ಚಾಮರಾಜನಗರದ ಜಿಲ್ಲಾಡಳಿತ ಭವನದ ಒಳಾವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಸಿಮ್ಸ್ ರಕ್ತನಿಧಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೆ ಆಯೋಜಿಸಲಾಗಿದ್ದ ಸ್ವಯಂ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಜಿಲ್ಲೆಯಲ್ಲಿ ರಕ್ತದ ಲಭ್ಯತೆಯನ್ನು ಹೆಚ್ಚಿಸುವ ಸದುದ್ದೇಶದೊಂದಿಗೆ ಸಾರ್ವಜನಿಕರು, ಯುವಕರು, ಅಧಿಕಾರಿಗಳು, ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗುವಂತೆ ಮನವಿ ಮಾಡಿದರು.
“ಜಿಲ್ಲೆಯ ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇತರೆ ಸಂದರ್ಭಗಳಲ್ಲಿಯೂ ಸಾಕಷ್ಟು ರಕ್ತದ ಲಭ್ಯತೆ ಅವಶ್ಯವಾಗಿದೆ. ಜಿಲ್ಲೆಗೆ ಹೆಚ್ಚುವರಿಯಾಗಿ ರಕ್ತನಿಧಿ ಕೇಂದ್ರದ ಅಗತ್ಯವಾಗಿದೆ. ರಕ್ತನಿಧಿ ಕೇಂದ್ರದ ಸ್ಥಾಪನೆ ಮಾತ್ರವಲ್ಲ, ರಕ್ತದಾನಿಗಳು ಹೆಚ್ಚಾಗಿ ಸ್ವಯಂ ಪ್ರೇರಿತ ರಕ್ತದಾನಕ್ಕೆ ಮುಂದಾಗಬೇಕಿದೆ. ಬಡರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ರಕ್ತದಾನ ಶಿಬಿರಗಳನ್ನು ಆಯೋಜಿಸಿ ಜನರನ್ನು ರಕ್ತದಾನಕ್ಕೆ ಪ್ರೇರೆಪಿಸಲಾಗುತ್ತಿದೆ” ಎಂದರು.

ಅಮೂಲ್ಯ ಜೀವ ಉಳಿಸುವಲ್ಲಿ ರಕ್ತದಾನ ಮಹತ್ವವಾಗಿದ್ದು, ಪ್ರತಿಯೊಬ್ಬ ಆರೋಗ್ಯವಂತ ಪುರುಷ, ವ್ಯಕ್ತಿ ಯಾವುದೇ ಭಯವಿಲ್ಲದೆ ವರ್ಷಕ್ಕೆ ಮೂರು ಬಾರಿ ಹಾಗೂ ಮಹಿಳೆಯರು ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಆದರೆ, ರಕ್ತದಲ್ಲಿನ ಹಿಮೋಗ್ಲೋಬಿನ್ ಪ್ರಮಾಣ ಶೇ. 12 ಅಥವಾ ಅದಕ್ಕಿಂತ ಹೆಚ್ಚಿರಬೇಕು. 18 ರಿಂದ 60 ವರ್ಷದೊಳಗಿನ ಹಾಗೂ 45 ಕೆ.ಜಿಗಿಂತ ಹೆಚ್ಚು ತೂಕವಿರುವವರು ರಕ್ತದಾನಕ್ಕೆ ಅರ್ಹರಾಗಿದ್ದಾರೆ. ರಕ್ತದಾನದಿಂದ ಹೊಸ ರಕ್ತ ಉತ್ಪತ್ತಿಯಾಗಿ ದೇಹವು ಚೈತನ್ಯದಿಂದ ಕೂಡಿರಲಿದೆ ಎಂದು ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಒಟ್ಟು 36 ಮಂದಿ ಅಧಿಕಾರಿ, ಸಿಬ್ಬಂದಿ ರಕ್ತದಾನ ಮಾಡಿದರು. ಇದರಿಂದ ಒಟ್ಟು 36 ಯುನಿಟ್ ರಕ್ತ ಸಂಗ್ರಹವಾಗಿದೆ.
ಈ ಸುದ್ದಿ ಓದಿದ್ದೀರಾ?ಚಾಮರಾಜನಗರ | ತಾಯಿ, ಶಿಶು ಮರಣ ತಡೆಗೆ ಮುಂಜಾಗ್ರತೆ ವಹಿಸಿ : ಡಾ ಎಂ ವಿ ವೆಂಕಟೇಶ್

ರಕ್ತದಾನ ಶಿಬಿರದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣಧಿಕಾರಿ ರಕ್ತನಿಧಿ ಕೇಂದ್ರದ ಕಾರ್ಯದರ್ಶಿ ಡಾ. ರವಿಕುಮಾರ್ ಸೇರಿದಂತೆ ಇನ್ನಿತರರು ಇದ್ದರು.