ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 5ರಂದು ರಾಜ್ಯದ ಎಲ್ಲ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಅಕ್ಟೋಬರ್ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದಾರೆ.
“2020 ಜನವರಿ 1ರ ನಂತರ ವೇತನವನ್ನು ಶೇ.15 ರಷ್ಟು ಹೆಚ್ಚಳ ಮಾಡಲಾಗಿದೆ. ಈ ಪರಿಷ್ಕೃತ ಹಿಂಬಾಕಿಯನ್ನು ಪಾವತಿಸಬೇಕು. ಎಲೆಕ್ಟ್ರಿಕ್ ಬಸ್ಗಳಿಗೆ ನಮ್ಮ ನೌಕರರೇ ಚಾಲಕರಾಗಬೇಕು. ಈ ಹಿಂದೆ ಪ್ರತಿಭಟನೆ ನಡೆಸಿದಾಗ ವಜಾಗೊಳಿಸಿದ್ದ ಎಲ್ಲ ನೌಕರರನ್ನು ವಾಪಸ್ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂಬುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ. ಹಾಗಾಗಿ, ಸಾರಿಗೆ ನೌಕರರು ಎಲ್ಲರೂ ಸೇರಿ ಪ್ರತಿಭಟನೆ ಕೈಗೊಳ್ಳಲು ಮುಂದಾಗಿದ್ದೇವೆ” ಎಂದು ಕೆಎಸ್ಆರ್ಟಿಸಿ ನಿಗಮಗಳ ಒಕ್ಕೂಟದ ಅಧ್ಯಕ್ಷ ಹೆಚ್.ಡಿ.ರೇವಪ್ಪ ಹೇಳಿದ್ದಾರೆ.
ನಾಲ್ಕು ನಿಗಮಗಳ ನೌಕರರು ಅಕ್ಟೋಬರ್ 5ರಂದು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆ, ಅಕ್ಟೋಬರ್ 5ರಂದು ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಂಭವ ಹೆಚ್ಚಾಗಿದೆ.
ಈ ಸುದ್ದಿ ಓದಿದ್ದೀರಾ? ಮುಂದಿನ ಒಂದು ವಾರ ಹಗಲು, ರಾತ್ರಿ ಸಾಧಾರಣ ಮಳೆ ಸಾಧ್ಯತೆ
ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆಗಳಿಗೆ ತೊಂದರೆಯಾಗುತ್ತಿದೆ ಎಂದು ಸರ್ಕಾರದ ವಿರುದ್ದ ಖಾಸಗಿ ಚಾಲಕರು ಮತ್ತು ಮಾಲೀಕರು ಸೆಪ್ಟೆಂಬರ್ 11 ರಂದು ‘ಬೆಂಗಳೂರು ಬಂದ್’ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದೀಗ, ನಾನಾ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.