ಸತತವಾಗಿ ಸುರಿದ ಮಳೆಯಿಂದಾಗಿ ರೈತರು ಬೆಳೆದ ಈರುಳ್ಳಿ ಬೆಳೆ ಸಂಪೂರ್ಣ, ಕೆಲವೆಡೆ ಭಾಗಶಃ ನಾಶವಾಗಿ ರೈತರು ಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ಭಾರತೀಯ ಕಿಸಾನ್ ಸಂಘದ ಬಾಗಲಕೋಟೆ ಜಿಲ್ಲಾಧ್ಯಕ್ಷ ವಿರೂಪಾಕ್ಷಯ್ಯ ಹಿರೇಮಠ ಆಗ್ರಹಿಸಿದರು.
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಬಾಗಲಕೋಟ ಜಿಲ್ಲಾ ಘಟಕ ಹಾಗೂ ಬೀಳಗಿ ತಾಲೂಕು ಘಟಕದ ಸಹಯೋಗದಲ್ಲಿ ಈರುಳ್ಳಿ ಬೆಳೆಗಾರರಿಗೆ ನ್ಯಾಯಯುತ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ತಾಲೂಕು ಆಡಳಿತ ಸೌಧದ ಮುಂದೆ ರೈತರು ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
“ಬೀಜ, ರಸಗೊಬ್ಬರ, ಕೀಟನಾಶಕ, ಕಳೆ ತೆಗೆಯಲು ಕೃಷಿ ಕಾರ್ಮಿಕರಿಗೆ ಎಕರೆಗೆ ಈರುಳ್ಳಿ ಬೀಜ ಬಿತ್ತನೆಗೆ ಕನಿಷ್ಟ ನಲವತ್ತು ಸಾವಿರ ರೂಪಾಯಿಗಳ ಖರ್ಚು ಮಾಡಿದ್ದು, ಆ ಬೆಳೆ ನೀರು ಪಾಲಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಎಲ್ಲಾ ನೀರುಪಾಲಾಗಿ ಅಳಿದುಳಿದ ಈರುಳ್ಳಿಯನ್ನು ಮಾರಾಟ ಮಾಡಲು ಮಾರುಕಟ್ಟೆಗೆ ಹೋದರೆ ಅದರ ದರ ಸಂಪೂರ್ಣ ಕುಸಿದಿದ್ದು ಬೆಳೆಯನ್ನು ಬೆಳೆಯಲು ಹಾಕಿದ ಖರ್ಚು ಕೂಡ ಬಾರದೇ ಇರುವುದು ರೈತರನ್ನು ಚಿಂತೆಗೀಡುಮಾಡಿದೆ. ಸರ್ಕಾರ ಕೂಡಲೇ ಕ್ರಮ ಕೈಗೊಂಡು ಬೆಂಬಲ ಬೆಲೆ ನೀಡಬೇಕು” ಎಂದು ಒತ್ತಾಯಿಸಿದರು.
ಉ.ಪ್ರಾ. ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ, “ಬೆಳೆ ವಿಮೆ ಕಟ್ಟಿದ ರೈತರಿಗೆ ವಿಮಾ ಕಂಪನಿ, ಕೃಷಿ ಇಲಾಖೆ, ತೋಟಗಾರಿಕೆ, ರೇಷ್ಮೆ, ಕಂದಾಯ ಇಲಾಖೆಯವರು ಸರಿಯಾಗಿ ಪರಿಶೀಲನೆ ನಡೆಸದೇ ಇರುವುದರಿಂದ ರೈತರು ವಿಮಾ ಕಂಪನಿ ನೀಡುವ ಕ್ಲೇಮ್ ನಿಂದ ವಂಚಿತರಾಗುತ್ತಿದ್ದಾರೆ. ಸರಕಾರ ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು” ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಬಾಗಲಕೋಟೆ | ನವೆಂಬರ್ನಲ್ಲಿ ಚಾಲುಕ್ಯ ಉತ್ಸವ ಆಯೋಜನೆ: ಸಚಿವ ಆರ್ ಬಿ ತಿಮ್ಮಾಪೂರ
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮಲ್ಲಪ್ಪ ಗಾಣಿಗೇರ, ಪ್ರಧಾನ ಕಾರ್ಯದರ್ಶಿ ಗುರು ಅನಗವಾಡಿ, ಜಿಲ್ಲಾ ಕೋಶಾಧ್ಯಕ್ಷ ಮುದುಕಪ್ಪ ವಡವಾಣಿ, ಜಿಲ್ಲಾ ಮಹಿಳಾ ಪ್ರಮುಖರಾದ ರೇಣುಕಾ ಹುಲ್ಲಿಕೇರಿ, ರೈತ ಮುಖಂಡರಾದ ಶಿವನಗೌಡ ಪಾಟೀಲ, ಡೊಂಗ್ರಿಸಾಬ ನದಾಪ, ಚಂದ್ರಶೇಖರ ಕಾಖಂಡಕಿ ಬಸವಂತ ಸಂಕಾನಟ್ಟಿ, ಸುರೇಶ ಹೂಗಾರ, ಮಂಜು ಬಾವಿ, ಹಣಮಂತ ದೊರೆಗೊಳ, ಶಾಂತಯ್ಯ ಪಂಚಗಟ್ಟಿಮಠ, ಲಕ್ಷ್ಮಣ ಸವನಾಳ, ಯಲ್ಲಾಲಿಂಗ ಕುರಿ, ಸಿದ್ದಪ್ಪ ಕೂಗಟಿ ಇದ್ದರು.