- ಬರ ಘೋಷಣೆ ಸಂಬಂಧಿಸಿ ಮುಖ್ಯಮಂತ್ರಿಗೆ ಶಿಫಾರಸು: ಕೃಷ್ಣಭೈರೇಗೌಡ
- ‘161 ಬಿಟ್ಟು 34 ತಾಲ್ಲೂಕುಗಳಲ್ಲಿಯೂ ಭಾಗಶಃ ಬರದ ಪರಿಸ್ಥಿತಿ ಇದೆ’
ರಾಜ್ಯದ 161 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದ್ದು, ಬರ ಘೋಷಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆ ಚರ್ಚೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಬೆಳೆ ಸಮೀಕ್ಷೆ ಮತ್ತು ಗ್ರೌಂಡ್ ಟ್ರುತಿಂಗ್ (ಬೆಳೆ ಪರಿಶೀಲನೆ) ನಡೆಸಲಾಗಿದ್ದು, ಕೇಂದ್ರದ ಮಾರ್ಗಸೂಚಿಯಂತೆ 161 ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿವೆ” ಎಂದರು.
“ಐದನೇ ಸಂಪುಟ ಉಪಸಮಿತಿ ಸಭೆಯಲ್ಲಿ ಸಂಬಂಧಿತ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಬರ ಘೋಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ. ಅಲ್ಲದೆ, ಈ ಕುರಿತು ಕೇಂದ್ರಕ್ಕೆ ಮನವಿ (ಮೆಮೊರಾಂಡಮ್) ಸಲ್ಲಿಸಲು ಸಿದ್ದತೆ ನಡೆಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.
“ಕಳೆದ ವಾರ ನಡೆದ ನಾಲ್ಕನೇ ಸಂಪುಟ ಉಪ ಸಮಿತಿ ಸಭೆಯಲ್ಲೇ 62 ತಾಲೂಕುಗಳು ಕೇಂದ್ರ ಮಾರ್ಗಸೂಚಿಯಂತೆ ಬರ ಘೋಷಣೆಗೆ ಅರ್ಹ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಆದರೂ ಈ ವರ್ಷ ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಇದ್ದ ಕಾರಣಕ್ಕೆ 134 ತಾಲೂಕುಗಳಲ್ಲಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಹಾಗೂ ಗ್ರೌಂಡ್ ಟ್ರುತಿಂಗ್ ಗೆ ಸೂಚಿಸಲಾಗಿತ್ತು. ಎಲ್ಲ ತಾಲೂಕುಗಳ ವರದಿಯೂ ನಿನ್ನೆ ಕೈಸೇರಿದ್ದು ಕೇಂದ್ರ ಸರ್ಕಾರದ ಬರ ಮಾರ್ಗಸೂಚಿಯಂತೆ ಒಟ್ಟಾರೆ 161 ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿವೆ” ಎಂದು ಸಚಿವರು ವಿವರಿಸಿದರು.
34 ತಾಲೂಕುಗಳಲ್ಲಿ ಭಾಗಶಃ ಬರ
“161 ತಾಲೂಕುಗಳಲ್ಲದೆ ಇನ್ನೂ 34 ತಾಲೂಕುಗಳಲ್ಲಿಯೂ ಭಾಗಶಃ ಬರದ ಪರಿಸ್ಥಿತಿ ಇದೆ. ಆದರೆ, ಈ ತಾಲೂಕುಗಳನ್ನೂ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲು ಕೇಂದ್ರದ ಮಾರ್ಗಸೂಚಿ ಅಡ್ಡಿಯಾಗಿದೆ. ಹೀಗಾಗಿ 15 ದಿನಗಳ ನಂತರ ಸ್ಯಾಟಲೈಟ್ ಇಮೇಜ್ ಆಧರಿಸಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆಗೆ ಸೂಚಿಸಲಾಗುವುದು. ಈ ವೇಳೆ ಸಮೀಕ್ಷೆಗೆ ಒಳಪಟ್ಟ ತಾಲೂಕು ‘ಕೇಂದ್ರದ ಬರ ಮಾರ್ಗಸೂಚಿ’ಗೆ ಅನ್ವಯಿಸಿದರೆ ಎರಡನೇ ಹಂತದಲ್ಲಿ ಬರ ಘೋಷಣೆ ಮಾಡಲಾಗುವುದು” ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರ ಆತ್ಮಹತ್ಯೆ ತೀವ್ರ ಹೆಚ್ಚಳ; ಅನ್ನದಾತರ ಬದುಕಿಗೆ ಬೇಕಿದೆ ಭರವಸೆ
