ಕಳೆದ ಎರಡು ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯದ 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಮಾಧ್ಯಮಗಳಲ್ಲಿ ಕೂಡ ಈ ಬಗ್ಗೆ ವರದಿಗಳು ಬಂದಿವೆ. ಹಾಗಾಗಿ, ಈ ವರ್ಷದಿಂದ ಈ ಸೌಲಭ್ಯಗಳನ್ನು ಮತ್ತೆ ನೀಡಬೇಕು ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್ಐಓ) ಒತ್ತಾಯಿಸಿದೆ.
ಈ ಬಗ್ಗೆ ಬೆಂಗಳೂರಿನ ವಸಂತ ನಗರದಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ನಿರ್ದೇಶನಾಲಯದ ಕಚೇರಿಯಲ್ಲಿ ಸೋಮವಾರ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಝಮೀರ್ ಅಹ್ಮದ್ ಅವರನ್ನು ಭೇಟಿಯಾದ ರಾಜ್ಯ ಕಾರ್ಯದರ್ಶಿ ಹಯಾನ್ ಅವರ ನೇತೃತ್ವದ ನಿಯೋಗವು, ಮನವಿ ಸಲ್ಲಿಸಿ ಒತ್ತಾಯಿಸಿದೆ.
ಕಳೆದ ಎರಡು ವರ್ಷಗಳಿಂದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅಗತ್ಯವಾದ ಹಣಕಾಸಿನ ನೆರವು ದೊರೆತಿರಲಿಲ್ಲ. ಕೇಂದ್ರ ಸರ್ಕಾರವು ರಾಷ್ಟ್ರೀಯ ವಿದ್ಯಾರ್ಥಿವೇತನ ತಾಣವನ್ನು ಸ್ಥಗಿತಗೊಳಿಸಿರುವುದು ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿವೇತನವನ್ನು ಸಹ ನಿಲ್ಲಿಸಿರುವುದು ಇದಕ್ಕೆ ಮುಖ್ಯ ಕಾರಣವಾಗಿತ್ತು. ಈ ಕಾರಣದಿಂದಾಗಿ ಸಾವಿರಾರು ಬಡ ಕುಟುಂಬಗಳ ಮಕ್ಕಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಕಷ್ಟಪಡುವಂತಾಗಿದೆ ಎಂದು ಎಸ್ ಐ ಓ ಮನವಿಯಲ್ಲಿ ತಿಳಿಸಿದೆ.
ರಾಜ್ಯ ಸರ್ಕಾರವು 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುತ್ತಿರುವುದು ಸ್ವಾಗತಾರ್ಹ. ಆದರೆ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಯಾವುದೇ ಸಹಾಯ ಇಲ್ಲದಿರುವುದು ಒಂದು ದೊಡ್ಡ ಸಮಸ್ಯೆಯಾಗಿದೆ. ಇಂದಿನ ದಿನಗಳಲ್ಲಿ ಶಿಕ್ಷಣದ ಖರ್ಚು ಹೆಚ್ಚಾಗುತ್ತಿದ್ದು, ಹಿಂದುಳಿದ ವಿದ್ಯಾರ್ಥಿಗಳಿಗೆ ಇಂತಹ ವಿದ್ಯಾರ್ಥಿವೇತನಗಳು ಬಹಳ ಮುಖ್ಯವಾಗಿವೆ ಎಂದು ಎಸ್ಐಒ ಕರ್ನಾಟಕವು ಮನಗಂಡಿದೆ. 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೂ ರಾಜ್ಯ ವಿದ್ಯಾರ್ಥಿವೇತನದ ಸೌಲಭ್ಯ ಸಿಗುವಂತೆ ಮಾಡಬೇಕೆಂದು ನಾವು ಕರ್ನಾಟಕ ಸರ್ಕಾರವನ್ನು ವಿನಂತಿಸುತ್ತೇವೆ ಎಂದು ಮನವಿಯಲ್ಲಿ ತಿಳಿಸಿದೆ.
ಈ ಮನವಿಗೆ ಸ್ಪಂದಿಸಿರುವ ಸಚಿವರಾದ ಝಮೀರ್ ಅಹ್ಮದ್, ಈ ಸಮಸ್ಯೆ ಇಲಾಖೆಯ ಗಮನಕ್ಕೆ ಬಂದಿದೆ. ಈ ವರ್ಷದಿಂದಲೇ 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೌಲಭ್ಯಗಳನ್ನು ನೀಡಲು ಆರಂಭಿಸುತ್ತೇವೆ ಎಂದು ಭರವಸೆ ನೀಡಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಎಸ್ಐಓ ಮುಖಂಡರಾದ ಸೈಯ್ಯದ್ ಇಸ್ಮಾಯಿಲ್ ಕ್ವಾದ್ರಿ ಉಪಸ್ಥಿತರಿದ್ದರು.