“ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಾದ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕುಡಿಯಲು ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗಿದೆ. ಈಗಾಗಲೇ ರಾಜ್ಯದಲ್ಲಿ ಸಂಕಷ್ಟ ಪರಿಸ್ಥಿತಿಯಲ್ಲಿದ್ದು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ತಕ್ಷಣ ನಿಲ್ಲಿಸಬೇಕು” ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.
ಕಾವೇರಿ ಸಮಸ್ಯೆ ಬಗೆಹರಿಯುವ ತನಕ ಪ್ರತಿದಿನ ಮೌನ ಧರಣಿ ಮಾಡಲು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹಾಗೂ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ತೀರ್ಮಾನಿಸಿದೆ. ಅದರಂತೆ ನಗರದ ಫ್ರೀಡಂ ಪಾರ್ಕ್ನಲ್ಲಿ ಬುಧವಾರ ‘ಕಾವೇರಿ ನಮ್ಮದು’ ಧರಣಿ ಸತ್ಯಾಗ್ರಹ ನಡೆಸಿದರು.
ಈ ವೇಳೆ ಮಾತನಾಡಿದ ಅವರು, “ಕಾವೇರಿ ನೀರಿನ ಸಮಸ್ಯೆಗೆ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಮೂರು ಪಕ್ಷಗಳು ಕಾರಣ. ಸಿಎಂ ಸಿದ್ಧರಾಮಯ್ಯ ಅವರು ತಕ್ಷಣ ಅಧಿವೇಶನ ಕರೆಯಬೇಕು. ನೀರು ಬಿಡುತ್ತಿಲ್ಲ ಎಂದು ಅವರು ಹೇಳುತ್ತಿದ್ದರೂ ತಮಿಳುನಾಡಿಗೆ ನೀರು ಹರಿದು ಹೋಗುತ್ತಿದೆ. ಈ ಬಗ್ಗೆ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಿಜ ಏನೆಂದು ಹೇಳಬೇಕು” ಎಂದು ಒತ್ತಾಯಿಸಿದರು.
“ಕೇಂದ್ರ ಸರ್ಕಾರ, ಪ್ರಾಧಿಕಾರಗಳು ಮತ್ತು ನ್ಯಾಯಾಲಯ ಕೂಡ ರಾಜ್ಯದ ವಿಚಾರದಲ್ಲಿ ತಾರತಮ್ಯ ತೋರುತ್ತಿದ್ದು, ತಮಿಳುನಾಡಿಗೆ ಹೆಚ್ಚಿನ ಬೆಂಬಲ ನೀಡುತ್ತಿವೆ ಎನ್ನುವ ದೂರು ಕೇಳಿಬಂದಿದೆ” ಎಂದರು.
“ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಬೆಂಗಳೂರಿಗೆ ಹೆಚ್ಚು ಸಮಸ್ಯೆಯಾಗುವ ಕಾರಣ ಎಲ್ಲ ಭಾಗಗಳಿಗೆ ತೊಂದರೆ ಕೊಡುವುದು ಬೇಡ ಎಂದು ಕಾವೇರಿ ಜಲಾನಯನ ವ್ಯಾಪ್ತಿಯ ಪ್ರದೇಶದಲ್ಲಿ ಮಾತ್ರ ಬಂದ್ ಮಾಡಲಾಯಿತು. ಜನ ಕೂಡ ಸ್ವಯಂಪ್ರೇರಿತವಾಗಿ ಬಂದ್ಗೆ ಬೆಂಬಲ ಕೊಟ್ಟಿದ್ದಾರೆ” ಎಂದರು.
ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, “ಸಮಸ್ಯೆಯನ್ನು ಸರಿಪಡಿಸಲು ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿಯ ಕೊರತೆಯಿದೆ. ಸಮಸ್ಯೆ ಬಗೆಹರಿಸಲು ವಿಫಲವಾಗಿದೆ. ಸುಪ್ರೀಂಕೋರ್ಟ್, ಕಾವೇರಿ ಪ್ರಾಧಿಕಾರ ಮತ್ತು ನಿರ್ವಹಣಾ ಸಮಿತಿ ಮಾಡಿದ್ದೇ ಹಠ ಎನ್ನುವಂತೆ ವರ್ತಿಸುತ್ತಿವೆ. ನೀರಿಲ್ಲ ಎಂದರೂ, ನೀರು ಬಿಡಿ ಎನ್ನುತ್ತಿದ್ದಾರೆ. ಮತ್ತೆ ಮೂರು ಸಾವಿರ ಕ್ಯೂಸೆಕ್ ನೀರು ಬಿಡಿ ಎಂದು ನಿರ್ವಹಣಾ ಸಮಿತಿ ಹೇಳಿದ್ದನ್ನೇ ಪ್ರಾಧಿಕಾರ ಕೂಡ ಹೇಳಿದೆ. ಈಗ ಸುಪ್ರೀಂಕೋರ್ಟ್ ಕೂಡ ನಾವು ತಜ್ಞರಲ್ಲ ಪ್ರಾಧಿಕಾರಕ್ಕೆ ಹೋಗಿ ಎನ್ನುತ್ತಾರೆ. ನಾವೇ ಕೊಟ್ಟಿರುವ ಆದೇಶ ಯಾಕೆ ವಾಪಸ್ ಪಡೆಯುವುದು ಎಂದು ಪ್ರಾಧಿಕಾರ ನೀರು ಬಿಡಲು ಆದೇಶಿಸಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ನಾಯಿಗಳ ಸಮೀಕ್ಷೆ ನಡೆಸಿರುವ ವರದಿ ಬಿಡುಗಡೆ ಮಾಡಿದ ಬಿಬಿಎಂಪಿ
ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ ಸಹವಾನಿ, ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ಅಶೋಕ್ ಮೃತ್ಯುಂಜಯ, ಶಶಿಧರ್ ಆರಾಧ್ಯ, ಬೆಂಗಳೂರು ಮಹಿಳಾ ಅಧ್ಯಕ್ಷ ವೀಣಾ ಸರ್ರಾವ್, ಮಹಾಲಕ್ಷ್ಮಿ, ಉಸ್ಮಾನ್, ಪುಟ್ಟಣ್ಣ, ಸಿದ್ದು, ಅನಿಲ್ ನಾಚಪ್ಪ ಸೇರಿದಂತೆ ಪಕ್ಷದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.