- ಕಾವೇರಿ ಸಂಕಷ್ಟ ಸೂತ್ರ ರೂಪಿಸಬೇಕಾದವರು ಯಾರು?: ಎಚ್ಡಿಕೆ
- ಸಂಸದರನ್ನು ಕೂರಿಸಿಕೊಂಡು ಭಾಷಣ ಮಾಡಲಿಕ್ಕೆ ಹೋಗಿದ್ದ?
ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ, ಈ ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಏನು ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆ ಕೊಡುತ್ತಿದ್ದರೆ ಉಪಯೋಗ ಏನು? ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು.
ಚನ್ನಪಟ್ಟಣದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನೀರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ಮೊದಲನೇಯ ತಪ್ಪು. ಸಂಕಷ್ಟ ಸೂತ್ರ ರಚನೆಗೆ ಇಷ್ಟು ಹೊತ್ತಿಗೆ ರಾಜ್ಯ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಿತ್ತು” ಎಂದರು.
ದೆಹಲಿಯಲ್ಲಿ ರಾಜ್ಯದ ಸಂಸದರ ಸಭೆ ಕರೆದು ಇವತ್ತು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಏನು ಚರ್ಚೆ ಮಾಡಿದ್ದಾರೆ? ಇವರೇನು ಹೇಳಿದ್ದಾರೆ ಎನ್ನುವ ಮಾಹಿತಿ ನನಗೂ ಇದೆ. ಹೊರನೋಟಕ್ಕೆ ನಾವು ಒಗ್ಗಟ್ಟಾಗಿದ್ದೇವೆ ಎಂದು ತೋರಿಸುವುದರಲ್ಲಿ ಏನೂ ಪ್ರಯೋಜನವಿಲ್ಲ. ಸಂಸದರನ್ನು ಕೂರಿಸಿಕೊಂಡು ಭಾಷಣ ಮಾಡಲಿಕ್ಕೆ ಹೋಗಿದ್ದಾ?” ಎಂದು ವಾಗ್ದಾಳಿ ನಡೆಸಿದರು.
“ಕಾವೇರಿ ನೀರು ನಿರ್ವಹಣಾ ಸಮಿತಿ ಹಾಗೂ ನಿಯಂತ್ರಣ ಸಮಿತಿ ಏನಾದ್ರೂ ದೇವಲೋಕದಿಂದ ಇಳಿದು ಬಂದಿದೆಯಾ? ಅಲ್ಲಿರುವವರೆಲ್ಲ ನಾವು ನೇಮಕ ಮಾಡಿಕೊಂಡ ಸದಸ್ಯರೆಲ್ಲವೇ? ಈಗ ನೋಡಿದರೆ ನಮ್ಮ ರಾಜ್ಯದ ಜನರ ಮೇಲೆ ಸವಾರಿ ಮಾಡುತ್ತಿದ್ದಾರೆ” ಎಂದು ಹರಿಹಾಯ್ದರು.
ಈ ಸುದ್ದಿ ಓದಿದ್ದೀರಾ? ’ಈ ದಿನ’ ಸಂಪಾದಕೀಯ| 2029ರ ಕನಸಿಗೆ ಈಗಲೇ ‘ಟೋಪಿ’ ಹೊಲಿದ ಮೋದಿ ಮಂತ್ರವಾದಿ
“ನಮ್ಮ ಅಧಿಕಾರಿಗಳ ಕೆಲಸ ಅಂದರೆ ಆ ದೇವರಿಗೆ ಪ್ರೀತಿ. ದೆಹಲಿಯಲ್ಲಿ ನಡೆಯುವ ಸಭೆಗಳಿಗೆ ಮಾಹಿತಿ, ಅಂಕಿ ಅಂಶಗಳ ಸಮೇತ ಹೋಗಿ ಕೂತು ಚರ್ಚೆ ಮಾಡುವುದು ಬಿಟ್ಟು ಇಲ್ಲಿಂದಲೇ ವರ್ಚುವಲ್ ಆಗಿ ಹಾಜರಾಗುತ್ತಾರೆ. ತಮಿಳುನಾಡಿನಿಂದ ಹದಿನೈದು ಜನ ಅಧಿಕಾರಿಗಳು ಹೋಗುತ್ತಾರೆ. ಇದರಿಂದ ರಾಜ್ಯಕ್ಕೆ ನ್ಯಾಯ ಸಿಗುತ್ತದಾ” ಎಂದು ಪ್ರಶ್ನಿಸಿದರು.
“ನೀರಾವರಿ ಬಗ್ಗೆ ಸಚಿವರಿಗೆ ತಿಳಿವಳಿಕೆ ಇಲ್ಲದಿದ್ದರೆ ಕೊನೆಪಕ್ಷ ಈ ಬಗ್ಗೆ ಗೊತ್ತಿರುವವರ ಸಲಹೆಯನ್ನಾದರೂ ಪಡೆದು ಹೆಜ್ಜೆ ಇಡಲಿ. ರಾಜ್ಯದಲ್ಲಿ ಬರ ಇದೆ, 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ ಎಂದು ಸ್ವತಃ ಕಂದಾಯ ಸಚಿವರೇ ಹೇಳಿದ್ದಾರೆ. ಆದರೆ ಇಷ್ಟು ದಿನ ಸರ್ಕಾರ ಮಾಡಿದ್ದೇನು?” ಎಂದು ತರಾಟೆಗೆ ತೆಗೆದುಕೊಂಡರು.
“ಭಾಷಣ ಮಾಡಲಿಕ್ಕೆ ರಾತ್ರೋರಾತ್ರಿ ತರಾತುರಿಯಲ್ಲಿ ಇವರೆಲ್ಲ ದೆಹಲಿಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ ಮುಂದೆ ಅರ್ಜಿ ಹಾಕಿ, ರಾಜ್ಯ ವಾಸ್ತವ ಪರಿಸ್ಥಿತಿಯನ್ನು ವಿವರಿಸುವುದು ಬಿಟ್ಟು, ಆ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳುವುದು ಬಿಟ್ಟು, ಅರ್ಜಿ ಸಲ್ಲಿಸುವುದಕ್ಕೆ ಆಲೋಚನೆ ಮಾಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ನೀರು ಖಾಲಿಯಾದ ಮೇಲೆ ಇವರು ಕ್ರಮ ಕೈಗೊಳ್ಳುತ್ತಾರಾ ನೋಡಬೇಕು” ಎಂದು ವಾಗ್ದಾಳಿ ನಡೆಸಿದರು.