2024ರಲ್ಲಿ ಬಯಲಾಗಿದ್ದ ವಾಲ್ಮೀಕಿ ನಿಗಮದ ಹಗರಣದ ತನಿಖೆ ನಡೆಸುತ್ತಿರುವ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಜಾರಿ ನಿರ್ದೇಶನಾಲಯ (ಇ.ಡಿ.) ಈವರೆಗೆ 5 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳನ್ನು ಜಪ್ತಿ ಮಾಡಿರುವುದಾಗಿ ಪ್ರಕಟಿಸಿದೆ.
2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಅಡಿಯಲ್ಲಿ ಬೆಂಗಳೂರಿನ ಇ.ಡಿ ಅಧಿಕಾರಿಗಳು, ಆರೋಪಿಗಳಿಂದ ಸ್ಥಿರಾಸ್ತಿ ಮತ್ತು ಬ್ಯಾಂಕ್ ಠೇವಣಿ ರೂಪದಲ್ಲಿ ₹5 ಕೋಟಿವರೆಗಿನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಈ ಸಂಬಂಧ ಇ.ಡಿ. ಟ್ವೀಟ್ ಮಾಡಿದ್ದು ಅದರಲ್ಲಿ ಜಪ್ತಿಯ ವಿವರಣೆಗಳನ್ನು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ನೆಕ್ಕುಂಟಿ ನಾಗರಾಜ್, ಚಂದ್ರಮೋಹನ್, ಗೋಲಪಲ್ಲಿ ಕಿಶೋರ್ ರೆಡ್ಡಿ, ಎಟಕೇರಿ ಸತ್ಯನಾರಾಯಣ ಎಂಬುವರಿಗೆ ಸೇರಿದ 4.45 ಕೋಟಿ ರೂ. ಮೌಲ್ಯದ ಭೂಮಿ, ಫ್ಲ್ಯಾಟ್ ಗಳು, ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೊ-ಆಪರೇಟಿವ್ ಬ್ಯಾಂಕ್ ನಲ್ಲಿದ್ದ 50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿರುವ ಹಣವನ್ನು ಇವರೂ ಸೇರಿದಂತೆ ಹಲವಾರು ವ್ಯಕ್ತಿಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದರಿಂದ ಇ.ಡಿ. ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ. ತನಿಖೆಯ ಭಾಗವಾಗಿ, ಈ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರನ್ ಅವರು 2024ರ ಮೇ 26ರಂದು, ಶಿವಮೊಗ್ಗದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಬರೆದಿಟ್ಟಿದ್ದ ಮರಣ ಪತ್ರದಲ್ಲಿ, ‘ಮೇಲಿನವರ ಆದೇಶದಂತೆ ನಿಗಮದ ಹಣವನ್ನು ಬೇರೆ-ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ’ ಎಂದು ಆರೋಪಿಸಿದ್ದರು. ಅದರ ಬೆನ್ನಲ್ಲೇ, ನಿಗಮವು ನಡೆಸಿದ ಆಂತರಿಕ ಪರಿಶೀಲನೆಯಲ್ಲಿ ₹89.62 ಕೋಟಿ ಅಕ್ರಮವಾಗಿ ವರ್ಗಾವಣೆ ಆಗಿರುವುದು ಪತ್ತೆಯಾಯಿತು. ಬಳಿಕ ಸಿಬಿಐ ಹಾಗೂ ಕರ್ನಾಟಕ ಪೊಲೀಸರು ದಾಖಲಿಸಿರುವ ಎಫ್ಐಆರ್ ಆಧಾರದಲ್ಲಿ ಇ.ಡಿ ಸಹ ತನಿಖೆ ನಡೆಸುತ್ತಿದೆ.