪ್ಪಲಿದೆ. ನಮ್ಮ ಜಿಲ್ಲೆಗೆ ಸಂಬಂಧಿಸಿದ ಜನನ ಮರಣ ಪತ್ರಗಳು ಬೇರೆ ಜಿಲ್ಲೆಗಳಲ್ಲಿದ್ದರೂ ಅದನ್ನು ತರಿಸಿಕೊಳ್ಳುವ ಕೆಲಸವಾಗಬೇಕು. ಸಂಬಂಧಿಸಿದ ತಾಲ್ಲೂಕು ಕಚೇರಿಗಳಲ್ಲಿ, ತಾಲ್ಲೂಕುವಾರು ಹಾಗೂ ವರ್ಷಾವಾರು ದಾಖಲೆಗಳನ್ನು ಸಂಗ್ರಹಿಸಿಡುವ ಕಾರ್ಯ ಆದ್ಯತೆ ಮೇರೆಗೆ ಆಗಬೇಕು ಎಂದರು.

ಪರಿಶಿಷ್ಟ ಪಂಗಡಗಳ ಆದಿವಾಸಿ ಜನರು ವಾಸಿಸುವ ಜಿಲ್ಲೆಯ ಹಾಡಿ, ಪೋಡುಗಳಲ್ಲಿನ ಮಕ್ಕಳಿಗೆ ಜನನ ಪ್ರಮಾಣ ಪತ್ರಗಳನ್ನು ನಿಗದಿತ ಕಾಲ ಮಿತಿಯಲ್ಲಿ ನೀಡಬೇಕು. ಜನನ ಪ್ರಮಾಣ ಪತ್ರಗಳು ದೊರಕದೇ ಶಾಲೆಗೆ ಸೇರಲು ಸಾಧ್ಯವಾಗುತ್ತಿಲ್ಲವೆಂಬ ದೂರುಗಳು ಬರಬಾರದು. ಜನನ, ಮರಣ ಪ್ರಮಾಣ ಪತ್ರಗಳ ನೀಡುವಿಕೆ ಕುರಿತ ಮಾಹಿತಿಯನ್ನು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪ್ರದರ್ಶಿಸಬೇಕು. ಮರಣ ಪ್ರಮಾಣ ಪತ್ರಗಳಲ್ಲಿ ಎಲ್ಲಾ ವಿಷಯಗಳನ್ನು ಕ್ರಮಬದ್ಧವಾಗಿ ದಾಖಲಿಸುವಲ್ಲಿ ಗ್ರಾಮ ಆಡಳಿತ, ಅಧಿಕಾರಿಗಳು ನಿಗಾ ವಹಿಸುವಂತೆ ನಿರ್ದೇಶನ ನೀಡಿದರು.
ಜನನ, ಮರಣ ಪ್ರಮಾಣ ಪತ್ರಗಳ ವಿತರಣೆಯಲ್ಲಿ ವಿಳಂಬಕ್ಕೆ ಅವಕಾಶವಾಗದಂತೆ ಗ್ರಾಮ ಪಂಚಾಯಿತಿಗಳು, ಸ್ಥಳೀಯ ಸರ್ಕಾರಿ ಆಸ್ಪತ್ರೆಗಳು ಎಚ್ಚರ ವಹಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಬೇಕು. ಜನನ, ಮರಣ ಪ್ರಮಾಣ ಪತ್ರ ನೀಡಿಕೆಯಲ್ಲಿ ಆರೋಗ್ಯ ಇಲಾಖೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಸಾಂಖ್ಯಿಕ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ದಾಖಲೆಗಳ ನಿರ್ವಹಣೆ ಸಂಬಂಧ ತಾಲೂಕು ಮಟ್ಟದ ಸಭೆಗಳನ್ನು ನಿಯಮಿತವಾಗಿ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಈ ಸುದ್ದಿ ಓದಿದ್ದೀರಾ?ಈ ದಿನ ಸಂಪಾದಕೀಯ | ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಸಾಂಖ್ಯಿಕ ಸಂಗ್ರಹಣಾಧಿಕಾರಿ ಪವನ್ ಕುಮಾರ್, ಜಿಲ್ಲಾಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಮಹೇಶ್, ಜಿಲ್ಲಾ ಸರ್ಜನ್ ಡಾ. ಮಹೇಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ. ಸುಧಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಬೀದ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಸುಷ್ಮಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.