ರಾಜ್ಯ ಸರ್ಕಾರದ ಆದೇಶದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ರಾಜ್ಯದಾದ್ಯಂತ ಪ್ರಾರಂಭವಾಗಿದ್ದು ತುಮಕೂರು ಜಿಲ್ಲೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡುವಲ್ಲಿ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಒಟ್ಟು 6544 ಬ್ಲಾಕ್ ಗಳಲ್ಲಿ, ಒಟ್ಟು 7,55,483 ಮನೆಗಳನ್ನು ಒಳಗೊಂಡಂತೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಬೆರೆ ಜಿಲ್ಲೆಗಳಿಗೆ ಹೋಲಿಸಿದರೆ ತುಮಕೂರಿನಲ್ಲಿ ವೇಗವಾಗಿ ನಡೆಯುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಸಾಮಾಜಿಕ , ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ತಹಶೀಲ್ದಾರರು ಹಾಗೂ ಇಓಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದ್ದು, ಇವರನ್ನು ಬೇರೆ ಯಾವುದೇ ಇತರೆ ಕೆಲಸಗಳನ್ನು ವಹಿಸಿರುವುದಿಲ್ಲ. ಅಕ್ಟೋಬರ್ 7 ರೊಳಗೆ ತುಮಕೂರು ಜಿಲ್ಲೆಯ 755483 ಮನೆಗಳ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 11,86,000 ಮನೆಗಳ ಪೈಕಿ 2,51,000 ಮನೆಗಳ ಸಮೀಕ್ಷೆ ಪೂರ್ಣಗೊಳಿಸಿ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ 12285ಬ್ಲಾಕ್ ಗಳಲ್ಲಿ ಸಮೀಕ್ಷೆ ನಡೆಯಲ್ಲಿದ್ದು, ಸಮೀಕ್ಷೆಗೆ ಶಾಲಾ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಲಾಗಿದೆ ಎಂದು ಹೇಳಿದರು.
ತುಮಕೂರು ಜಿಲ್ಲೆಯಲ್ಲಿ ಪ್ರಸ್ತುತ ಚಿಕ್ಕನಾಯಕನಹಳ್ಳಿ 13125, ಗುಬ್ಬಿ 2055, ಕೊರಟಗೆರೆ 10000, ಕುಣಿಗಲ್ 14000, ಮಧುಗಿರಿ 13000, ಶಿರಾ 15000, ತಿಪಟೂರು17000, ಪಾವಗಡ 10000, ತುರುವೇಕೆರೆ 10000, ತುಮಕೂರು 26000 ಮನೆಗಳ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 1,59, 555 ಮನೆಗಳ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದೆ ಎಂದರು.
ತುಮಕೂರು ಜಿಲ್ಲೆಯಲ್ಲಿ 6537 ಗಣತಿದಾರರನ್ನು ನೇಮಕ ಮಾಡಲಾಗಿದ್ದು, ಒಂದೇ ದಿನದಲ್ಲಿ 73910 ಮನೆಗಳಿಗೆ ಗಣತಿದಾರರು ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.ಸಮೀಕ್ಷೆ ಪ್ರಾರಂಭದಲ್ಲಿ ತಾಂತ್ರಿಕ ತೊಂದರೆಗಳ ಹಿನ್ನೆಲೆಯಲ್ಲಿ ಸಮೀಕ್ಷಾ ಆಪ್ ನಲ್ಲಿ ಪ್ರಸ್ತುತ 3.6 ಆವೃತ್ತಿ ಅಪ್ಡೇಟ್ ಮಾಡಲಾಗಿದ್ದು, ಪ್ರಸ್ತುತ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲದೆ ಸಮೀಕ್ಷೆ ವೇಗವಾಗಿ ನಡೆಯುತ್ತಿದೆ ಎಂದು ಹೇಳಿದರು.