- ‘ದೇಶದಲ್ಲಿ ಹೊಸ ಪರಂಪರೆಗೆ ಕಾಂಗ್ರೆಸ್ ಮುನ್ನುಡಿ ಬರೆಯಬೇಕು’
- ‘ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೂ ಪ್ರಮುಖ ಹುದ್ದೆ ನೀಡಿ’
ಸಚಿವ ಸಂಪುಟ ಪುನಾರಚನೆ ಬಗ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ ಸಲಹೆ ನೀಡಿದ್ದು, “ಮೊದಲ ಬಾರಿ ಸಚಿವರಾಗಿರುವವರನ್ನು ಹೊರತುಪಡಿಸಿ ಹಳಬರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿಯಬೇಕು” ಎಂದು ಹೇಳಿದ್ದಾರೆ.
ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, “ಹಳಬರು ಎರಡೂವರೆ ವರ್ಷಕ್ಕೆ ಇಳಿದು ಹೊಸಬರಿಗೆ ಅವಕಾಶ ಕಲ್ಪಿಸಬೇಕು. ಇದರಿಂದ ಉಳಿದವರಿಗೂ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಈ ಮೂಲಕ ನಾವು ದೇಶದಲ್ಲಿ ಹೊಸ ಪರಂಪರೆಗೆ ಮುನ್ನುಡಿ ಬರೆದಂತಾಗುತ್ತದೆ ಎಂಬುದು ನನ್ನ ವೈಯಕ್ತಿಕ ಸಲಹೆ” ಎಂದು ತಿಳಿಸಿದರು.
“ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ಕಲ್ಪಿಸಬೇಕು. ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೂ ಪ್ರಮುಖ ಹುದ್ದೆ ನೀಡಬೇಕು” ಎಂದು ಅಭಿಪ್ರಾಯಪಟ್ಟರು.
“ಪಕ್ಷ ಮತ್ತು ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಇದ್ದರೆ ಅದನ್ನು ಬಹಿರಂಗವಾಗಿ ಚರ್ಚಿಸಬಾರದು. ಅದಕ್ಕೆ ಅವಕಾಶವನ್ನು ಯಾವುದೇ ಕಾರಣಕ್ಕೂ ಮಾಡಿಕೊಡಬಾರದು” ಎಂದು ಕಾಂಗ್ರೆಸ್ ಮುಖಂಡ ಎಂ. ವೀರಪ್ಪ ಮೊಯಿಲಿ ಹೇಳಿದರು.