- ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ವಾರಾಂತ್ಯದಲ್ಲಿಯೂ ತೆರೆಯಲು ಅನುವು
- ಐಎಎಸ್, ಕೆಎಎಸ್ ಸೇರಿದಂತೆ ಇತರೆ ಪರೀಕ್ಷೆಗಳಿಗೆ ಪೂರಕವಾಗುವ ವ್ಯವಸ್ಥೆ
ಪ್ರಬುದ್ಧ ಸಮಾಜ ನಿರ್ಮಾಣದ ಗುರಿಯೊಂದಿಗೆ ಗ್ರಾಮೀಣ ಗ್ರಂಥಾಲಯಗಳನ್ನು ಆಧುನೀಕರಣಗೊಳಿಸಿ ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಸಾರ್ವಜನಿಕರಲ್ಲಿ ವಿದ್ಯೆ, ಜ್ಞಾನ, ಓದಿನ ಬಗೆಗೆ ಅಭಿರುಚಿ ಬೆಳೆಸಲು ಮುಕ್ತ ಸಾರ್ವಜನಿಕ ವ್ಯವಸ್ಥೆಯಾದ ಗ್ರಾಮ ಪಂಚಾಯತಿ ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳಾಗಿ ಸಮಾಜದ ಜ್ಞಾನಾರ್ಜನೆಗೆ ಅರ್ಥಪೂರ್ಣ ಸಾಧನಗಳಾಗಿ ಕಾರ್ಯ ನಿರ್ವಹಿಸುತ್ತಿದೆ. ಇವುಗಳನ್ನು ಆಧುನೀಕರಣಗೊಳಿಸಿ ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದಿದ್ದಾರೆ.
ಬಸವಣ್ಣನವರ ‘ಅರಿವೇ ಗುರು’ ತತ್ವ ನಮ್ಮ ಸಮಾಜದ ಪ್ರತಿಯೊಬ್ಬರಲ್ಲೂ ಮಾರ್ದನಿಸಬೇಕು. ಅರಿವಿನೆಡಗಿನ ಸಮಾಜದ ಪ್ರತಿಯೊಬ್ಬರ ಪ್ರಯಾಣದ ಸಾಥಿಯಾಗಿ ನಮ್ಮ ಇಲಾಖೆ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ಆ ಮೂಲಕ ಡಿಜಿಟಲ್ ಕಲಿಕಾ ಸಾಮಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಂವಿಧಾನದ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯಗಳನ್ನು ಒದಗಿಸಲು ವಿಶೇಷ ಕಾರ್ಯಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ ಎಂದು ಸಚಿವ ಖರ್ಗೆ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಸಹಾಯವಾಗುವಂತೆ ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ವಾರಾಂತ್ಯದಲ್ಲಿಯೂ ತೆರೆಯಲು ಅನುವು ಮಾಡಿಕೊಡಲಾಗುವುದು. ಇದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಪ್ರಬುದ್ಧ ಸಮಾಜ ನಿರ್ಮಾಣದತ್ತ ಇರಿಸಿರುವ ಪ್ರಮುಖ ಹೆಜ್ಜೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಇನ್ನೊಮ್ಮೆ ಹೀಗಾದ್ರೆ, ವಾರ್ಡನ್ಗೆ ಚೆನ್ನಾಗಿ ಬಾರಿಸಿ : ಚಿತ್ರದುರ್ಗ ಶಾಸಕರ ಪ್ರಚೋದನೆ; ವಿಡಿಯೋ ವೈರಲ್
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಈ ಕಾರ್ಯದ ಜೊತೆಯಾಗಿ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಮಂಡಳಿ (KRIDL) ತನ್ನ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ (CSR) ಅನುದಾನದಡಿ ಕಲಬುರಗಿ ಜಿಲ್ಲೆಯ ಎಲ್ಲಾ 261 ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗುವಂತಹ ತಲಾ 41 ಕಲಿಕಾ ಪುಸ್ತಕಗಳನ್ನು ಒದಗಿಸಲು ಮುಂದೆ ಬಂದಿದೆ. ಇದಕ್ಕಾಗಿ 26 ಲಕ್ಷ ರೂ.ಗಳನ್ನು ಕಲಬುರಗಿ ಜಿಲ್ಲಾ ಪಂಚಾಯತಿಗೆ ನೀಡುತ್ತಿದೆ. ಅಧ್ಯಯನ ಪುಸ್ತಕಗಳು ಐಎಎಸ್, ಕೆಎಎಸ್ ಸೇರಿದಂತೆ ಪೊಲೀಸ್ ಕಾನ್ಸ್ಟೆಬಲ್, ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರೂಪ್ ಸಿ, ಎಸ್ ಎಸ್ ಸಿ, ಐಬಿಪಿಎಸ್, ಆರ್ ಆರ್ ಬಿ ಪರೀಕ್ಷೆಗಳಿಗೆ ಪೂರಕವಾಗಲಿವೆ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.