- ‘ಮಾನದಂಡಗಳ ಬದಲಾವಣೆ ದೇಶದ ದೃಷ್ಟಿಯಿಂದ ಅಗತ್ಯವಿದೆ‘
- ‘ರಾಜಕೀಯ ಲಾಭಕ್ಕಾಗಿ ದುರುದ್ದೇಶದಿಂದ ಪ್ರತಿಪಕ್ಷಗಳ ಆರೋಪ’
ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ 2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬರಗಾಲ ಘೋಷಣೆ ವಿಳಂಬವಾಗಿದೆ ಎಂದು ಪ್ರತಿಪಕ್ಷಗಳ ನಾಯಕರು ಆರೋಪಿಸಿರುವ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿರುವ ಅವರು, “ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು” ಎಂದು ಹೇಳಿದ್ದಾರೆ.
“ಬರ ಘೋಷಣೆಗೆ ಅಗತ್ಯವಾಗಿರುವ ಮಾನದಂಡಗಳನ್ನು ಮರುಪರಿಶೀಲಿಸಬೇಕಾದ ಅನಿವಾರ್ಯತೆಯನ್ನು ವಿವರಿಸಿ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರಿಗೆ ಹಿಂದೆಯೇ ಪತ್ರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ಉತ್ತರ ಬಂದಿಲ್ಲ. ಮಾನದಂಡಗಳಲ್ಲಿನ ಬದಲಾವಣೆ ಕೇವಲ ಕರ್ನಾಟಕ ರಾಜ್ಯದ ದೃಷ್ಟಿಯಿಂದ ಮಾತ್ರವೇ ಅಲ್ಲ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟವಾದ ಭಾರತ ಗಣರಾಜ್ಯದ ಹಿತದೃಷ್ಟಿಯಿಂದಲೂ ಅತ್ಯಗತ್ಯವಾಗಿರುತ್ತದೆ” ಎಂದು ಪ್ರತಿಪಾದಿಸಿದ್ದಾರೆ.
ಆಧಾರರಹಿತ ಆರೋಪ
“ಬರಘೋಷಣೆಯ ಮಾನದಂಡಗಳ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ಆ ಕೆಲಸವನ್ನು ಮಾಡದೆ ರಾಜ್ಯದ ಬರ ಪರಿಸ್ಥಿತಿಯ ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಸರ್ಕಾರದ ವಿರುದ್ದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.
“ಕರ್ನಾಟಕವು ವೈವಿಧ್ಯಮಯವಾದ 14 ಕೃಷಿ-ಹವಾಮಾನ ವಲಯಗಳನ್ನು ಹೊಂದಿದ್ದು, ಪ್ರತಿಯೊಂದು ವಲಯವೂ ತನ್ನದೇ ಆದ ಸವಾಲುಗಳನ್ನು ಹೊಂದಿದೆ. ಪ್ರಸಕ್ತ ಇರುವ ಮಾನದಂಡಗಳು ಎಲ್ಲ ವಲಯಗಳಿಗೂ ಏಕರೂಪವಾಗಿದ್ದು, ಇದು ಬರ ಘೋಷಣೆಗೆ ಅಗತ್ಯವಾದ ಸೂಕ್ಷ್ಮಗಳು ಮತ್ತು ಬದಲಾವಣೆಗಳನ್ನು ಒಳಗೊಳ್ಳುವುದಿಲ್ಲ. ಹಾಗಾಗಿ, ವಲಯವಾರು ನಿರ್ದಿಷ್ಟವಾದ ಸೂಚ್ಯಂಕಗಳನ್ನು ಬರ ಘೋಷಣೆಗೆ ರೂಪಿಸುವುದು ಅಗತ್ಯವಾಗಿರುತ್ತದೆ” ಎಂದಿದ್ದಾರೆ.
“ಭಾರತೀಯ ಹವಾಮಾನ ಇಲಾಖೆಯು ದೇಶಾದ್ಯಂತ ಶೇ.10 ಮಳೆಯ ಕೊರತೆಯನ್ನೂ ಸಹ ಬರದ ವರ್ಷ ಎಂದು ತೀರ್ಮಾನಿಸಿ ಘೋಷಿಸುತ್ತದೆ. ಆದರೆ, ಮಾನದಂಡಗಳ ಪ್ರಕಾರ ರಾಜ್ಯಗಳು ಬರ ಘೋಷಣೆಯನ್ನು ಮಾಡಬೇಕಾದರೆ ಮಳೆಯ ವ್ಯತ್ಯಯ ಸೂಚ್ಯಂಕವು ಶೇ.60ಕ್ಕಿಂತ ಹೆಚ್ಚಿರಬೇಕು ಎನ್ನಲಾಗಿದೆ. ನಾವು ಈ ಎರಡರ ನಡುವಿನ ಅಂತರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿದೆ. ಮಳೆಯ ವ್ಯತ್ಯಯ ಸೂಚ್ಯಂಕವು ಶೇ.20ರಿಂದ ಶೇ.59ರವರೆಗೆ ಇದ್ದರೂ ಅದು ಬರ ಘೋಷಣೆಗೆ ಅಗತ್ಯವಾದ ಕ್ರಿಯಾಕಾರಣ (ಟ್ರಿಗರ್) ಅಂಶವೆಂದು ಪರಿಗಣಿಸಬೇಕು” ಎಂದು ವಿವರಿಸಿದ್ದಾರೆ.
“ಶುಷ್ಕ ಅಥವಾ ಒಣ ಹವೆಯ ವಿಚಾರದಲ್ಲಿಯೂ ಕೈಪಿಡಿಯಲ್ಲಿ ಕಠಿಣವಾದ ನಿಯಮಾವಳಿ ಇದೆ. ಬರ ಘೋಷಿಸಲು ಮೂರು ವಾರಗಳ ಒಣಹವೆಯನ್ನು ಸೂಚ್ಯಂಕವಾಗಿ ಪರಿಗಣಿಸಲಾಗಿದೆ. ವಿಪರ್ಯಾಸವೆಂದರೆ, ಎರಡು ಮೂರು ವಾರಗಳ ಒಣಹವೆ ಕೂಡ ಬೆಳೆಯ ಮೇಲೆ ಗಂಭೀರ ದುಷ್ಪರಿಣಾಮ ಉಂಟು ಮಾಡಿ ಸರಿಪಡಿಸಲಾಗದ ಬೆಳೆಹಾನಿಗೆ ಕಾರಣವಾಗುತ್ತದೆ. ಹಾಗಾಗಿ ಮಳೆ ಕುರಿತಾದ ಸೂಚ್ಯಂಕದಲ್ಲಿ ಒಣಹವೆಯ ಅವಧಿಯನ್ನು ಎರಡು ವಾರಗಳಿಗಿಂತ ಕಡಿಮೆ ಎಂದು ಪರಿಗಣಿಸಬೇಕು” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ
ತಕ್ಷಣ ಪರಿಹಾರ ಅಸಾಧ್ಯ
“ಬರ ಘೋಷಣೆಯ ವಿಳಂಬಕ್ಕೆ ಕಾರಣವಾಗುವ ಕೈಪಿಡಿಯಲ್ಲಿರುವ ಮತ್ತೊಂದು ಪ್ರಮುಖ ಮಾನದಂಡವೆಂದರೆ ಅದು ರಾಜ್ಯ ಸರ್ಕಾರವು ‘ಇನ್ನು ಯಾವುದೇ ಬಿತ್ತನೆ ಚಟುವಟಿಕೆ’ ನಡೆಯುವುದಿಲ್ಲ ಎಂದು ಬೆಳೆ ಹಂಗಾಮಿನ ವೇಳೆ ಕೇಂದ್ರ ಸರ್ಕಾರಕ್ಕೆ ಕಡ್ಡಾಯವಾಗಿ ಪ್ರಮಾಣಪತ್ರ ಸಲ್ಲಿಸಬೇಕಿರುವುದು. ಇದು ಇನ್ಪುಟ್ ಸಬ್ಸಿಡಿ ಪರಿಕಲ್ಪನೆಗೆ ವ್ಯತಿರಿಕ್ತವಾಗಿದೆ. ಇನ್ಪುಟ್ ಸಬ್ಸಿಡಿ ಪರಿಕಲ್ಪನೆಯು ತಕ್ಷಣದ ಪರಿಹಾರ ನೀಡುವ ಮೂಲಕ ಆರ್ಥಿಕ ಚಟುವಟಿಕೆಯನ್ನು ಪುನರಾರಂಭಿಸಬೇಕು ಎನ್ನುತ್ತದೆ. ಆದರೆ, ಮೇಲೆ ಹೇಳಿದ ಕೇಂದ್ರದ ನಿಯಮಾವಳಿಯಿಂದಾಗಿ ರಾಜ್ಯ ಸರ್ಕಾರವು ಬರ ಘೋಷಣೆ ಮಾಡಿ ತಕ್ಷಣ ಪರಿಹಾರಕ್ಕೆ ಮುಂದಾಗಲು ಸಾಧ್ಯವಾಗುವುದಿಲ್ಲ” ಎಂದಿದ್ದಾರೆ.
