ಉಡುಪಿ ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವತಿಯಿಂದ ಭೇಟಿ ನೀಡಿ ಶುಭ ಕೋರಲಾಯಿತು.
ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಪರವಾಗಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ ಶುಭಾಶಯ ಮತ್ತು ಆಶೀರ್ವಾದಗಳನ್ನು ಕೋರಿದ ನಿಯೋಗ ಧರ್ಮಪ್ರಾಂತ್ಯದ ವತಿಯಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಎಲ್ಲಾ ರೀತಿಯ ಸಹಕಾರದ ಭರವಸೆಯನ್ನು ನೀಡಿದರು.
ನಿಯೋಗದ ಭರವಸೆಗೆ ಸ್ಪಂದಿಸಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಸಮುದಾಯಕ್ಕೆ ಯಾವುದೇ ರೀತಿಯ ಸಮಸ್ಯೆಗಳಾದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಹಕಾರ ಪೊಲೀಸ್ ಇಲಾಖೆಯಿಂದ ನೀಡಲು ಬದ್ಧರಿದ್ದು, ಸಮುದಾಯ ಕೂಡ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡುವಂತೆ ಮನವಿ ಮಾಡಿದರು.
ನಿಯೋಗದಲ್ಲಿ ಧರ್ಮಪ್ರಾಂತ್ಯದ ಕುಲಪತಿಗಳಾದ ವಂ|ಸ್ಟೀವನ್ ಡಿಸೋಜಾ, ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ವಂ|ಡೆನಿಸ್ ಡೆಸಾ ಹಾಗೂ ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಮತ್ತು ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತ್ ಜತ್ತನ್ನ ಉಪಸ್ಥಿತರಿದ್ದರು.