- ಹೈಕೋರ್ಟ್ ಅನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ
- ಅಮೃತ್ ಪೌಲ್ ಮಾರ್ಚ್ನಲ್ಲಿ ಬಂಧಿತರಾಗಿ ಜೈಲು ಸೇರಿದ್ದರು
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಕುರಿತಂತೆ ಕಾಯ್ದಿರಿಸಿದ ಆದೇಶವನ್ನು ಕಲಬುರಗಿ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಪಿ ಎಂ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ.
5 ಲಕ್ಷ ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿ ಒದಗಿಸಬೇಕು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಕೋರ್ಟ್ ಅನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ. ತನಿಖೆಗೆ ಸಹಕರಿಸಬೇಕು ಇತ್ಯಾದಿ ಷರತ್ತುಗಳನ್ನು ಹಾಕಲಾಗಿದೆ.
ನೇಮಕಾತಿ ಪ್ರಕರಣ ಸಂಬಂಧ ಕಿರಿಯ ತನಿಖಾಧಿಕಾರಿಗಳು ಅಮೃತ್ ಪೌಲ್ ಅವರನ್ನು ತನಿಖೆ ನಡೆಸುತ್ತಿದ್ದಾರೆ. ಇವರಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸುವಂತೆ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಹೈಕೋರ್ಟ್ಗೆ ಮನವಿ ಮಾಡಿದ್ದರು. ಅದರಂತೆ ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ಕೋರ್ಟ್ ವಿಧಿಸಿದೆ.
ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಅಮೃತ್ ಪೌಲ್ ಮಾರ್ಚ್ನಲ್ಲಿ ಜೈಲು ಸೇರಿದ್ದರು. ಅಮೃತ್ ಪಾಲ್ ಅವರನ್ನು ಪಿಎಸ್ಐ ಪರೀಕ್ಷೆಯಲ್ಲಿ ರಿಗ್ಲಿಂಗ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಕಾವೇರಿ ನೀರು ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ಮಾಜಿ ಪ್ರಧಾನಿ ದೇವೇಗೌಡ ಪತ್ರ
ಪೌಲ್ ಮೇಲೆ ಆರೋಪ ಕೇಳಿ ಬಂದ ತಕ್ಷಣ ಆಗಿನ ಸರ್ಕಾರ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಿತ್ತು. ನೇಮಕಾತಿ ಅಕ್ರಮದ ಸಮಯದಲ್ಲಿ ಅವರು ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದರು.
ಪೌಲ್ ವಿರುದ್ಧ ಅಕ್ರಮ ಆರೋಪ ಕೇಳಿ ಬಂದಾಗ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕ್ರಮ ಜರುಗಿಸಲು ರಾಜ್ಯ ಅಪರಾಧ ತನಿಖಾ ದಳಕ್ಕೆ (ಸಿಐಡಿ) ಪ್ರಕರಣವನ್ನು ಆಗಿನ ಸರ್ಕಾರ ನೀಡಿತ್ತು.
ಪಿಎಸ್ಐಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು ಅಕ್ಟೋಬರ್ 3, 2021 ರಂದು 92 ಕೇಂದ್ರಗಳಲ್ಲಿ ನಡೆಯಿತು. ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿದೆ. 52 ಅಭ್ಯರ್ಥಿಗಳು ಯಾವುದೇ ಪೊಲೀಸ್ ನೇಮಕಾತಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿದೆ.