ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ ಪದಚ್ಯುತಿಗೊಳಿಸಲು ಅನುವು ಮಾಡಿಕೊಡುವ ಮಸೂದೆ ಸೇರಿದಂತೆ ಮೂರು ವಿವಾದಾತ್ಮಕ ಮಸೂದೆಗಳನ್ನು ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಬುಧವಾರ ಮಂಡಿಸಿದರು.
ಸದನದಲ್ಲಿ ವಿಪಕ್ಷಗಳ ಸಂಸದರ ಭಾರೀ ಗದ್ದಲ ಮತ್ತು ಘೋಷಣೆಗಳ ನಡುವೆ ಅಮಿತ್ ಶಾ ಮೂರು ಮಸೂದೆಗಳನ್ನು ಮಂಡಿಸಿದರು.
ಸಂವಿಧಾನದ (130ನೇ ತಿದ್ದುಪಡಿ) ಮಸೂದೆ- 2025 ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್ವಿಂಗಡನೆ (ತಿದ್ದುಪಡಿ) ಮಸೂದೆ- 2025, ಕೇಂದ್ರಾಡಳಿತ ಪ್ರದೇಶಗಳ ಸರಕಾರ (ತಿದ್ದುಪಡಿ) ಮಸೂದೆ- 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆಯನ್ನು ಅಮಿತ್ ಶಾ ಸದನದಲ್ಲಿ ಮಂಡಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂವಿಧಾನ (130ನೇ ತಿದ್ದುಪಡಿ) ಮಸೂದೆ 2025, ಕೇಂದ್ರಾಡಳಿತ ಸರ್ಕಾರ (ತಿದ್ದುಪಡಿ) ಮಸೂದೆ ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್ರಚನೆ (ತಿದ್ದುಪಡಿ) ಮಸೂದೆ- 2025 ಅನ್ನು ಮಂಡಿಸಿ ಈ ಮೂರೂ ಮಸೂದೆಗಳನ್ನು ಹೆಚ್ಚಿನ ಪರಿಶೀಲನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಒಪ್ಪಿಸಬೇಕು ಎಂದು ಮನವಿ ಮಾಡಿದರು.
ಮೂರು ಮಸೂದೆಗಳ ಮಂಡನೆ ಬೆನ್ನಲ್ಲೇ ಲೋಕಸಭೆಯಲ್ಲಿ ಕೋಲಾಹಲ ಸೃಷ್ಟಿಯಾಯಿತು. ವಿರೋಧ ಪಕ್ಷದ ನಾಯಕರು ಮಸೂದೆಯ ಪ್ರತಿಗಳನ್ನು ಹರಿದು ಅಮಿತ್ ಶಾ ಕಡೆಗೆ ಎಸೆದರು. ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ವಿರೋಧ ಪಕ್ಷಗಳ ವರ್ತನೆಗೆ ಸ್ಪೀಕರ್ ಓಂ ಬಿರ್ಲಾ ಆಕ್ರೋಶ ಹೊರ ಹಾಕಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಳೆ ಸಮಸ್ಯೆಯಾಗಿದ್ದು ಯಾಕೆ ಮತ್ತು ಯಾರಿಗೆಲ್ಲ ಅನುಕೂಲ?
ಅಮಿತ್ ಶಾ ಅವರನ್ನು ಬಂಧಿಸಿದಾಗ ಅವರು ತಮ್ಮ ನೈತಿಕತೆಯನ್ನು ಪ್ರದರ್ಶಿಸಿದ್ದಾರೆಯೇ ಎಂದು ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನನ್ನ ವಿರುದ್ಧ ಆರೋಪಗಳು ಕೇಳಿ ಬಂದಾಗ, ಬಂಧನಕ್ಕೂ ಮುನ್ನ ನಾನು ನೈತಿಕವಾಗಿ ರಾಜೀನಾಮೆ ನೀಡಿದ್ದೇನೆ. ನ್ಯಾಯಾಲಯದಿಂದ ನಾನು ನಿರಪರಾಧಿ ಎಂದು ಸಾಬೀತಾಗುವವರೆಗೆ ನಾನು ಯಾವುದೇ ಸಾಂವಿಧಾನಿಕ ಹುದ್ದೆಯನ್ನು ವಹಿಸಿಕೊಂಡಿಲ್ಲ ಎಂದು ಹೇಳಿದರು.