“ಬರ ಘೋಷಣೆಗೆ ಪರಿಗಣಿಸಲಾಗುವ ಇತರ ಸೂಚ್ಯಂಕಗಳಾದ ಅಂತರ್ಜಲ ಮಟ್ಟ, ಜೈವಿಕ ಪರಿಸರದ (ಬಯೋಮಾಸ್) ಸೂಚ್ಯಂಕಗಳು ಸಹ ಪರಿಶೀಲನೆಗೆ ಒಳಪಡಬೇಕಾಗುತ್ತದೆ. ಅಂತರ್ಜಲದ ಮಟ್ಟ ಕುಸಿಯಲು ಅಥವಾ ಹೆಚ್ಚಳವಾಗಲು ಕನಿಷ್ಠ 2-3 ವಾರಗಳ ಅವಧಿಯ ಅಗತ್ಯವಿದೆ. ಹಾಗಾಗಿ ಇದರ ಪರಿಗಣನೆಯ ವೇಳೆ ವಿವೇಚನೆ ಅಗತ್ಯ. ಅದೇ ರೀತಿ, ಉಪಗ್ರಹ ಆಧರಿತ ಎನ್ಡಿವಿಐ ಸೂಚ್ಯಂಕವು ಕಳೆಯನ್ನೂ ಸಹ ಹಸಿರು ಜೈವಿಕ ಪರಿಸರವೆಂದು ಪರಿಗಣಿಸುವ ಸಾಧ್ಯತೆ ಇದೆ. ಈ ಅಂಶಗಳು ಬರ ಘೋಷಣೆಗೆ ಅಗತ್ಯವಾದ ಸೂಚ್ಯಂಕಗಳ ಪರಿಶೀಲನೆಯಲ್ಲಿ ನೇತ್ಯಾತ್ಮಕ ಪರಿಣಾಮಕ್ಕೆ ಕಾರಣವಾಗುತ್ತವೆ” ಎಂದು ವಿವರಿಸಿದ್ದಾರೆ.
“ಈ ಮೇಲಿನ ಅಂಶಗಳ ಹಿನ್ನೆಲೆಯಲ್ಲಿ ಪ್ರಸಕ್ತ ಬರ ನಿರ್ವಹಣೆಯ ಕೈಪಿಡಿಯಲ್ಲಿರುವ ಮಾನದಂಡಗಳನ್ನು ಅನ್ವಯಿಸುವಾಗ, ಅದನ್ನು ಭೌಗೋಳಿಕವಾಗಿ, ಕೃಷಿ ಚಟುವಟಿಕೆ ಹಾಗೂ ಬೆಳೆಯ ವೈವಿಧ್ಯತೆಯ ಹಿನ್ನೆಲೆಯಲ್ಲಿ ಹೆಚ್ಚು ಹೊಂದಿಕೆಯಾಗುವಂತೆ, ಹೆಚ್ಚು ರೈತಸ್ನೇಹಿಯಾಗುವಂತೆ ಅಳವಡಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಸಕ್ತ ಇರುವ ಮಾನದಂಡಗಳಿಗೆ ಸೂಕ್ತ ಮಾರ್ಪಾಡುಗಳನ್ನು ಮಾಡಬೇಕಿದ್ದು, ಅವುಗಳನ್ನು ಮರುಪರಿಶೀಲನೆಗೆ ಒಡ್ಡಲು ಇದು ಸೂಕ್ತ ಸಮಯವಾಗಿದೆ” ಎಂದು ಹೇಳಿದ್ದಾರೆ.