ದೇವರಿಗೆ ಜಾತಿ, ಧರ್ಮವಿಲ್ಲ; ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಜಾತಿ, ಧರ್ಮವಿಲ್ಲ. ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

‘ಚಾಮುಂಡಿ ಬೆಟ್ಟ ಬರೀ ಹಿಂದೂಗಳ ಆಸ್ತಿಯಲ್ಲ ಎನ್ನುವ ಹೇಳಿಕೆಗೆ ಸಂಸದ ಯದುವೀರ ಹಾಗೂ ಪ್ರತಿಪಕ್ಷಗಳ’ ಟೀಕೆಯ ಬಗ್ಗೆ ಕೇಳಿದಾಗ ಪ್ರತಿಕ್ರಿಯೆ ನೀಡಿದ ಅವರು, “ಚಾಮುಂಡೇಶ್ವರಿ ಎಲ್ಲ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು.‌ ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ‌ ಮಾಡುವ ಅಗತ್ಯವಿಲ್ಲ” ಎಂದರು.

ಎಲ್ಲಿದೆ ನಿಯಮ ತೋರಿಸಿ?

“ನಾಡದೇವಿಯ ದೇವಸ್ಥಾನಕ್ಕೆ ಕೇವಲ ಹಿಂದುಗಳು‌ ಮಾತ್ರ ಬರಬೇಕು ಎನ್ನುವ ನಿಯಮವಿದೆಯೇ? ಒಂದಷ್ಟು ಸಮುದಾಯದವರು ಬೌದ್ಧ, ಕ್ರಿಶ್ಚಿಯನ್, ಇಸ್ಲಾಂ ಧರ್ಮಕ್ಕೆ ಸೇರಿಕೊಂಡಿದ್ದಾರೆ. ಇವರನ್ನು ದೇವಾಲಯಕ್ಕೆ ಬರಬೇಡಿ ಎಂದು ಹೇಳಲು ಆಗುತ್ತದೆಯೇ? ತಂದೆ-ತಾಯಿ ಬೇರೆ, ಬೇರೆ ಧರ್ಮಕ್ಕೆ ಸೇರಿರುತ್ತಾರೆ. ಇಂತಹ ಮಕ್ಕಳ ಆಚರಣೆ ಬೇರೆ,‌‌ ಬೇರೆ ಇರುತ್ತದೆ. ಬ್ಯಾರಿಗಳು ನಮಗಿಂತ ಅದ್ಭುತವಾಗಿ ಕನ್ನಡ ಮಾತನಾಡುತ್ತಾರೆ. ಅವರನ್ನು ಮುಸ್ಲಿಮರು ಎಂದು ತಳ್ಳಿಬಿಡಲು ಆಗುತ್ತದೆಯೇ? ಮುಸ್ಲಿಮರು ಶ್ಲೋಕವೊಂದನ್ನು ಪಠಣ ಮಾಡುವ ವಿಡಿಯೋ ನೋಡಿದೆ. ಅವರು ಸಹ ನಮ್ಮ ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ” ಎಂದು ಹೇಳಿದರು.

“ಮಹಾರಾಜರ ಆಳ್ವಿಕೆ ಕಾಲದಲ್ಲಿಯೂ ವಿದೇಶಗಳಿಂದ ಅತಿಥಿಗಳನ್ನು ದಸರಾಕ್ಕೆ ಆಹ್ವಾನ ಮಾಡುತ್ತಿದ್ದರು. ವಿದೇಶಿ ಧರ್ಮಿಯರೂ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಚರ್ಚ್,‌ ಮಸೀದಿ, ಜೈನ ಬಸದಿ, ಗುರುದ್ವಾರ ಹೀಗೆ ಎಲ್ಲ ಕಡೆ ನಮ್ಮನ್ನು ಒಳಗೆ ಬಿಡುವುದಿಲ್ಲವೇ. ಈ ಹಿಂದೆ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ ಮಾಡಿದರು. ಆದರೆ ಈಗ ಬಾನು ಮುಷ್ತಾಕ್ ಅವರು ಬೆಟ್ಟ ಹತ್ತಬಾರದು,‌ ಉದ್ಘಾಟನೆ ಮಾಡಬಾರದು ಎನ್ನುವುದು ಎಷ್ಟು ಸರಿ” ಎಂದು ಪ್ರಶ್ನಿಸಿದರು.

