ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ದೀನ ದಲಿತರ ಹಿಂದುಳಿದ ವರ್ಗಗಳ, ಬಡವರ ಪರವಾಗಿ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಇತಿಹಾಸದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼದೇವರಾಜ ಅರಸು ಅವರ ಆಡಳಿತಾವಧಿಯಲ್ಲಿ ಜಾರಿಗೆ ತಂದ ಉಳುವವನೇ ಭೂಮಿಯ ಒಡೆಯ ಕಾಯ್ದೆಯಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಆಧಾರ ಸ್ತಂಭವಾಗಿದೆʼ ಎಂದರು.
ʼವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ಒದಗಿಸಲು ಅವರು ಹೋರಾಡಿದ ಪರಿಣಾಮವಾಗಿ, ಇಂದಿನ ಹಿಂದುಳಿದ ವಿದ್ಯಾರ್ಥಿನಿಲಯಗಳಲ್ಲಿ ಸಕಲ ಸೌಲಭ್ಯಗಳು ಲಭ್ಯವಾಗುತ್ತಿವೆ. ಈ ವಸತಿ ನಿಲಯಗಳ ವಾತಾವರಣದಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಉತ್ತಮ ಸಾಧನೆಗಳನ್ನು ಮಾಡಿದ್ದಾರೆ. ವಿದ್ಯಾರ್ಥಿ ನಿಲಯದಲ್ಲಿ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಗುರಿ ಸಾಧಿಸಲು ಮುಂದಾಗಬೇಕು. ದೇವರಾಜ ಅರಸು ಅವರು ಯುವ ಪೀಳಿಗೆ ಪ್ರೇರಣಾ ಶಕ್ತಿಯಾಗಿದ್ದಾರೆʼ ಎಂದು ತಿಳಿಸಿದರು.

ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಅಪ್ಪುಗೆರೆ ಸೋಮಶೇಖರ್ ಅವರು ಅತಿಥಿ ಉಪನ್ಯಾಸ ನೀಡಿʼ ʼಜನನಾಯಕ, ಬಡವರ ಧ್ವನಿ, ಹಿಂದುಳಿದ ವರ್ಗಗಳ ಹರಿಕಾರ ಎಂದೇ ಖ್ಯಾತರಾಗಿದ್ದ ದೇವರಾಜ ಅರಸು ಅವರು ಉಳುವವನಿಗೆ ಭೂಮಿ, ಹಾವನೂರು ಆಯೋಗದಂತಹ ಅವರ ಪ್ರಮುಖ ನಿರ್ಧಾರಗಳ ಪ್ರತಿಫಲ ಇಂದಿನ ಪೀಳಿಗೆಗೆ ಸಿಗುತ್ತಿದೆ. ಜೀತ ಪದ್ದತಿ ನಿರ್ಮೂಲನೆ ಕಾಯ್ದೆ ಜಾರಿಗೆ ತಂದು ಶೋಷಿತ ವರ್ಗಗಳನ್ನು ಉಳ್ಳವರ ಕೈಯಿಂದ ವಿಮೋಚನೆಗೊಳಿಸಿದರು. ಉಳುವವನೇ ಭೂಮಿ ಒಡೆಯ ಕಾನೂನಿನ ಅನುಷ್ಠಾನದ ಮೂಲಕ ಗೇಣಿದಾದರರ ಹಿತರಕ್ಷಿಸಿದರುʼ ಎಂದರು.
ʼಪ್ರತಿಯೊಂದು ಜಿಲ್ಲಾ, ತಾಲ್ಲೂಕುಗಳಲ್ಲಿ ಹಿಂದುಳಿದ ವರ್ಗಗಳ ವಸತಿ ನಿಲಯಗಳನ್ನು ಪ್ರಾರಂಭಿಸಿದರು. ಶಿಕ್ಷಣ ಮತ್ತು ಉದ್ಯೋಗದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಗಾಗಿ ಹಾವನೂರು ಆಯೋಗ ಜಾರಿಗೆ ತಂದು ಸಮಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದು, ಇಡೀ ದೇಶಕ್ಕೆ ಮಾದರಿಯಾದರು. ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೂ ಸರ್ಕಾರದ ಸವಲತ್ತುಗಳನ್ನು ತಲುಪಿಸಲು ಪರಿಣಾಮಕಾರಿ ಆಡಳಿತ ನಡೆಸಿದ ಧೀಮಂತ ನಾಯಕರಾಗಿದ್ದರುʼ ಎಂದರು.
ʼಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಿ ಬಹುದಿನದ ಕನ್ನಡಿಗರ ಕನಸು ನನಸಾಗಿಸಿದರು. ಇಂದಿರಾ ಗಾಂಧಿ ಅವರ ʼಗರೀಬಿ ಹಠಾವೋʼ ಮತ್ತು 20 ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೆ ತರುವುದರ ಮೂಲಕ ಬಡವರ ಜೀವನಕ್ಕೆ ಆಶಾಕಿರಣರಾದರು. ವೃಕ್ಷ ಸಂರಕ್ಷಣಾ ಕಾಯ್ದೆ ತರುವುದರ ಮೂಲಕ ಪರಿಸರ ರಕ್ಷಣೆ ಬಗ್ಗೆ ಅರಿವು ಮೂಡಿಸಿದ್ದಾರೆʼ ಎಂದರು.
ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್ ಮಾತನಾಡಿ, ʼಕರ್ನಾಟಕ ರಾಜ್ಯ ಕಂಡಂತಹ ಅಪರೂಪದ ಮತ್ತು ಸಮಾಜಮುಖಿ ಆಡಳಿತ ನೀಡಿದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ, ಸಾಮಾಜಿಕ ನ್ಯಾಯಕ್ಕಾಗಿ, ದೀನ ದಲಿತರ ಏಳಿಗೆಗಾಗಿ ಶ್ರಮಿಸಿದ್ದಾರೆ. ಸಮಾಜದ ಎಲ್ಲಾ ಜನರು ಒಂದು ಗೂಡಿ ಮತ್ತು ಎಲ್ಲಾ ವರ್ಗಗಳ ನಡುವೆ ಸಮಾನತೆ ತಂದುಕೊಟ್ಟಿದ್ದಾರೆʼ ಎಂದರು.
ಇದನ್ನೂ ಓದಿ : ಅಲೆಮಾರಿಗಳಿಗೆ ಅನ್ಯಾಯ; ಸರ್ಕಾರದ ವಿರುದ್ಧ ಭುಗಿಲೆದ್ದ ಜನಾಕ್ರೋಶ
ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಂಗೀತಾ ಬಿರಾದಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜೆ.ಎಂ.ಕರಿಬಸಮ್ಮ, ಮುಖಂಡರಾದ ಅಶೋಕ ಶೇರಿಕರ್, ನೀಲಕಂಠ ಸೇರಿದಂತೆ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
https://shorturl.fm/NLyEk