ಬರ ಘೋಷಣೆ ನಂತರ ಪರಿಹಾರ
“ಮಳೆ ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಇಂದು ಬರ ಘೋಷಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಲಾಗಿದೆ. ಬರ ಘೋಷಣೆಯ ನಂತರ ಪರಿಹಾರದ ಕ್ರಮಗಳ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು. ಈಗಾಗಲೇ ಪ್ರತಿ ತಾಲೂಕುಗಳಲ್ಲೂ ಟಾಸ್ಕ್ ಫೋರ್ಸ್ ರಚನೆಗೆ ಸಿದ್ದತೆ ನಡೆಸಲಾಗಿದೆ. ಅಲ್ಲದೆ, ಬರ ಘೋಷಿಸುತ್ತಿದ್ದಂತೆ, ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ 100 ದಿನಗಳ ಮಾನವ ದಿನವನ್ನು 150 ದಿನಕ್ಕೆ ಹೆಚ್ಚಿಸಲಾಗುವುದು. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ” ಎಂದು ತಿಳಿಸಿದರು.
ನೀರಿಗೂ, ಮೇವಿಗೂ ಕೊರತೆ ಇಲ್ಲ
“ರಾಜ್ಯದಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವ ಇಲ್ಲ. ಕುಡಿಯುವ ನೀರಿನ ಪೂರೈಕೆ ಸಲುವಾಗಿಯೇ ಎಲ್ಲಾ ಜಿಲ್ಲಾ ಪಂಚಾಯತ್ ಸಿಇಒಗಳ ಖಾತೆಗೆ ಈಗಾಗಲೇ ಒಂದು ಕೋಟಿ ರೂ. ಹಣವನ್ನು ವರ್ಗಾಯಿಸಲಾಗಿದೆ. ಅಲ್ಲದೆ, ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 462 ಕೋಟಿ ಹಣ ಇದೆ. ಈ ಹಣವನ್ನು ನೀರು ಪೂರೈಕೆಗೆ ಬಳಸಲು ಸೂಚಿಸಲಾಗಿದೆ. ಮತ್ತಷ್ಟು ಹಣದ ಅಗತ್ಯ ಇದ್ದರೆ ಅದನ್ನೂ ಪೂರೈಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಗತ್ಯವಿದ್ದ ಸ್ಥಳಗಳಿಗೆ ಟ್ಯಾಂಕರ್ ಅಥವಾ ಖಾಸಗಿ ಬೋರ್ ಗಳ ಮೂಲಕ ನೀರು ಪೂರೈಕೆಗೆ ಮುಂದಾಗುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.
ಪಶುಗಳ ಮೇವಿನ ಕೊರತೆಗೆ ಸಂಬಂಧಿಸಿದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ರಾಜ್ಯದಲ್ಲಿ ಮೇವಿನ ಕೊರತೆ ಇಲ್ಲ. ಬರ ಘೋಷಣೆಗೆ ಮುನ್ನವೇ ಅಗತ್ಯ ಮೇವಿನ ದಾಸ್ತಾನಿಗೆ ಸೂಚಿಸಲಾಗಿದೆ. ಮೇವು ಖರೀದಿ ದಾಸ್ತಾನಿಗೆ ಮಾರ್ಗಸೂಚಿ ಸಿದ್ದಪಡಿಸಿದ್ದು 20 ಕೋಟಿ ರೂ. ನೀಡಲಾಗಿದೆ. ಅಲ್ಲದೆ, ರೈತರಿಗೆ ಮೇವಿನ ಬಿತ್ತನೆ ಬೀಜಗಳನ್ನು ಉಚಿತವಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕೃಷಿ ಸಚಿವ ಚಲುವರಾಯಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಸಹಕಾರ ಸಚಿವ ಎನ್ ರಾಜಣ್ಣ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಸೇರಿದಂತೆ ಸಂಬಂಧಿತ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.