ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ ಎಂದು ಗದಗ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅಭಿಪ್ರಾಯಪಟ್ಟರು.
ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟ(ಫುಟ್ಬಾಲ್ ಮತ್ತು ಹಾಕಿ)ವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಕ್ರೀಡಾಪಟುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಗದಗ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿಯೂ ಜಿಲ್ಲೆಗೆ ಕೀರ್ತಿ ತರಬೇಕು” ಎಂದು ಆಶಿಸಿದರು.
ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ ಮಾತನಾಡಿ, “ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಇಲ್ಲಿ ಆಗಮಿಸಿದ್ದಾರೆ. ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವುದು ಮುಖ್ಯ. ಕ್ರೀಡಾಪಟುಗಳು ನಿರ್ಣಾಯಕರ ನಿರ್ಣಯವನ್ನು ಪಾಲಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು” ಎಂದು ಕರೆ ನೀಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಮಾತನಾಡಿ, “ಗದಗ ಜಿಲ್ಲೆಯ ಹಾಕಿ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವುದು ನಮಗೆಲ್ಲ ಹೆಮ್ಮೆಯ ವಿಷಯವಾಗಿದೆ. ಜಿಲ್ಲಾ ಮಟ್ಟದಿಂದ ಈಗ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಗದಗ ಜಿಲ್ಲೆಗೆ ಆಗಮಿಸಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಪಾಲ್ಗೊಳ್ಳಬೇಕು” ಎಂದು ಕರೆ ನೀಡಿದರು.
ಇದನ್ನೂ ಓದಿ: ಗದಗ | ‘ಕಲಾಸಿರಿ ಆದರ್ಶ ಶಿಕ್ಷಕಿ ಪ್ರಶಸ್ತಿ’ಗೆ ಶಿಕ್ಷಕಿ ಸುಸನ್ನಾ ಕನವಳ್ಳಿ ಆಯ್ಕೆ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ ಮಾತನಾಡಿ, “ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಗಳು (ಫುಟ್ಬಾಲ್ ಮತ್ತು ಹಾಕಿ) ಸೆಪ್ಟೆಂಬರ್ 11 ಮತ್ತು 12 ರಂದು ಜರುಗುತ್ತಿವೆ. ಫುಟ್ಬಾಲ್ ಕ್ರೀಡಾಕೂಟ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಹಾಕಿ ಕ್ರೀಡಾಕೂಟ ಗದಗ ಬೆಟಗೇರಿಯ ಮಹಾತ್ಮಾಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ಜರುಗುತ್ತಿವೆ” ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಸಭೆ ಸದಸ್ಯ ಸುರೇಶ ಕಟ್ಟಿಮನಿ, ಮೋಹನ ಕಟ್ಟಿಮನಿ, ಹನುಮಂತಪ್ಪ ವೀರಾಪೂರ, ಎಚ್.ಬಿ.ಗಡಟಾದ, ಸರ್ಫರಾಜ್ ಶೇಖ್, ಎಂ.ಎ.ಯರಗುಡಿ, ದೈಹಿಕ ಶಿಕ್ಷಕರುಗಳು, ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಹಾಜರಿದ್ದರು.