₹25 ಕೋಟಿ ವೆಚ್ಚದಲ್ಲಿ 10 ಎಕರೆ ಪ್ರದೇಶದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು.
ಸೋಮವಾರ ನಗರದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ʼಕಳೆದ ಹಲವಾರು ವರ್ಷಗಳಿಂದ ಬೀದರ ನಗರದದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಂಗಣದ ಬೇಡಿಕೆಯಿದ್ದು, ಅದಕ್ಕಾಗಿ 10 ಎಕರೆ ಭೂಮಿಯನ್ನು ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ₹25 ಕೋಟಿ ವೆಚ್ಚದಲ್ಲಿ ಭವ್ಯವಾದ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಹಾಗೂ ಪ್ರತಿ ತಾಲೂಕಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದುʼ ಎಂದರು.
ʼವಿಶ್ವವಿಖ್ಯಾತ ನಾಡ ಹಬ್ಬ ದಸರಾ ಪ್ರಯುಕ್ತವಾಗಿ ದಸರಾ ಸಿಎಂ ಕಪ್ ಕ್ರೀಡಾಕೂಟ ಆಯೋಜಿಸಲಾಗಿದ್ದು, ಎಲ್ಲಾ ಮಕ್ಕಳು ಭಾಗವಹಿಸಿದ್ದು ಸಂತೋಷದ ವಿಷಯ. ಪಾಠದ ಜೊತೆಗೆ ಕ್ರೀಡೆಯು ಬಹಳ ಮುಖ್ಯವಾಗಿದೆ. ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮಗೊಳ್ಳುತ್ತದೆ. ಕ್ರೀಡೆಯಲ್ಲಿ ಅನೇಕರು ಸಾಧನೆ ಮಾಡಿದ್ದಾರೆ. ಮೇಜರ್ ಧ್ಯಾನಚಂದ್, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಮೇರಿ ಕ್ಯೂಮ್, ಪಿ.ವಿ.ಸಿಂಧು ಮುಂತಾದವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆʼ ಎಂದರು.

ʼಕ್ರೀಡೆ ಶಿಸ್ತಿನ, ಶ್ರಮದ ಮತ್ತು ಆತ್ಮವಿಶ್ವಾಸದ ಪಾಠವನ್ನು ಕಲಿಸುವ ಅತ್ಯುತ್ತಮ ವೇದಿಕೆ. ಯುವಜನರು ತಮ್ಮಲ್ಲಿರುವ ಕೌಶಲ್ಯ, ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಹೊರತರುವುದಕ್ಕೆ ಇಂತಹ ಕ್ರೀಡಾಕೂಟಗಳು ದೊಡ್ಡ ಅವಕಾಶ. ದಸರಾ ಸಿ.ಎಂ. ಕಪ್ ಕ್ರೀಡಾಕೂಟವು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟಕ್ಕೆ ತಲುಪಿಸಲು ಸೇತುವೆಯಾಗಲಿದೆʼ ಎಂದರು.
ಇದನ್ನೂ ಓದಿ : ಬೀದರ್ | ಅತಿವೃಷ್ಟಿ ಹಾನಿ : ತುರ್ತು ಪರಿಹಾರ ಒದಗಿಸಲು ಸಿಎಂಗೆ ಸಚಿವ ಈಶ್ವರ ಖಂಡ್ರೆ ಮನವಿ
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿರೀಶ್ ಬದೋಲೆ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಎಸ್. ಸೇರಿದಂತೆ ಅಧಿಕಾರಿಗಳು, ದೈಹಿಕ ಶಿಕ್ಷಕರು, ಕ್ರೀಡಾಪಟು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.