- ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯ
- ಆರ್ಥಿಕ ಸಂಕಷ್ಟದಿಂದ ರೈತರು ಬ್ಯಾಂಕುಗಳಲ್ಲಿ ಪಡೆದ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ.
ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಉಪವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.
ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಬುಳ್ಳಾಪುರದ ಹನುಮಂತಪ್ಪ ಮಾತನಾಡಿ, “ದಾವಣಗೆರೆ ಜಿಲ್ಲೆಯಲ್ಲಿ ರೈತರು ಬೆಳೆದ ಮೆಕ್ಕೆಜೋಳ ಮತ್ತು ಇತರೆ ಬೆಳೆಗಳು ಬಹುತೇಕ ಮಳೆ ಬಾರದೆ ಒಣಗುತ್ತಿವೆ. ರೈತರು ಕೃಷಿ ಮಾಡಲು ದುಬಾರಿ ಬಿತ್ತನೆ ಬೀಜ ರಸಗೊಬ್ಬರ, ಕೂಲಿಗೆ ಹಣ ಖರ್ಚು ಮಾಡಿ ಆರ್ಥಿಕ ಸಂಕಷ್ಟದಲ್ಲಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
“ವಿದ್ಯುತ್ ಸರಬರಾಜಿನಲ್ಲಿಯೂ ವ್ಯತ್ಯಯ ಉಂಟಾಗಿದ್ದು, ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಇದಲ್ಲದೇ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುವಲ್ಲಿ ಅಧಿಕಾರಿಗಳು ಮನಬಂದಂತೆ ವರ್ತಿಸುತ್ತಿದ್ದಾರೆ. ಈ ಎಲ್ಲಾ ಕಾರಣದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಾವಣಗೆರೆ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ಆರ್ಥಿಕ ಸಂಕಷ್ಟದಿಂದ ರೈತರು ಬ್ಯಾಂಕುಗಳಲ್ಲಿ ಪಡೆದ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ. ಆದರೆ ಬ್ಯಾಂಕುಗಳು ರೈತರು ಸಾಲ ಪಾವತಿಸಬೇಕೆಂದು ಮೇಲಿಂದ ಮೇಲೆ ನೋಟೀಸ್ ನೀಡುತ್ತಿವೆ. ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರು, ಸಂಬಂಧಿಸಿದಂತೆ ಅಧಿಕಾರಿಗಳು ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ಇದಲ್ಲದೇ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸ್ಲಂ ನಿವಾಸಿಗಳಿಗೆ ನಿವೇಶನಕ್ಕೆ ಆಗ್ರಹಿಸಿ ಪ್ರತಿಭಟನೆ
ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ಎಸ್ ಟಿ ಪರಮೇಶ್ವರಪ್ಪ, ಇ.ಶ್ರೀನಿವಾಸ್, ಕರಿಲಕ್ಕೇನಹಳ್ಳಿ ರೇವಣಸಿದ್ದಪ್ಪ, ಬಲ್ಲೂರು ನಾಗರಾಜ್ ರೆಡ್ಡಿ, ವಿಜಯಕುಮಾರ್, ಚಟ್ಟೋಬನಹಳ್ಳಿ ಕಮಲೇಶ್, ಈಚಘಟ್ಟದ
ವಿಜಯ್ ಕುಮಾರ್, ಕಿತ್ತೂರು ರುದ್ರೇಶ್, ಕುಮಾರ್, ಮಾಳಿಗೇರ ತಿಪ್ಪಣ್ಣ, ಬುಳ್ಳಾಪುರದ ಶರಣಪ್ಪ, ರುದ್ರೇಶ್, ಮಾಳಿಗೇರ ತಿಪ್ಪಣ್ಣ, ಬುಳ್ಳಾಪುರದ ಶರಣಪ್ಪ ಸೇರಿದಂತೆ ಇತರರು ಇದ್ದರು.