- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಚಾಲನೆ
- ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಹಾಗೂ ಸಚಿವರು ಭಾಗಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ರಾಜ್ಯದ ಪ್ರತಿಯೊಬ್ಬ ಮನೆಯ ಯಜಮಾನಿಗೆ ಸಹಾಯಧನ ರೂಪದಲ್ಲಿ ಪ್ರತಿ ತಿಂಗಳು 2000 ರೂ. ನಂತೆ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೀಡುವ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಮೈಸೂರಿನಲ್ಲಿ ಚಾಲನೆ ನೀಡಲಾಯಿತು.
ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆಯ 2000 ರೂ. ಸಹಾಯಧನ ವಿತರಣೆ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವು ನಾಯಕರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದ ಜನತೆಗೆ ಐದು ಗ್ಯಾರಂಟಿಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹ ಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವ ನಿಧಿ ಯೋಜನೆಗಳನ್ನು ಘೋಷಿಸಿತ್ತು. ಕಾಂಗ್ರೆಸ್ ಸರ್ಕಾರ ರಚನೆಯಾಗಿ 100 ದಿನ ಪೂರೈಸಿದ್ದು, ಈಗಾಗಲೇ ಮೂರು ಗ್ಯಾರಂಟಿ ಯೋಜನೆಗಳು ಅಧಿಕೃತವಾಗಿ ಚಾಲನೆಯಲ್ಲಿವೆ. ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಕೂಡ ಇಂದಿನಿಂದ (ಆ.30) ಅಧಿಕೃತವಾಗಿ ಜಾರಿಯಾಗಿದೆ.
ಸಾಗರೋಪಾದಿಯಲ್ಲಿ ಹರಿದು ಬಂದ ನಾರಿಯರು
ಗೃಹಲಕ್ಷ್ಮಿ ಯೋಜನೆ ಜಾರಿಗೆ ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ದಕ್ಷಿಣ ಭಾರತದ ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಕೇರಳದಿಂದಲೂ ಸಾವಿರಾರು ನಾರಿಯರು, ಗೃಹಿಣಿಯರು “ಗೃಹಲಕ್ಷ್ಮಿ” ಉದ್ಘಾಟನೆಗೆ ಸಾಕ್ಷಿಯಾದರು. ಶ್ರಮಿಕ ವರ್ಗದ, ದುಡಿಯುವ ವರ್ಗಗಳ ಮಹಿಳೆಯರು, ಮಹಿಳಾ ಕಾರ್ಮಿಕರು ಮಹಿಳಾ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಮಹಿಳೆಯರು ಆಗಮಿಸಿದ್ದು ವಿಶೇಷವಾಗಿತ್ತು.
ಈ ಸುದ್ದಿ ಓದಿದ್ದೀರಾ? ಗೃಹಲಕ್ಷ್ಮಿ | ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಮಹಿಳೆಯರು ಪಾದಾರ್ಪಣೆ ಮಾಡಲಿದ್ದಾರೆ: ಸಿಎಂ
ಕಾಲೇಜು ವಿದ್ಯಾರ್ಥಿನಿಯರು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ತಮ್ಮ ವಿದ್ಯಾಭ್ಯಾಸಕ್ಕೆ ಬಹಳ ದೊಡ್ಡ ನೆರವಾದ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆ ಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾರ್ಗದುದ್ದಕ್ಕೂ ಅಭಿನಂದನೆ, ಧನ್ಯವಾದ ಹೇಳುವ ಬ್ಯಾನರ್ಗಳನ್ನು ಹಿಡಿದು ಸಮಾವೇಶಕ್ಕೆ ಆಗಮಿಸಿದ್ದರು.
ಸರ್ಕಾರದ ಕಾರ್ಯಕ್ರಮ ಮತ್ತು ಯೋಜನೆಗಳ ಚರಿತ್ರೆಯಲ್ಲಿ ಏಕ ಕಾಲಕ್ಕೆ, ಪ್ರತಿ ತಿಂಗಳು ಒಂದೂವರೆ ಕೋಟಿಗೂ ಹೆಚ್ಚು ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿಸುವ ಸರ್ಕಾರಿ ಚಳವಳಿಯ ಚೈತನ್ಯ ಪಡೆದುಕೊಂಡ ಕಾರ್ಯಕ್ರಮ ಇದು ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿದೆ.
ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಲಾಲ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಸಚಿವ ಎಚ್ ಸಿ ಮಹದೇವಪ್ಪ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಸಚಿವರು, ಶಾಸಕರು ಮತ್ತು ನಾಯಕರು ಉಪಸ್ಥಿತರಿದ್ದರು.