ಸಂಸದ ಯದುವೀರ್ ಅವರು ತಮ್ಮ ಹೇಳಿಕೆಗೆ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ಅವರು ಈಗ ಬಿಜೆಪಿ ಜೊತೆ ಸೇರಿಕೊಂಡು ಬಿಟ್ಟಿದ್ದಾರಲ್ಲ, ಆದ ಕಾರಣಕ್ಕೆ ಇತಿಹಾಸ ಮರೆತು ಬಿಟ್ಟಿದ್ದಾರೆ. ನಾನೊಬ್ಬ ಹಿಂದೂ. ಆ ಚಾಮುಂಡಿ ತಾಯಿಗೆ ಎರಡು ಸಾವಿರ ಕಾಣಿಕೆ ನೀಡಿ ನಾನು ಹಾಗೂ ಸಿದ್ದರಾಮಯ್ಯ ಅವರು ಈ ಎರಡು ಸಾವಿರವನ್ನು ಎಲ್ಲಾ ತಾಯಂದಿರಿಗೂ ಕೊಡುವ ಶಕ್ತಿ ನೀಡುವಂತೆ ಪ್ರಾರ್ಥನೆ ಸಲ್ಲಿಸಿದೆವು. ಆ ತಾಯಿ ನಮಗೆ ಆಶೀರ್ವಾದ ಮಾಡಿದ್ದಾಳೆ.‌ ಈಗ ಕೇವಲ ಹಿಂದೂಗಳಿಗೆ ಮಾತ್ರ ಹಣ ನೀಡುತ್ತಾ ಇದ್ದೇವಾ? ಪಾರ್ಸಿ, ಸಿಖ್, ಮುಸ್ಲಿಂ, ಜೈನ, ಬೌದ್ಧರಿಗೆ ಹಣ ನೀಡುತ್ತಿಲ್ಲವೇ?” ಎಂದರು.

ಹಿಂದುತ್ವದ ಮೇಲಿನ ದಾಳಿ ಹಾಗೂ ಬಾನು ಮುಷ್ತಾಕ್ ಆಯ್ಕೆಯ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನಾವು ಆಚರಣೆ ಮಾಡುವಷ್ಟು ಹಿಂದೂ ಪದ್ಧತಿಯನ್ನು ಅವರೆಲ್ಲಿ (ಬಿಜೆಪಿ) ಆಚರಣೆ ಮಾಡುತ್ತಾರೆ. ನಾನೇನು ಯಾರ ವಿರುದ್ಧವೂ ಇಲ್ಲ, ಯಾರನ್ನೂ ಓಲೈಕೆ ಮಾಡುತ್ತಿಲ್ಲ. ಎಲ್ಲರಿಗೂ ಅವಕಾಶ ಸಿಗಬೇಕು. ಯಾವ ಹಿಂದೂ ದೇವಸ್ಥಾನದಲ್ಲಿ ಬೇರೆ ಧರ್ಮದವರು ಬರಬಾರದು ಎಂದು ಹೇಳಿರುವ ಉದಾಹರಣೆ ಇದ್ದರೆ ತೋರಿಸಿ” ಎಂದು ಹೇಳಿದರು.

ಬಿಜೆಪಿ ರಾಜಕೀಯ ಅಜೆಂಡಾ

“ಇದು ಬಿಜೆಪಿಯ ರಾಜಕೀಯ ಅಜೆಂಡಾ. ಇಂತಹ ಬಿಜೆಪಿ ಅಲ್ಪಸಂಖ್ಯಾತ ಇಲಾಖೆಯನ್ನು ಮುಚ್ಚಿಬಿಡಲಿ. ನಮ್ಮ ದೇಶದ ನಿವಾಸಿಗಳೆಲ್ಲರನ್ನು ನಾವು ಒಪ್ಪಿಕೊಳ್ಳಲೇ ಬೇಕು. ಅವರನ್ನು ದೇಶದಿಂದ ಓಡಿಸಿ ಬಿಡಲು ಆಗುತ್ತದೆಯೇ?” ಎಂದರು.

ಜೆಡಿಎಸ್ ತನ್ನ ಸಾಮಾಜಿಕ ‌ಜಾಲತಾಣದಲ್ಲಿ ನಕಲಿ ಪತ್ರ ಹರಿಬಿಟ್ಟಿರುವ ಬಗ್ಗೆ ಕೇಳಿದಾಗ, “ಅವರು ಯಾವತ್ತಿದ್ದರೂ ಫೇಕ್. ಜೆಡಿಎಸ್ ಎಂದಿಗೂ ಫೇಕ್ ಕೆಲಸಗಳನ್ನೇ ಮಾಡುವುದು. ನಾನು ಹೆದರಿಕೊಂಡು ಬಿಟ್ಟೆ, ರಣಹೇಡಿ ಅಂತಲಾದರೂ ಟೀಕೆ ಮಾಡಿಕೊಳ್ಳಲಿ, ಪರವಾಗಿಲ್ಲ, ಅವರ ದೊಡ್ಡ, ದೊಡ್ಡ ನಾಯಕರುಗಳಿಗೆ ಹೆದರಿಕೊಳ್ಳದವನು ನಾನು. ಈಗ ಈ ಟ್ವೀಟ್ ಗಳಿಗೆ ಹೆದರಿಕೊಳ್ಳುತ್ತೇನೆಯೇ? ವಿಜಯೇಂದ್ರ ಹಾಗೂ ಅಶೋಕ್ ಅವರು ತಮ್ಮ,‌ ತಮ್ಮ ಸಮಾಧಾನಕ್ಕೆ ಮಾತನಾಡುತ್ತಿದ್ದಾರೆ‌” ಎಂದು ಹೇಳಿದರು.

ಧರ್ಮಸ್ಥಳ ಚಲೋ ಬಗ್ಗೆ ಕೇಳಿದಾಗ, “ಅದು ರಾಜಕೀಯದ‌ ಚಲೋ. ಧರ್ಮದ ಚಲೋ ಅಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X