ಪ್ರಬುದ್ಧ ಸಮಾಜ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ. ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರು ಸಹ ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ್ದರು. ಇದನ್ನು ಶಿಕ್ಷಕರು ಮನಗಾಣಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
2024-25 ಮತ್ತು 2025-26 ಸಾಲಿನ ಕೆಕೆಆರ್ಡಿಬಿ ಮ್ಯಾಕ್ರೋ ಯೋಜನೆಯಡಿಯಲ್ಲಿ ₹4.80 ಕೋಟಿ ವೆಚ್ಚದಲ್ಲಿ ನವೀಕರಣಗೊಂಡ ಡಾ.ಎಸ್.ಎಂ ಪಂಡಿತ್ ರಂಗಮಂದಿರ ಉದ್ಘಾಟನೆ ನೆರವೇರಿಸಿ ಹಾಗೂ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ʼಜಿಲ್ಲೆಯಲ್ಲಿ ಸುಸಜ್ಜಿತ ರಂಗಮಂದಿರ ನಿರ್ಮಾಣ ಮಾಡುವುದು ನನ್ನ ಬಹುದಿನದ ಕನಸಾಗಿತ್ತು. ಅದು ಇದೀಗ ನನಸಾಗಿದೆ. 2009ರಲ್ಲಿ ನಿರ್ಮಾಣಗೊಂಡಿದ್ದ ಎಸ್.ಎಂ.ಪಂಡಿತ್ ರಂಗಮಂದಿರವು ಕಾಲಕ್ರಮೇಣ ದುರಸ್ತಿ ಸ್ಥಿತಿಗೆ ತಲುಪಿತ್ತು. ಇದೀಗ KKRDB ಅನುದಾನದಿಂದ ಕಾಯಕಲ್ಪ ಪಡೆದ 855 ಆಸನಗಳ ರಂಗಮಂದಿರವು ಸೇವೆಗೆ ಸಿದ್ಧಗೊಂಡಿದೆ. ಇಲ್ಲಿ ಉತ್ತಮ ಗುಣಮಟ್ಟದ ಆಸನಗಳು, ಆಲಂಕಾರಿಕ ದೀಪಗಳನ್ನು ಅಳವಡಿಸಲಾಗಿದೆʼ ಎಂದರು.
ʼಪ್ರಗತಿಪರ ಸಮಾಜ ನಿರ್ಮಿಸಲು ವೈಜ್ಞಾನಿಕ ಮನೋಭಾವ ಬೆಳೆಸಬೇಕು. ಪುರಾಣಗಳು ಸಾಂಸ್ಕೃತಿಕ ಗುರುತಿನ ಪ್ರತೀಕಗಳಾಗಿವೆ. ಆಧ್ಯಾತ್ಮಿಕ ಹಾಗೂ ನೈತಿಕ ಮೌಲ್ಯಗಳ ಬೆಳವಣಿಗೆಗೆ ಪುರಾಣಗಳು ಬೇಕು. ಆದರೆ, ಪುರಾಣಗಳನ್ನು ಇತಿಹಾಸಗಳೆಂದು ಹಾಗೂ ವಿಜ್ಞಾನವೆಂದು ತಪ್ಪಾಗಿ ಆರ್ಥೈಸಲಾಗುತ್ತಿದೆʼ ಎಂದು ತಿಳಿಸಿದರು.

ʼಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಕಾರ್ಯಕ್ರಮಗಳಿದ್ದರೂ, ಪರೀಕ್ಷಾ ಫಲಿತಾಂಶದ ಶೇಕಡಾವಾರಿನಲ್ಲಿ ಯಾವುದೇ ಪ್ರಗತಿ ಕಂಡುಬರುತ್ತಿಲ್ಲ. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ನಿರಾಶಾದಾಯಕವಾಗಿತ್ತು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರು ಈ ನಿಟ್ಟಿನಲ್ಲಿ ಅಗತ್ಯ ಶ್ರಮವಹಿಸಿ ಮುಂಬರುವ ಪರೀಕ್ಷೆಗಳಲ್ಲಿ ಫಲಿತಾಂಶದ ಗಣನೀಯ ಹೆಚ್ಚಳಕ್ಕೆ ಪ್ರಯತ್ನಿಸಬೇಕುʼ ಎಂದು ಶಿಕ್ಷಕರಿಗೆ ಕರೆ ನೀಡಿದರು.
ಇದೇ ವೇಳೆ 2024-25 ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಯಿತು. ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ 23 ಶಿಕ್ಷಕರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ : ಶಾಸಕ ಪ್ರಭು ಚವ್ಹಾಣ ವಾಟ್ಸ್ಆ್ಯಪ್ಗೆ ಅಶ್ಲೀಲ ಫೋಟೊ, ವಿಡಿಯೊ ಕಳುಹಿಸಿ ಹಣದ ಬೇಡಿಕೆ : ದೂರು ದಾಖಲು
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ.ಪಾಟೀಲ, ಮಹಾನಗರ ಪಾಲಿಕೆ ಮೇಯರ್ ವರ್ಷಾ ರಾಜೀವ್ ಜಾನೆ, ಕುಡಾ ಅಧ್ಯಕ್ಷ ಮಜರ್ ಆಲಂಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ., ಕೆಕೆಆರ್ಟಿಸಿ ವ್ಯವಸ್ಥಾಪಕಿ ಬಿ.ಸುಶೀಲಾ, ಕೆಕೆಆರ್ಡಿಬಿ ಕಾರ್ಯದರ್ಶಿ ನಲಿನ್ ಅತುಲ್, ಎಸ್ಪಿ ಅಡ್ಡೂರು ಶ್ರೀನಿವಾಸಲು, ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.