ವಿವಿಧ ವಲಯಗಳಡಿ ದುಡಿಯುವ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಅವರಿಗೆ ಸುರಕ್ಷತೆ ಹಾಗೂ ವಿಶೇಷ ಸಾಮಾಜಿಕ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಧ್ಯೇಯೋದ್ದೇಶವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು.
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ನಗರದ ಸ್ಟೇಡಿಯಂ ರಸ್ತೆಯ ವಾಲ್ಮೀಕಿ ಭವನದಲ್ಲಿ ನಿನ್ನೆ ಏರ್ಪಡಿಸಿದ್ದ ಬಳ್ಳಾರಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ದೇಶದಲ್ಲಿ ಸುಮಾರು ಶೇ.90 ರಷ್ಟು ಕಾರ್ಮಿಕರು ವಿವಿಧ ವಲಯಗಳಲ್ಲಿ ಅಸಂಘಟಿತರಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು ಶೇ.85 ರಷ್ಟು ಕಾರ್ಮಿಕರು ಇದ್ದಾರೆ. ದೇಶದ ಶೇ.50 ರಷ್ಟು ಜಿಡಿಪಿಯು ಅಸಂಘಟಿತ ವಲಯಗಳ ಕಾರ್ಮಿಕರ ಆದಾಯದಿಂದ ಬರುತ್ತದೆ. ಹಾಗಾಗಿ ಅವರ ಸುರಕ್ಷತೆ ಮತ್ತು ಸಾಮಾಜಿಕ ಭದ್ರತೆಯೇ ನಮ್ಮ ಸರ್ಕಾರದ ಆದ್ಯತೆಯಾಗಿದೆ. ರಾಜ್ಯದಲ್ಲಿ 91 ಅಸಂಘಟಿತ ವರ್ಗಗಳಡಿಯ ಇ-ಶ್ರಮ ಪೋರ್ಟಲ್ ನಲ್ಲಿ ಸುಮಾರು 1.53 ಕೋಟಿ ಕಾರ್ಮಿಕರು ಕಂಡುಬಂದಿದ್ದಾರೆ. ನೋಂದಾಯಿಸಿಕೊಂಡ ಅಸಂಘಟಿತ ಕಾರ್ಮಿಕರಿಗೆ ಈ ಯೋಜನೆಯಡಿ ಅಪಘಾತ ಪರಿಹಾರ ಸೌಲಭ್ಯ ಅಪಘಾತದಿಂದ ಮರಣ ಹೊಂದಿದಲ್ಲಿ, ಸಂಪೂರ್ಣ ದುರ್ಬಲತೆ ಹೊಂದಿದಲ್ಲಿ ಅವರ ನಾಮನಿದೇರ್ಶಿತರಿಗೆ 1 ಲಕ್ಷ ರೂ.ಪರಿಹಾರ, ಶಾಶ್ವತ ದುರ್ಬಲತೆ ಹೊಂದಿದರೆ ಮತ್ತು ತಾತ್ಕಾಲಿಕ ದುರ್ಬಲತೆ ಹೊಂದಿದರೆ ಆಸ್ಪತ್ರೆ ಚಿಕಿತ್ಸೆ ವೆಚ್ಚಕ್ಕಾಗಿ ರೂ 1 ಲಕ್ಷವರೆಗೂ ಪರಿಹಾರ ಧನ ಸಹಾಯ ನೀಡಲಾಗುತ್ತದೆ” ಎಂದರು.

“ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯ ಸರ್ಕಾರದ ಪೆಟ್ರೋಲ್ ಹಾಗೂ ಡಿಸೇಲ್ನಿಂದ ರಾಜ್ಯಕ್ಕೆ ಬರುವ ತೆರಿಗೆ ಸಂಗ್ರಹದಲ್ಲಿ ಕನಿಷ್ಟ ಶೇ.1 ರಷ್ಟು ಹಣವನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ನೀಡಬೇಕೆಂದು ಕೋರಲಾಗಿದೆ. ಮುಖ್ಯಮಂತ್ರಿಗಳ ಒಪ್ಪಿಗೆ ದೊರೆತಲ್ಲಿ, 1,500 ಕೋಟಿ ರೂ. ಸಂಗ್ರಹವಾಗಲಿದೆ ಅದನ್ನು ನೇರವಾಗಿ ಸ್ಮಾರ್ಟ್ ಕಾರ್ಡ್ ಫಲಾನುಭವಿಗಳಿಗೆ ನೀಡಲಾಗುವುದು” ಎಂದು ಭರವಸೆ ನೀಡಿದರು.
“ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ರೂಪಿಸಿ ಅಧಿನಿಯಮವನ್ನು ಜಾರಿಗೊಳಿಸಿ 20 ವರ್ಗಗಳನ್ನು ಗುರುತಿಸಿ ಸೌಲಭ್ಯಗಳನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಯಡಿ ಅಪಘಾತದಿಂದ ಫಲಾನುಭವಿ ನಿಧನರಾದರೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ. ‘ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯ ಎಂದು ಜಾರಿ ಮಾಡಿರುವುದು ಉತ್ತಮ ಕೆಲಸವಾಗಿದೆ'” ಎಂದು ಜಿಲ್ಲಾ ಪೊಲೀಸ್ ಇಲಾಖೆಗೆ ಅಭಿನಂದಿಸಿದರು.
“ರಾಜ್ಯದ ಜನತೆಗೆ ವರ್ಷಕ್ಕೆ ನೇರವಾಗಿ 60 ಸಾವಿರ ಕೋಟಿ ರೂ. ನೀಡುತ್ತಿದ್ದು, ಐದು ವರ್ಷಕ್ಕೆ 3 ಲಕ್ಷ ಕೋಟಿ ನೀಡುವ ದೇಶದ ಏಕೈಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ನಮ್ಮ ಸರ್ಕಾರವಾಗಿದೆ. ‘ಕೆರೆಯ ನೀರನ್ನು ಕೆರೆಗೆ ಚೆಲ್ಲಿ’ ಎಂಬ ಗಾದೆಯಂತೆ ತೆರಿಗೆ ಹಣವನ್ನು ಜನರಿಗೆ ವಾಪಸ್ ನೀಡುತ್ತಿದ್ದೇವೆ. ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ತಲಾ 2 ಲಕ್ಷ ರೂ.ಗಳ ಅಪಘಾತ ಪರಿಹಾರ ಹಾಗೂ ಜೀವ ವಿಮಾ ಸೌಲಭ್ಯ ಸೇರಿದಂತೆ ಒಟ್ಟು 4 ಲಕ್ಷ ರೂ.ಗಳ ವಿಮಾ ಸೌಲಭ್ಯ ಒದಗಿಸುವ ‘ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ’ ಯನ್ನು ಜಾರಿಗೊಳಿಸಲಾಗಿದ್ದು, ಗಿಗ್ ಕಾರ್ಮಿಕರು ನೋಂದಾಯಿಸಿಕೊಳ್ಳಬಹುದಾಗಿದೆ” ಎಂದು ತಿಳಿಸಿದರು.
ಇದನ್ನೂ ಓದಿ: ಬಳ್ಳಾರಿ | ಅಸಂಘಟಿತ ಚಾಲಕರಿಗೆ ಭದ್ರತಾ ಯೋಜನೆ ಜಾರಿಗೊಳಿಸಲು ಹುಂಡೇಕರ್ ರಾಜೇಶ್ ಆಗ್ರಹ

“ದೇಶದಲ್ಲಿಯೇ ಪ್ರಥಮ ಬಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಆಶಾ ದೀಪ ಕಾರ್ಯಕ್ರಮ ಆರಂಭಿಸಲಾಗಿದ್ದು, ಇದರಲ್ಲಿ ಯಾವುದೇ ಉದ್ದಿಮೆದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ಅಥವಾ ಅಪ್ರೆಂಟಿಸ್ ತರಬೇತಿ ನೀಡಿದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ 2 ವರ್ಷದವರೆಗೆ ತಿಂಗಳ 7 ಸಾವಿರ ರೂ.ನಂತೆ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದಡಿ ಸಹಾಯಧನ ನೀಡಲಾಗುವುದು. ಈ ನಿಟ್ಟಿನಲ್ಲಿ ತೋರಣಗಲ್ ನ ಕಂಪನಿಗೆ 19 ಲಕ್ಷ ರೂ. ಚೆಕ್ ವಿತರಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ವೇತನವನ್ನು ಸೊಸೈಟಿ ರಚಿಸಿ ಜಿಲ್ಲಾಧಿಕಾರಿಗಳ ಮೂಲಕ ಪಾವತಿಸುವ ಕಾರ್ಯ ಯೋಜನೆ ರೂಪಿಸಲಾಗಿದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಬಿ.ಎಂ.ನಾಗರಾಜ, ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಜೆ.ಎಸ್.ಆಂಜನೇಯಲು, ಜಿ ಕೆ.ಇ.ಚಿದಾನಂದಪ್ಪ, ಡಾ.ಎಚ್.ಎನ್.ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಜಂಟಿ ಕಾರ್ಯದರ್ಶಿ ಡಾ.ಎಸ್.ಬಿ ರವಿಕುಮಾರ, ಡಾ.ಅವಿನಾಶ್ ನಾಯಕ್, ಸಿದ್ದಪ್ಪ ಖೈನೂರು ಸೇರಿದಂತೆ ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸದಸ್ಯರು, ಕಾರ್ಮಿಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಇತರರು ಇದ್ದರು.