ಕನ್ನಡ ಭಾಷೆಯ ಮೂಲಕ ದಕ್ಷಿಣವನ್ನು ನಾವು ಭದ್ರಪಡಿಸಿಕೊಳ್ಳುವ ಕಾಲ ಬಂದಿದೆ. ತೆಂಕಣದಿಂದ ಉತ್ತರವನ್ನು ಕೂಡ ನಾವು ಪ್ರಶ್ನಿಸಬೇಕು. ಇದಕ್ಕೆಲ್ಲ ಬೇಕಾದ ಪ್ರಮುಖ ಅಂಶವೇ ಕನ್ನಡ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.
ದಸರಾ ಉದ್ಘಾಟನೆಗೆ ಆಯ್ಕೆ ಆದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ದಸರಾ – ನಾಲ್ವಡಿ ಕೃಷ್ಣರಾಜ ಒಡೆಯರ ಕನಸು. ಜಗತ್ತು ಕಂಡ ಅತ್ಯಂತ ಶ್ರೀಮಂತ ರಾಜ ಅವರು. ನನಗೆ ಈಗ ಸಂತೋಷವನ್ನೂ ತಡೆದುಕೊಳ್ಳುವ ವಯಸ್ಸು. ಅದಕ್ಕೂ ಒಂದು ನಿಯಂತ್ರಣ ಬೇಕು. 35 ವರ್ಷದ ಹಿಂದೆ ಆಗಿದ್ದರೆ ನಾನು ಏನೇನೋ ಮಾತನಾಡುತ್ತಿದ್ದೆ. ಮೊದಲು ನಾವು ರಾಜ್ಯ ಸರ್ಕಾರಕ್ಕೆ ಎಲ್ಲ ಕಲಾವಿದರ ಪರವಾಗಿ ಧನ್ಯವಾದ ತಿಳಿಸಬೇಕು” ಎಂದರು.
“ಕಳೆದ ವರ್ಷ ನನಗೆ ಆರೋಗ್ಯದಲ್ಲಿ ಏರುಪೇರು ಆದಾಗ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದರು. ದಸರಾ ಎಂಬುದು ದೊಡ್ಡ ಸಂಭ್ರಮ. ಅಂಥ ಸಂಭ್ರಮವನ್ನು ಉದ್ಘಾಟಿಸಲು ನನ್ನಂತಹ ಸ್ಟ್ರೀಟ್ ಫೈಟರ್ನನ್ನು ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು. ನನ್ನ ಮನೆಯವರು ಪ್ರತ್ಯೇಕವಾಗಿ ಅಭಿನಂದನೆ ತಿಳಿಸಿದ್ದಾರೆ” ಎಂದ ಹೇಳಿದರು.
“ನಮ್ಮ ನಾಡಿನಲ್ಲಿ ಒಕ್ಕೂಟ ವ್ಯವಸ್ಥೆ ಬರುವುದಕ್ಕೂ ಮುನ್ನ, ಸಂವಿಧಾನ ಸಿದ್ಧವಾಗುವುದಕ್ಕೂ ಮುನ್ನ, ಸಂವಿಧಾನದಲ್ಲಿ ಏನೆಲ್ಲ ಇರಬೇಕು ಎಂಬುದನ್ನು ಆಲೋಚಿಸುವುದಕ್ಕೂ ಮುನ್ನ ಅದನ್ನೆಲ್ಲ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಇಲ್ಲಿ ಜಾರಿಗೊಳಿಸಿದ್ದರು. ಅವರು ಒಂದು ಪ್ರಜಾ ಪ್ರತಿನಿಧಿ ಸಭೆ ಎಂಬ ಪರಿಕಲ್ಪನೆಯನ್ನು ಜಾರಿ ಮಾಡಿದ್ದರು. ಅದು ಇಡೀ ಭಾರತಕ್ಕೆ ಬೆಳಕಾಯಿತು. ಪ್ರಜಾ ಪ್ರತಿನಿಧಿ ಸಭೆ ಎಂದರೆ ರಾಜ್ಯದ ಹಳ್ಳಿಗಾಡಿನ ಕೃಷಿಕ, ಕಾರ್ಮಿಕ, ಶ್ರಮಿಕ ವರ್ಗದಿಂದ ಓರ್ವ ಪ್ರತಿನಿಧಿ ಅರಮನೆಯಲ್ಲಿ ಇರಬೇಕು. ಅವನು ಪ್ರಶ್ನೆಗಳನ್ನು ಕೇಳಬೇಕು. ಯೋಜನೆಯಲ್ಲಿ ಆತ ಭಾಗವಹಿಸಬೇಕು. ಮಹಾರಾಜನ ಮಟ್ಟಕ್ಕೆ ಅವನು ಮಾತನಾಡಬೇಕು ಎಂದು ಅವರು ಕನಸು ಕಂಡಿದ್ದರು. ಆ ಕನಸು ಈಗ ನನಸಾಗಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ?: ಸಾಮಾಜಿಕ ನ್ಯಾಯ, ಸಾಮಾಜಿಕ ಜವಾಬ್ದಾರಿ ಅರಿಯದ ‘ಹೀರೋ’ಗಳು; ಸ್ಟಾರ್ಗಳಿಗೆ ಬೇಕು ಟ್ರೈನಿಂಗ್!
