ಸಮಾಜದ ಎಲ್ಲರಿಗೂ ಎಲ್ಲ ಕ್ಷೇತ್ರಗಳಲ್ಲೂ ಸಮಾನತೆ ತರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯವಾಗಿದೆ. ಪ್ರಜೆಗಳೆ ಪ್ರಜಾಪ್ರಭುತ್ವದ ಜೀವಾಳ. ಯುವ ಸಮುದಾಯ ಜಾಗೃತವಾದರೆ ಮಾತ್ರ ಪ್ರಜಾಪ್ರಭುತ್ವ ಸದೃಡವಾಗಿ ಉಳಿಯಲು ಸಾಧ್ಯವಾಗುತ್ತದೆ ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಕರ್ನಾಟಕ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ಮೀಸಲಾತಿ ಪರಿಕಲ್ಪನೆ ಬಂದಿದ್ದು, ಎಲ್ಲರಲ್ಲೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ಮತ್ತು ಸಮಾನ ಅವಕಾಶ ತರುವುದಾಗಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಗೆ ಉಳ್ಳವರು, ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಇಂದು ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಸಮಾಜವನ್ನು ಉಳಿಸುವ, ಪ್ರಜಾಪ್ರಭುತ್ವ ಕಾಪಾಡುವ ಕಾರ್ಯ ಯುವಜನರ ಕೈಯಲ್ಲಿದೆ. ಇಂದಿನ ಯುವಕರು ಜಾಗೃತರಾಗಬೇಕು. ಮೀಸಲಾತಿ ಪರಿಕಲ್ಪನೆ ಬಂದಿದ್ದು ಸರ್ವರ ಅಭಿವೃದ್ಧಿಯನ್ನು ಸಮಾನವಾಗಿ ಸಾಧಿಸುವದಾಗಿದೆ. ಮಹಿಳೆಯರಿಗೆ ಆಸ್ತಿ ಹಕ್ಕು ಬಂದಿದ್ದು, ಇತರ ಹಕ್ಕುಗಳನ್ನು ನೀಡಿದ್ದು ಲಿಂಗ ಸಮಾನತೆಯಾಗಿದೆ ಎಂದು ಹೇಳಿದರು.
ಸರ್ವರು, ಸರ್ವ ಜನಾಂಗದವರು ಸಮಾನರಾಗಿ ಬದುಕುವ ಅವಕಾಶ, ಹಕ್ಕು, ಎಲ್ಲವನ್ನು ನಮ್ಮ ಸಂವಿಧಾನ ನೀಡಿದೆ. ಸಂವಿಧಾನದ ಕಲಂ 19, ಕಲಂ 32 ರಂತ ಮಹತ್ವದ ಹಕ್ಕುಗಳನ್ನು ನಮಗೆ ನೀಡಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಒಂದು ಸಮುದಾಯ, ವ್ಯವಸ್ಥೆಗೆ ಸೀಮಿತಗೊಳಿಸದೆ ಅವರ ಅಪಾರ ಕೊಡುಗೆಯನ್ನು ಸ್ಮರಿಸಿ, ಅವರ ಉದಾರತೆಯನ್ನು ಅಳವಡಿಸಿಕೊಳ್ಳಬೇಕು. ಇವತ್ತು ಡ್ರಗ್ಸ್ ಒಂದು ಶಾಪವಾಗಿ, ಅಭಿವೃದ್ಧಿ ವಿರೋಧಿಯಾಗಿ ಬೆಳೆಯುತ್ತಿದೆ. ಇದನ್ನು ತಡೆಗಟ್ಟುವ ಜವಾಬ್ದಾರಿ ಎಲ್ಲರ ಮೇಲಿದೆ. ಸಂಪೂರ್ಣವಾಗಿ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿಯಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಕಳೆದ 2008 ರಿಂದ ದೇಶದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಜೆಗಳೇ ಪ್ರಜಾಪ್ರಭುತ್ವದ ಜೀವಾಳ. ಇಂದಿನ ಲಿಂಗ ಸಮಾನತೆ, ಅವಕಾಶಗಳ ಸಮಾನತೆ, ಎಲ್ಲರಿಗೂ ಆಸ್ತಿ ಹಕ್ಕು ಲಭಿಸಿದ್ದು ಸಂವಿಧಾನ ನೀಡಿರುವ ಅವಕಾಶವಾಗಿದೆ. ಮಹಿಳೆಯರು ಸಂವಿಧಾನ ನೀಡಿರುವ ಅವಕಾಶಗಳನ್ನು ಬಳಸಿಕೊಂಡು, ಅಭಿವೃದ್ಧಿ ಹೊಂದಬೇಕು ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನೆ ಮೂಲಕ ಪ್ರಜಾಪ್ರಭುತ್ವಕ್ಕೆ ಗಟ್ಟಿ ತಳಪಾಯ ಹಾಕಿದ್ದಾರೆ. ಎಲ್ಲರೂ ಪ್ರಜಾಪ್ರಭುತ್ವವನ್ನು ಗೌರವಿಸಿ, ಪ್ರಜಾಪ್ರಭುತ್ವದ ತತ್ತ್ವಗಳನ್ನು ಪಾಲಿಸಬೇಕು ಎಂದರು. ಐಎಎಸ್ ಅಧಿಕಾರಿ ರಿತೀಕಾ ವರ್ಮಾ ಮಾತನಾಡಿ, ಭಾರತದಲ್ಲಿ ಬಹು ಹಿಂದಿನಿಂದ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ. ಇತರ ದೇಶಗಳಿಗೆ ನಮ್ಮ ಪ್ರಜಾಪ್ರಭುತ್ವ, ಸಂವಿಧಾನ ಮಾದರಿಯಾಗಿದೆ ಎಂದು ಹೇಳಿದರು.
ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ವೇದಿಕೆಮೇಲಿದ್ದರು.
ಈ ಸುದ್ಧಿ ಓದಿದ್ದೀರಾ? ಧಾರವಾಡ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಆರ್. ಪಾಟೀಲ್ ಚಾಲನೆ
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭ ಪಿ. ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಿಬ್ಬಂದಿಗಳು ಸಾರ್ವಜನಿಕರು ಭಾಗವಹಿಸಿದ್ದರು.