ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಜೆನ್ ಝಿ ಪ್ರತಿಭಟನಾ ಗುಂಪು ಅಧಿಕೃತವಾಗಿ ಘೋಷಿಸಿದೆ.
ಮುಂದಿನ 6 ತಿಂಗಳೊಳಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಗುವುದು, ಇದರಿಂದಾಗಿ ಜನರು, ಅದರಲ್ಲೂ ವಿಶೇಷವಾಗಿ ನೇಪಾಳದ ಯುವಕರು ತಮ್ಮ ಇಷ್ಟದ ಹೊಸ ಪ್ರಧಾನಿಯನ್ನು ಆಯ್ಕೆ ಮಾಡಲು ಅವಕಾಶ ಸಿಗುತ್ತದೆ ಎಂದು ಅವರು ಹೇಳಿದ್ದಾರೆ.
ಪ್ರತಿಭಟನೆ, ಹಿಂಸಾಚಾರದಿಂದ ಅರಾಜಕತೆ ಸೃಷ್ಟಿಯಾಗಿರುವ ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ ಕುರಿತು ‘ಜೆನ್ ಝಿ’ ತಲೆಮಾರಿನ ಮುಖಂಡರು ಅಧ್ಯಕ್ಷ ರಾಮಚಂದ್ರ ಪೌಡೆಲ್ ಹಾಗೂ ಸೇನಾ ಮುಖ್ಯಸ್ಥ ಅಶೋಕ್ ರಾಜ್ ಸಿಗ್ನಲ್ ಅವರೊಂದಿಗೆ ಮಾತುಕತೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.
ಸಾಮಾಜಿಕ ಮಾಧ್ಯಮಗಳ ನಿಷೇಧದಿಂದ ಆರಂಭವಾದ ಯುವ ಸಮುದಾಯದ ಪ್ರತಿಭಟನೆ ನಂತರ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದ ವಿರುದ್ಧ ಆಕ್ರೋಶವೂ ಸೇರಿ ಹೋರಾಟದ ಕಾವು ಹೆಚ್ಚಿತು. ಪರಿಣಾಮ ಹಲವರು ಪ್ರಾಣ ಕಳೆದುಕೊಂಡರು. ಹೋರಾಟಕ್ಕೆ ಮಣಿದು ಪ್ರಧಾನಿ ಕೆ.ಪಿ.ಶರ್ಮಾ ಓಲಿ ಅವರ ರಾಜೀನಾಮೆ ನೀಡಿದ್ದಾರೆ. ಇದೀಗ ನೂತನ ಪ್ರಧಾನಿ ಆಯ್ಕೆ ಕುರಿತ ಚರ್ಚೆಗೆ ವೇದಿಕೆ ಸಜ್ಜಾಗಿದೆ.