“ನಾನು ಪ್ರಜಾ ಪ್ರತಿನಿಧಿ ಆಗಿದ್ದೀನೋ ಇಲ್ಲವೋ ಗೊತ್ತಿಲ್ಲ. ಕಲಾ ಪ್ರತಿನಿಧಿಯಂತೂ ಆಗಿದ್ದೇನೆ. ಕನ್ನಡ ಚಿತ್ರರಂಗದ ಎಲ್ಲ ಲೇಖಕರ ಪರವಾಗಿ ನಾನು ಇದನ್ನು ಸ್ವೀಕರಿಸಿ, ಅಲ್ಲಿ ದೀಪ ಹಚ್ಚಲಿದ್ದೇನೆ. ಮನಸ್ಸಿನಲ್ಲಿ ಹಾಡುಗಳು ಉಕ್ಕುತ್ತಿವೆ. ಇದು ಒಳ್ಳೆಯ ಸಂದರ್ಭ. ಹಾಡು ಮಾಡಬಹುದು. ಈಗ ಒಂದು ಸಾಲು ಬರುತ್ತಿದೆ. ‘ಬದುಕಿದು ಕನ್ನಡ ಭಿಕ್ಷೆ. ಇಲ್ಲಿ ಸಮರಸವೇ ನಮ್ಮ ರಕ್ಷೆ. ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು. ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು’. ಕನ್ನಡವನ್ನು ಯಾರು ಮೆಟ್ಟುತ್ತಾರೋ ಅವರನ್ನು ಮೆಟ್ಟಬೇಕು. ಒಂದು ರಾಜ್ಯ ಹಲವು ಸಿದ್ಧಾಂತ, ಸಂಘಟನೆಯಿಂದ ಹೋರಾಡುತ್ತಿರುತ್ತದೆ. ಅವರನ್ನೆಲ್ಲ ಒಗ್ಗಟ್ಟಿಗೆ ತರೋದು ಕಷ್ಟ. ಆದರೆ ಕನ್ನಡ ಎಂದರೆ ಎಲ್ಲರೂ ಒಂದಾಗಬೇಕು” ಎಂದು ತಿಳಿಸಿದರು.
“ಕನ್ನಡ ಎಂದ ತಕ್ಷಣ ಎಲ್ಲ ಪಕ್ಷಗಳು ಒಂದಾಗಬೇಕು. ಸಂವಿಧಾನ ನಮಗೆ ಸ್ವಾತಂತ್ರ್ಯ ಕೊಟ್ಟಿದೆ. ಸ್ವಾತಂತ್ರ್ಯ ಅನ್ನೋದು ಒಂದು ಸವಿಯಾದ ಗಾಳಿ. ಅದು ಭಾಷೆಯ ಮೂಲಕ ಗೊತ್ತಾಗುತ್ತದೆ. ಕನ್ನಡದ ಕಾಲು ಹಿಡಿದುಕೊಂಡರೆ ಅದು ನಮ್ಮನ್ನು ಕಾಪಾಡುತ್ತದೆ. ಆ ಸ್ವಾತಂತ್ರ್ಯವನ್ನು ಇಟ್ಟುಕೊಂಡು ನಾವು ಸಂವಿಧಾನವನ್ನು ಪ್ರಶ್ನಿಸಬಹುದು. ಅದನ್ನು ಕಳೆದುಕೊಳ್ಳಬಾರದು. ನಾವು ಕನ್ನಡವನ್ನು ಕಳೆದುಕೊಳ್ಳಬಾರದು” ಎಂದು ಹಂಸಲೇಖ ಹೇಳಿದರು.