ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ನಗರದ ಹೊರಗಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಬದಿಯಲ್ಲಿ ಅನಧಿಕೃತ ಅನಾಮಧೇಯ ವ್ಯಕ್ತಿಗಳಿಂದ/ಏಜೆನ್ಸಿಗಳಿಂದ ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ಅನಧಿಕೃತವಾಗಿ ವಿಲೇವಾರಿ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಹೇಳಿದೆ.
ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ಅನಧಿಕೃತವಾಗಿ ವಿಲೇವಾರಿ ಮಾಡವುದು ಅತಿರೇಕವಾಗಿ ನಡೆಯುತ್ತಿದೆ. ಈ ಪ್ರವೃತ್ತಿಯು ನಗರಕ್ಕೆ ಸಂಚರಿಸುವ ಸಾರ್ವಜನಿಕರಲ್ಲಿ ಬೆಂಗಳೂರು ನಗರದ ಸ್ವಚ್ಛತೆಯ ಕುರಿತು ಋಣಾತ್ಮಕ ಮನೋಭಾವನೆ ಉಂಟುಮಾಡುವುದಲ್ಲದೇ ನಗರದ ಘನತೆ ಕುಂದಿಸುತ್ತಿದೆ. ಈ ವಿಚಾರವನ್ನು ಅತೀ ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದೆ.
ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ ನಿರ್ವಹಣೆಯ ಕುರಿತಂತೆ ಉತ್ಪಾದಕರು/ಸಂಗ್ರಹಣಾದಾರರು/ಸಾಗಾಣಾದಾರರು/ವಿಲೇವಾರಿದಾರರು ಮತ್ತು ಸಾರ್ವಜನಿಕರಿಗಾಗಿ ಬಿಬಿಎಂಪಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
- ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯದ ವೈಜ್ಞಾನಿಕ ಅಧಿಕೃತ ಸಂಗ್ರಹಣೆ, ಸಾಗಾಣೆ ಮತ್ತು ವಿಲೇವಾರಿಯ ಪ್ರಾಥಮಿಕ ಜವಾಬ್ದಾರಿಯು ತ್ಯಾಜ್ಯ ಉತ್ಪಾದಕರದ್ದಾಗಿರುತ್ತದೆ.
- ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಅಧಿಕೃತವಾಗಿ ಗುರುತಿಸಿದ ಸಂಸ್ಕರಣ ಘಟಕಗಳಿಗೆ ಸಾಗಿಸಿ ವಿಲೇವಾರಿ ಕೈಗೊಳ್ಳಬೇಕು.
- ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ಅನಧಿಕೃತವಾಗಿ ಎಲ್ಲೆಂದರಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳ ಬದಿಯಲ್ಲಿ ಇಕ್ಕೆಲಗಳಲ್ಲಿ, ಚರಂಡಿಗಳಲ್ಲಿ, ಖಾಲಿ ನಿವೇಶನಗಳಲ್ಲಿ ಅಥವಾ ಕ್ವಾರಿಗಳಲ್ಲಿ ಸುರಿಯುವುದನ್ನು ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ ನಿರ್ವಹಣಾ ನಿಯಮಗಳು-2016ರನ್ವಯ ನಿಷೇಧಿಸಲಾಗಿದೆ. ಇದು ದಂಡಾರ್ಹ ಮತ್ತು ಕಾನೂನಾತ್ಮಕವಾಗಿ ಅಪರಾಧವಾಗಿದೆ.
- ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯದ ಅನಧಿಕೃತ ವಿಲೇವಾರಿಗಾಗಿ ತ್ಯಾಜ್ಯ ಉತ್ಪಾದಕರನ್ನೊಳಗೊಂಡಂತೆ ತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣೆ/ವಿಲೇವಾರಿದಾರರಿಗೂ ಸಹ ನಿಯಮಾವಳಿಗಳನ್ವಯ (₹10,000 ಪ್ರತಿ ಟನ್ಗೆ) ದಂಡವನ್ನು ವಿಧಿಸಲಾಗುವುದು. ಪರಿಸರ (ಸಂರಕ್ಷಣೆ) ಕಾಯ್ದೆ 1986ರನ್ವಯ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖಾಂತರ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಲಾಗುವುದು.
ಈ ಸುದ್ದಿ ಓದಿದ್ದೀರಾ? ವಂಚನೆ ಪ್ರಕರಣ | ಓಡಿಶಾದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ ಅಭಿನವ ಹಾಲಶ್ರೀ
- ನಗರದ ಹೊರವಲಯದಲ್ಲಿ ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯದ ಅನಧಿಕೃತ ವಿಲೇವಾರಿಗಾಗಿ ಪಾಲಿಕೆಯ ವ್ಯಾಪ್ತಿಯಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆಯ ಎಲ್ಲ ಸೂಪರವೈಸರ್/ಕಿರಿಯ ಆರೋಗ್ಯ ಪರಿವೀಕ್ಷಕರು/ವಾರ್ಡ ಮಾರ್ಷಲ್ಸ್/ ಮಾರ್ಷಲ್ ಸೂಪರವೈಸರ್ ಅವರುಗಳ ಮುಖಾಂತರ ತಪಾಸಣೆಗೆ ಒಳಪಡಿಸಿ ನಿಯಮಾವಳಿ ಅನ್ವಯ ದಂಡವನ್ನು ವಿಧಿಸಿ ವಾಹನಗಳನ್ನು ವಶಪಡಿಸಿಕೊಂಡು ಹತ್ತಿರದ ಪೋಲಿಸ್ ಠಾಣೆಯ ಸುಪರ್ದಿಗೆ ಮುಂದಿನ ಕ್ರಮಕ್ಕಾಗಿ ನೀಡಲಾಗುವುದು ಎಂದು ಹೇಳಿದೆ.
“ಈ ಅಂಶಗಳನ್ನು ಸಾರ್ವಜನಿಕರ ಗಮನಕ್ಕಾಗಿ ಹೊರಡಿಸಲಾಗಿದೆ. ಪರಿಸರ ಸಂರಕ್ಷಣೆಗಾಗಿ ಪಾಲಿಕೆಯೊಂದಿಗೆ ಸಹಕರಿಸಿ” ಎಂದು ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತೆ ಆರ್. ಪ್ರತಿಭಾ ಮನವಿ ಮಾಡಿದ್ದಾರೆ.