ಕೇಂದ್ರ ಸರ್ಕಾರವು ವಿವಿಧ ಮಂತ್ರಾಲಯಗಳ ಅಡಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿ ಮತ್ತು ಕಾರ್ಯಕ್ರಮಗಳ ಸಮಪರ್ಕ ಅನುಷ್ಠಾನಕ್ಕಾಗಿ ಅನುದಾನ ಬಿಡುಗಡೆ ಮಾಡುತ್ತದೆ. ಇದರಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟವನ್ನು ಕಾಪಾಡಬೇಕು. ಅನುದಾನ ಸದ್ಬಳಕೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ-ದಿಶಾ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡುತ್ತಾ, ಕೇಂದ್ರ ಪುರಸ್ಕೃತ ಯೋಜನೆಗಳಡಿ ನಿರ್ಮಾಣವಾಗಿರುವ ಕಾಮಗಾರಿ, ಕಟ್ಟಡಗಳನ್ನು ಉದ್ಘಾಟಿಸುವಾಗ ಕಡ್ಡಾಯವಾಗಿ ತಮಗೆ ಮಾಹಿತಿ ನೀಡಬೇಕು. ಕೇಂದ್ರ ಯೋಜನೆಗಳ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಕೇಂದ್ರ ಸರ್ಕಾರವು ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮತ್ತು ಫಲಾನುಭವಿಗಳ ಪಟ್ಟಿಯನ್ನು ತಮ್ಮ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕೆಂದು ಸೂಚಿಸಿದರು.
ಎಲ್ಲ ಇಲಾಖೆಗಳು ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಮತ್ತು ಅನುದಾನ ಬಳಕೆಯ ಬಗ್ಗೆ ನಿಯಮಿತವಾಗಿ ಸಂಸದರ ಕಚೇರಿಗೆ ವರದಿ ಸಲ್ಲಿಸಬೇಕು. ಕಾಮಗಾರಿಗಳ ಅನುಷ್ಠಾನ ಮತ್ತು ಫಲಾನುಭವಿಗಳ ಆಯ್ಕೆಯಲ್ಲಿ ಯಾವುದೇ ರೀತಿಯ ಗೊಂದಲ ಅಥವಾ ನಿಯಮ ಮೀರಿ ಮಾಡಬಾರದು. ದಿಶಾ ಸಭೆಗೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಬರಬೇಕು. ಸಭೆಗೆ ಅನಿವಾರ್ಯ ಕಾರಣಗಳಿಂದ ಗೈರು ಹಾಜರಾಗುತ್ತಿದ್ದಲ್ಲಿ, ಜಿಲ್ಲಾ ಪಂಚಾಯತ ಸಿಇಓ ಅವರಿಗೆ ತಿಳಿಸಿ, ಅನುಮತಿ ಪಡೆಯಬೇಕು. ಆದರೆ ಕೆಲವರು ಇಂದಿನ ಸಭೆಗೆ ಅನಧಿಕೃತವಾಗಿ ಗೈರುಹಾಜರಾಗಿದ್ದು ಈ ಕುರಿತು ಗಂಭೀರವಾಗಿ ಪರಿಗಣಿಸಿ, ಪರಿಶೀಲಸಬೇಕೆಂದು ನಿರ್ದೇಶಿಸಿದರು.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಶೂನ್ಯ ದರದಲ್ಲಿ 5 ಕೆ.