ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಪುರಭವನ ಆವರಣದಲ್ಲಿ ಆಯೋಜಿಸಲಾಗಿದ್ದ ‘ಸಂವಿಧಾನ ಪೀಠಿಕೆ’ ಶಿಲಾಫಲಕ ಉದ್ಘಾಟನೆ ಮಾಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ‘ನಾವೆಲ್ಲರೂ ಒಂದೇ ಎಂದು ಜಾಗೃತಿ ಮೂಡಿಸುವ ನಮ್ಮ ಭಾರತದ ಸಂವಿಧಾನ ಪೀಠಿಕೆ, ಪ್ರತಿ ಮನೆ ಮನೆಗೂ ತಲುಪಬೇಕು’ ಎಂದು ಕರೆ ಕೊಟ್ಟರು.
“ನಾವು ಭಾರತೀಯರು, ಭಾರತದ ಮೂಲ ನಿವಾಸಿಗಳು ಎಂಬುದನ್ನು ಅರಿವು ಮೂಡಿಸಲು ಸಂವಿಧಾನ ಪೀಠಿಕೆ ಅಗತ್ಯ. ಹಾಗಾಗಿ, ನಾನು ಸಚಿವನಾದ ಬಳಿಕ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪೀಠಿಕೆ ಓದಿಸಲು ಪ್ರಾರಂಭಿಸಿದೆ. ಅದೇ ರೀತಿ ಇಂದು ಮೈಸೂರು ನಗರದ ಪ್ರಮುಖ ಸ್ಥಳದಲ್ಲಿ ಪಾಲಿಕೆ ವತಿಯಿಂದ ಬೃಹತ್ ಸಂವಿಧಾನ ಪೀಠಿಕೆ ಶಿಲಾಫಲಕ ನಿರ್ಮಿಸಲಾಗಿದೆ. ಇದು ಒಳ್ಳೆಯ ಬೆಳವಣಿಗೆ” ಎಂದರು.

“ದೇಶದಲ್ಲಿ ಸಂವಿಧಾನ ಮರೆಮಾಚುವ ಕೆಲಸ ನಡೆಯುತ್ತಿದೆ. ಆದರೆ, ಅದು ಸಾಧ್ಯವಿಲ್ಲ. ಹೀಗಾಗಿ, ದಲಿತರು, ಅಸ್ಪೃಶ್ಯರು ಒಗ್ಗಟ್ಟಾಗಬೇಕು. ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಅಂಬೇಡ್ಕರ್ ವಾದ ಗಟ್ಟಿಗೊಳಿಸಬೇಕು. ಮನೆ ಮನೆಗೂ ಸಂವಿಧಾನ ಪೀಠಿಕೆ ತಲುಪಿದಾಗ ಮಾತ್ರ ಭಾರತೀಯರಾಗಿ ನಾವೆಲ್ಲಾ ಒಂದೇ ಎಂದು ಅರಿತು ಬಾಳಬಹುದು” ಎಂದು ಹೇಳಿದರು.

ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಮಾತನಾಡಿ, “ಸಾಂಸ್ಕೃತಿಕ ನಗರದಲ್ಲಿ ಸಂವಿಧಾನ ಪೀಠಿಕೆ ಅಳವಡಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಏಕೆಂದರೆ, ಸರ್ವ ಧರ್ಮ ಸಮಭಾವ ಈ ಸಂವಿಧಾನ ಪೀಠಿಕೆಯಲ್ಲಿದೆ. ಸಂವಿಧಾನದ ಪೀಠಿಕೆ ಈ ದೇಶದ ರಕ್ಷಾ ಕವಚ. ಇದಕ್ಕಾಗಿ, ಎಲ್ಲಾ ಶಾಲಾ, ಕಾಲೇಜುಗಳು, ಹಾಸ್ಟೆಲ್ ಗಳಲ್ಲಿ ಸಂವಿಧಾನ ಪೀಠಿಕೆ ಹಾಕಲಾಗಿದೆ” ಎಂದು ಹೇಳಿದರು.
‘ಭಾರತ ಒಂದು-ಭಾರತೀಯರೆಲ್ಲ ಬಂಧು’ ಎಂಬ ಸಂದೇಶ ಸಾರುವ ಸಮಾನತೆಯ ಸಂಕೇತ ಕೊಟ್ಟವರು ಅಂಬೇಡ್ಕರ್. ಇಂತಹ ಮಹಾನ್ ನಾಯಕ ಕೊಟ್ಟ ಈ ಪೀಠಿಕೆಯನ್ನು ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಹಾಕಬೇಕು ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಕೊಳ್ಳೆಗಾಲ | ಸಾವಿತ್ರಿಬಾಯಿ ಫುಲೆ ನೆನಿಪಿಸಿಕೊಳ್ಳಿ; ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ : ಎ ಆರ್ ಕೃಷ್ಣಮೂರ್ತಿ

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ. ಶಿವಕುಮಾರ್, ಮಂಜೇಗೌಡ, ಗ್ಯಾರಂಟಿ ಯೋಜನೆ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಗ್ಯಾರೆಂಟಿ ಯೋಜನೆ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಮಾಜಿ ಮೇಯರ್ ಪುರುಷೋತ್ತಮ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಯುಕೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ ಸೇರಿದಂತೆ ದಲಿತ ಸಂಘಟನೆಗಳ ಹಲವು ಮುಖಂಡರು, ಕಾರ್ಯಕರ್ತರು ಇದ್ದರು.