ಮಸೂದೆಯಲ್ಲಿರುವ ಅಂಶಗಳು
ಗಂಭೀರ ಸ್ವರೂಪದ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಅಥವಾ ರಾಜ್ಯಗಳ ಸಚಿವರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿದಾಗ ಅಂತಹವರನ್ನು ಹುದ್ದೆಗಳಿಂದ ಪದಚ್ಯುತಗೊಳಿಸುವ ಪ್ರಕ್ರಿಯೆಗೆ ಕಾನೂನು ಚೌಕಟ್ಟು ವಿಧಿಸಲು ಈ ಮಸೂದೆಗಳನ್ನು ರೂಪಿಸಲಾಗಿದೆ.
30 ದಿನಗಳ ಕಾಲ ನಿರಂತರ ಬಂಧನದಲ್ಲಿದ್ದವರನ್ನು 31ನೇ ದಿನ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸಲಾಗುತ್ತದೆ.
ಬಂಧನದಿಂದ ಬಿಡುಗಡೆ ಆದವರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿ ಅಥವಾ ಸಚಿವರನ್ನಾಗಿ ನೇಮಿಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಇದಕ್ಕಾಗಿ ಸಂವಿಧಾನದ 75ನೇ ವಿಧಿಗೆ ಸೆಕ್ಷನ್ 5(ಎ) ಅನ್ನು ಸೇರ್ಪಡೆ ಮಾಡಲಾಗುತ್ತಿದೆ
ಈ ನಿಯಮದ ಪ್ರಕಾರ, ಹಾಲಿ ಜಾರಿಯಲ್ಲಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾದ ಅಪರಾಧಕ್ಕಾಗಿ ಸತತ 30 ದಿನಗಳಿಂದ ಬಂಧನದಲ್ಲಿರುವ ಅಥವಾ ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಒಳಗಾದ
ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಪ್ರಧಾನಿಯು 31ನೇ ದಿನದಂದು ರಾಷ್ಟ್ರಪತಿಯವರಿಗೆ ಶಿಫಾರಸು ಮಾಡಬೇಕು.
ಪ್ರಧಾನಿಯು, ಶಿಫಾರಸು ಮಾಡದಿದ್ದರೂ ಅಂತಹ ಸಚಿವರು 31ನೇ ದಿನದಂದು ಅಧಿಕಾರ ಕಳೆದುಕೊಳ್ಳುತ್ತಾರೆ. ಇದೇ ನಿಯಮ ರಾಜ್ಯಗಳಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಅನ್ವಯಿಸಲಿದೆ. ರಾಜ್ಯಗಳಲ್ಲಿ ರಾಜ್ಯಪಾಲರು ಪದಚ್ಯುತಗೊಳಿಸುವ ಅಧಿಕಾರ ಹೊಂದಿರುತ್ತಾರೆ.
ದೆಹಲಿ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ ರಾಷ್ಟ್ರಪತಿಯವರು ಹಾಗೂ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಅವರು ಸಕ್ಷಮ ಪ್ರಾಧಿಕಾರಿಗಳಾಗಿರುತ್ತಾರೆ.
ಹಾಲಿ ಇರುವ ನಿಯಮಗಳ ಅನ್ವಯ, ಯಾವುದೇ ಜನಪ್ರತಿನಿಧಿ ಕ್ರಿಮಿನಲ್ ಪ್ರಕರಣಗಳಲ್ಲಿ 2 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಗೆ ಗುರಿಯಾದರೆ ಮಾತ್ರವೇ ತಮ್ಮ ಜನಪ್ರತಿನಿಧಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ. ಜೊತೆಗೆ ಶಿಕ್ಷೆ ಮುಗಿದ ಬಳಿಕ ಮತ್ತೆ 5 ವರ್ಷ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.