ಜಿ. ಪಡಿತರವನ್ನು ದೇಶದ 81.56 ಕೋಟಿ ನಾಗರಿಕರಿಗೆ ಕೇಂದ್ರ ಸರ್ಕಾರದಿಂದ ನೀಡಲಾಗುತ್ತಿದೆ. ಅಕ್ಕಿ ಅಥವಾ ಗೋಧಿ ಅಥವಾ ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಸ್ಥಳೀಯವಾದ ದವಸಧಾನ್ಯಗಳನ್ನು ನೀಡಲು ಅವಕಾಶವಿದೆ. ಈ ಯೋಜನೆಯಡಿ ವಿತರಿಸುವ 5 ಕೆಜಿ. ಪಡಿತರಕ್ಕೆ ಕೇಂದ್ರ ಸರ್ಕಾರದಿಂದ ಉಚಿತವಾಗಿ ನೀಡುವ ಬಗ್ಗೆ ಮಾಹಿತಿ ದಾಖಲಿಸಿ, ರಶೀದಿ ನೀಡಬೇಕು ಮತ್ತು ಪಡಿತರದಾರರಿಗೆ ಎಸ್ಎಮ್ಎಸ್ ಮೂಲಕ ಪಡಿತರ ಪಡೆದ ಬಗ್ಗೆ ಮಾಹಿತಿ ಹೋಗಬೇಕು. ಅಕ್ಕಿ ಅಥವಾ ನೀಡುವ ಧಾನ್ಯದ ಸದುಪಯೋಗವಾಗಲು ಅರ್ಹ ಪಡಿತರದಾರನ ಐರಿಸ್ ಪಡೆದುಕೊಂಡು ಎಲೆಕ್ಟ್ರಾನಿಕ್ ವೆವಿಂಗ್ ಮಶೀನ್ಗೆ ಲಿಂಕ್ ಮಾಡಿ ಪಡಿತರ ವಿತರಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ. ಇದನ್ನು ಕಡ್ಡಾಯವಾಗಿ ಎಲ್ಲ ರಾಜ್ಯ ಸರ್ಕಾರಗಳು ಪಾಲಿಸಬೇಕು. ಈ ಕುರಿತು ಆಹಾರ ನಾಗರಿಕ ಸರಬರಾಜು ಇಲಾಖೆ ಕೇಂದ್ರದ ಆಹಾರ ಇಲಾಖೆಗೆ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.

ಕೃಷಿ ಇಲಾಖೆಯಿಂದ ಮುಂಗಾರು ಮಳೆ ಹಾನಿ ಕುರಿತು ನಡೆಸಿರುವ ಸಮೀಕ್ಷೆಯಿಂದ ಅಳ್ನಾವರ, ಕಲಘಟಗಿ ಭಾಗದ ಬೆಳೆಗಳಾದ ಗೋವಿನಜೋಳ, ಸೋಯಾಬಿನ್ ಬೆಳೆಗಳನ್ನು ಬಿಟ್ಟಿರುವುದಾಗಿ ರೈತರು ಮನವಿ ಸಲ್ಲಿಸಿದ್ದಾರೆ. ಈ ಕುರಿತು ಇನ್ನೊಮ್ಮೆ ಕೃಷಿ ಇಲಾಖೆಯ ಅಧಿಕಾರಿಗಳು ಪರಿಶೀಲಿಸಬೇಕು. ಮತ್ತು ಹೆಸರು ಬೆಳೆಹಾನಿ ಕುರಿತು ಸರಿಯಾದ ವರದಿ ನೀಡಿ, ಅರ್ಹ ರೈತರಿಗೆ ಪೂರ್ಣ ಪ್ರಮಾಣದ ವಿಮೆ ಸೌಲಭ್ಯ ದೊರಕುವಂತೆ ಅಧಿಕಾರಿಗಳು ಕ್ರಮವಹಿಸಿ, ಸಮೀಕ್ಷಾ ವರದಿ ನೀಡಬೇಕು. ತೋಟಗಾರಿಕೆ ಇಲಾಖೆಯ ಕೇಂದ್ರ ಪುರಸ್ಕøತ ಪ್ರಮುಖ ಯೋಜನೆಗಳ ಅನುಷ್ಠಾನದ ಕುರಿತು ಮತ್ತು ಫಲಾನುಭವಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು. ಬೆಳೆಹಾನಿಯಲ್ಲಿ ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳೆಹಾನಿಯನ್ನು ಸಮಪರ್ಕವಾಗಿ ಪರಿಗಣಿಸಿಲ್ಲವೆಂದು ಅನೇಕ ರೈತರು ಅಧಿಕಾರಿಗಳಿಗೆ ಮತ್ತು ತಮಗೆ ಮನವಿ ಸಲ್ಲಿಸಿದ್ದು, ಈ ಕುರಿತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ, ಬೆಳೆಹಾನಿಯಾಗಿರುವ ಎಲ್ಲ ರೈತರು ಒಳಗೊಳ್ಳುವಂತೆ ಕ್ರಮವಹಿಸಬೇಕೆಂದು ಸೂಚಿಸಿದರು.
ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಔಷಧಿಗಳನ್ನು ಹೊರಗಡೆ ಖರೀದಿಸಲು ಚೀಟಿ ನೀಡಿ ಶಿಫಾರಸ್ಸು ಮಾಡುತ್ತಿದ್ದಾರೆ. ಈ ಕುರಿತು ಅನೇಕ ಬಡ ರೋಗಿಗಳು, ಸಾರ್ವಜನಿಕರು ತಮ್ಮ ಕಚೇರಿಗೆ ಮನವಿ ಸಲ್ಲಿಸುತ್ತಿದ್ದು, ವೈದ್ಯರು ತಮ್ಮ ಆಸ್ಪತ್ರೆಯಲ್ಲಿ ಲಭ್ಯವಿರುವ ಔಷಧಿಗಳನ್ನು ಬರೆದು ಉಚಿತವಾಗಿ ನೀಡಬೇಕು. ಈ ಕುರಿತು ಸಮಸ್ಯೆಗಳಿದ್ದಲ್ಲಿ, ತಾವು ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಡಯಾಲಿಸಸ್ ಸೇರಿದಂತೆ ಸರ್ಕಾರದ ಎಲ್ಲ ಆರೋಗ್ಯ ಸೇವೆಗಳು ಬಡ ರೋಗಿಗಳು ಸೇರಿದಂತೆ ಎಲ್ಲರಿಗೂ ಉಚಿತವಾಗಿ, ಸಮಪರ್ಕವಾಗಿ ಮತ್ತು ಗುಣಮಟ್ಟದ ಚಿಕಿತ್ಸೆಯ ಮೂಲಕ ದೊರಯಬೇಕು. ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಗೆ ನೀಡಿರುವ ಅನುದಾನದಲ್ಲಿ ನಿರ್ಮಿಸಿರುವ ಕಟ್ಟಡಗಳ ಉದ್ಘಾಟನೆಯ ಮಾಹಿತಿಯನ್ನು ನೀಡಿಲ್ಲ. ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ನಂದಗರ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಾಗಿದೆ. ವರ್ಷಗಳು ಕಳೆದರು ಇನ್ನೂ ಅವುಗಳನ್ನು ಉದ್ಘಾಟಿಸಿಲ್ಲ, ಉಪಯೋಗಿಸುತ್ತಿಲ್ಲ. ಈ ಕುರಿತು ತುರ್ತು ಕ್ರಮವಹಿಸಿ, ಕಟ್ಟಡ ಬಳಕೆಗೆ ಆದ್ಯತೆ ನೀಡಬೇಕೆಂದು ಹೇಳಿದರು. ಸಾಮಾಜಿಕ ಭದ್ರತಾ ಯೋಜನೆಗಳು ಸರಿಯಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ವೃದಾಪ್ಯ, ವಿಧವಾ, ಅಂಗವಿಕಲ ಮಾಸಾಶನ ಸೇರಿದಂತೆ ವಿವಿಧ ರೀತಿಯ ಅರ್ಜಿಗಳು ಕಾಲಮಿತಿಯಲ್ಲಿ ವಿಲೆವಾರಿ ಆಗದೇ ವಿಳಂಬವಾಗುತ್ತಿದೆ. ಇದರಿಂದ ಅರ್ಹರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಕ್ರಮವಹಿಸಬೇಕು.
