ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ತಿಳಿಸಿದ್ದಾರೆ.
ಸೋಮವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾದಕ ವ್ಯಸನ ಮುಕ್ತ ಸಮಾಜದ ಕುರಿತು ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.
ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ ಎರಡು ತಿಂಗಳ ಸಮಗ್ರ ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದೆ. ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನಿರಂತರ ಜಾಗೃತಿ, ಅಭಿಯಾನಗಳನ್ನು ಕೈಗೊಳ್ಳಲಾಗುತ್ತಿದೆ. ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದ್ದು, ಆಗಸ್ಟ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಡೆಯುವ ಈ ಅಭಿಯಾನದ ಮುಖ್ಯ ಉದ್ದೇಶ ಎಂದರೆ ಹೆಚ್ಚುತ್ತಿರುವ ಮಾದಕ ದ್ರವ್ಯ ದುರುಪಯೋಗ ಮತ್ತು ಅದರ ದುಷ್ಪರಿಣಾಮಗಳನ್ನು ಪರಿಹರಿಸುವತ್ತ ಗಮನಹರಿಸಬದಾಗಿದೆ ಎಂದರು.
ಈ ಬಗ್ಗೆ ವ್ಯಾಪಕವಾದ ಸಾರ್ವಜನಿಕ ತೊಡಗಿಸಿಕೊಳ್ಳುವಿಕೆ ಮತ್ತು ಶಿಕ್ಷಣವನ್ನು ನೀಡಲು ರಾಜ್ಯದ ಪ್ರತಿ ಗ್ರಾಮ ಪಂಚಾಯತ್ನಿಂದ ಎಲ್ಲಾ ಆಡಳಿತ ಹಂತಗಳಲ್ಲಿ ಸರಣಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನವನ್ನು ರಾಜ್ಯಾದ್ಯಂತ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಇತರೆ ಸಮುದಾಯದೊಂದಿಗೆ ನಡೆಸಲಾಗುತ್ತಿರುವುದು ಮತ್ತೊಂದು ವಿಶೇಷವಾಗಿದೆ.
ಇದನ್ನೂ ಓದಿ: ಎಫ್ಎಸ್ಎಲ್ ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಶೋಧ ಕಾರ್ಯ ಸ್ಥಗಿತ: ಗೃಹ ಸಚಿವ ಡಾ. ಜಿ ಪರಮೇಶ್ವರ್
ಮಾದಕ ದ್ರವ್ಯ ಬಳಕೆ ಮತ್ತು ವ್ಯಸನದಿಂದ ಉಂಟಾಗುವ ಹಿಂಸೆ, ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಸಮಗ್ರ ಜಾಗೃತಿ ಮೂಡಿಸಲಾಗುತ್ತದೆ. ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಮತ್ತು ಅವುಗಳ ದುಷ್ಪರಿಣಾಮಗಳ ಬಗ್ಗೆ ಸಮುದಾಯಗಳಿಗೆ ತಿಳಿಸಲು, ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.
ಅಭಿಯಾನದಡಿ ವಿಶೇಷ ಕಾರ್ಯಕ್ರಮಗಳು: ಅಭಿಯಾನವನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲು, ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಸ್ವಸಹಾಯ ಗುಂಪುಗಳ ಮೂಲಕ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಬೀದಿ ನಾಟಕಗಳು, ಜಾಗೃತಿ ರ್ಯಾಲಿಗಳು, ಉಪನ್ಯಾಸಗಳು, ಕಾರ್ಯಾಗಾರಗಳು, ಕರಪತ್ರಗಳು ಮತ್ತು ಪೋಸ್ಟರ್ಗಳು, ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಅಭಿಯಾನಗಳು, ಆರೋಗ್ಯ ಸಲಹಾ ಶಿಬಿರಗಳು, ಕಿರುಚಿತ್ರಗಳ ಪ್ರದರ್ಶನಗಳು ಪ್ರಮಾಣ ವಚನ ಸಮಾರಂಭಗಳು ಈ ಎರಡು ತಿಂಗಳ ಅಭಿಯಾನದಲ್ಲಿ ಸೇರಿವೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಯರಾಮ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಉಪಸ್ಥಿತರಿದ್ದರು.
