ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಶನಿವಾರ ತಡರಾತ್ರಿ ಆಘಾತಕಾರಿ ಘಟನೆಯೊಂದು ನಡೆದಿದೆ. ಚಿನ್ನಾಭರಣ ಮಳಿಗೆಯೊಂದಕ್ಕೆ ದರೋಡೆಗೆ ಬಂದಿದ್ದ ಕಿಡಿಗೇಡಿಗಳು, ತಮ್ಮ ಕೃತ್ಯವನ್ನು ನೋಡಿದ ವ್ಯಕ್ತಿಯೊಬ್ಬರನ್ನು ಕೊಲೆಗೈದು ಪರಾರಿಯಾಗಿದ್ದಾರೆ.
ಕೊಲೆಯಾದ ವ್ಯಕ್ತಿ ಕಿರುಗಾವಲು ಗ್ರಾಮದ ಮಹದೇಶ್ವರ ಹೋಟೆಲ್ನ ಮಾಲೀಕ ಮಾದಪ್ಪ (75).
ಗ್ರಾಮದ ಮುಖ್ಯರಸ್ತೆಯಲ್ಲಿರುವ ಮಹಾಲಕ್ಷ್ಮೀ ಜ್ಯುವೆಲರ್ಸ್ಗೆ ರಾತ್ರಿ 2 ಗಂಟೆ ಸುಮಾರಿಗೆ ದರೋಡೆಕೋರರು ನುಗ್ಗಿದ್ದಾರೆ. ಗ್ಯಾಸ್ ಕಟ್ಟರ್ ಬಳಸಿ ಅಂಗಡಿಯ ಬಾಗಿಲನ್ನು ಒಡದು ಒಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಶಬ್ದ ಕೇಳಿ ಬಂದ ಮಾದಪ್ಪನವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ, ಕತ್ತು ಹಿಸುಕಿ ಕೊಲೆಗೈದು ತಪ್ಪಿಸಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್ಎಸ್ಎಸ್ಅನ್ನು ಹೊಗಳುವ ದರ್ದು ಏನು?
ದರೋಡೆಕೋರರು ಅಂಗಡಿಯಿಂದ 150 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ, ಹಿತ್ತಾಳೆ ಒಡವೆಗಳು ಹಾಗೂ ಸುಮಾರು 30,000 ರೂ. ಮೌಲ್ಯದ ಕೃತಕ ಚಿನ್ನದ ಆಭರಣಗಳನ್ನು ಕದ್ದಿದ್ದಾರೆ. ಜೊತೆಗೆ, ಸಿಸಿಟಿವಿ ಕ್ಯಾಮರಾದ ಡಿವಿಆರ್ ಘಟಕವನ್ನೂ ಕಿತ್ತುಕೊಂಡು ಹೋಗಿದ್ದಾರೆ ಎಂದು ಅಂಗಡಿಯ ಮಾಲೀಕ ಶೇಷರಾವ್ ಹೇಳಿದ್ದಾರೆ.
ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ವಿ. ಕೃಷ್ಣಪ್ಪ, ಸಿಪಿಐ ಬಿ.ಎಸ್. ಶ್ರೀಧರ್, ಮತ್ತು ಪಿಎಸ್ಐ ಡಿ. ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತಪಾಸಣೆ ಕೈಗೊಂಡಿದ್ದಾರೆ.