ಬೆಳೆಹಾನಿ ಪರಿಹಾರ ಹಾಗೂ ಮನೆಹಾನಿ ಪರಿಹಾರ ಕುರಿತು ಎನ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಪರಿಹಾರ ಬಿಡುಗಡೆ ಮಾಡಲಾಗುತ್ತಿದೆ. ರೈತರಿಗೆ ಹಾಗೂ ಸಾರ್ವಜನಿಕರಿಗೆ ಈ ಕುರಿತು ಹೆಚ್ಚಿನ ಅನುದಾನದ ನಿರೀಕ್ಷೆ ಇದ್ದು, ಸರ್ಕಾರದ ನೀತಿಗೆ ಒಳಪಟ್ಟಿರುವದರಿಂದ ಪರಿಶೀಲಿಸಿ, ಸಂಬಂಧಿಸಿದ ಇಲಾಖೆ ಗಮನಕ್ಕೆ ತರುಲಾಗುವುದು. ಮತ್ತು ಬೆಳೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ 20 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದ್ದು, ಪರಿಹಾರವನ್ನು ರೈತರಿಗೆ ವಿತರಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಾಗೂ ಅಗತ್ಯವಿರುವ ಉಳಿದ ಬೆಳೆ ಪರಿಹಾರದ ಅನುದಾನವು ಬಿಡುಗಡೆಯಾಗುತ್ತದೆ ಎಂದು ತಿಳಿಸಿದ್ದಾರೆ. ಆದಷ್ಟು ಬೇಗ ಪರಿಹಾರ ನೀಡಲು ಸೂಚಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ಮಾರ್ಚ 2026 ರೊಳಗೆ ಕಾಮಗಾರಿಯನ್ನು ಮುಕ್ತಾಗೊಳಿಸಲು ತಿಳಿಸಲಾಗಿದೆ. ಇದರಲ್ಲಿ ಬರುವ ಸೇತುವೆಗಳ ನಿರ್ಮಾಣ ಕಾರ್ಯ ಸ್ವಲ್ಪಮಟ್ಟಿಗೆ ವಿಳಂಬವಾಗಬಹುದು. ಕಾಲಮಿತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ.
ಸಭೆಯಲ್ಲಿ ವಿಧಾನ ಸಭೆ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕರಾದ ಅರವಿಂದ ಬೆಲ್ಲದ, ಶಾಸಕರಾದ ಎಮ್.ಆರ್.ಪಾಟೀಲ, ಮಹೇಶ ಟೆಂಗಿನಕಾಯಿ, ಮಹಾಪೌರರಾದ ಜ್ಯೋತಿ ಪಾಟೀಲ ಮತ್ತು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಮಾತನಾಡಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಕಾರ್ಯಕ್ರಮ ನಿರೂಪಿಸಿ, ಸಭೆ ನಿರ್ವಹಿಸಿದರು. ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸ್ವಾಗತಿಸಿ, ವಂದಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪಪೊಲೀಸ್ ಆಯುಕ್ತ ಮಹಾನಿಂಗ ನಂದಗಾವಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ ವೇದಿಕೆಯಲ್ಲಿ ಇದ್ದರು. ದಿಶಾ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಯಲ್ಲಮ್ಮ ಗಾಣಿಗೇರ, ಮೌನೇಶ ಬಡಿಗೇರ, ಗುರುನಾಥ ಬಸವನಗೌಡರ, ಸಿದ್ದಪ್ಪ ಬಿದರಳ್ಳಿ, ಹನುಮಂತಪ್ಪ ಬೂದಿಹಾಳ ಅವರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಪರಿಶೀಲನಾ ವರದಿಯನ್ನು ಸಲ್ಲಿಸಿದರು.
ಈ ಸುದ್ಧಿ ಓದಿದ್ದೀರಾ? ಧಾರವಾಡ | ಆರೋಗ್ಯ ರಕ್ಷಣೆ ಎಲ್ಲರ ಜವಾಬ್ದಾರಿ: ಸಿಇಓ ಭುವನೇಶ ಪಾಟೀಲ
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕಾಶಿನಾಥ ಭದ್ರಣನವರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ. ಸಂತಿ, ಪಂಚಾಯತ ರಾಜ್ ಇಂಜಿನೀಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರ ಆರ್.ಎನ್.ಸೊಪ್ಪಿಮಠ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಸ್.ಎಮ್.ಹೊನಕೇರಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಕಮಲಾ ಬೈಲೂರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ತಾಲೂಕಾ ಪಂಚಾಯತ ಇಓ ಮತ್ತು ಇತರರು ಭಾಗವಹಿಸಿ, ಕೇಂದ್ರ ಪುರಸ್ಕøತ ಯೋಜನೆಗಳ ಪ್ರಗತಿ ವರದಿ ಸಲ್ಲಿಸಿದರು.