- ಬೆಳೆ ಸಮೀಕ್ಷೆ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಿ: ಸೂಚನೆ
- ಅರ್ಜಿ ವಿಲೇವಾರಿ ವೇಳೆ ಪ್ರಭಾವಿಗಳಿಗೆ ಅನುಕೂಲವಾಗುವಂತೆ ವರ್ತಿಸಬೇಡಿ
ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಸಾಗುವಳಿ ಚೀಟಿ ನೀಡುವಂತೆ ಚಾಮರಾಜನಗರದಲ್ಲಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿದೆ. ಈ ಅರ್ಜಿಗಳನ್ನು ಮುಂದಿನ ಒಂದು ವರ್ಷದಲ್ಲಿ ವಿಲೇವಾರಿಗೊಳಿಸಬೇಕು ಎಂದು ಸಚಿವ ಕೃಷ್ಣಬೈರೇಗೌಡ ಸೂಚಿಸಿದರು.
ಚಾಮರಾಜನಗರದಲ್ಲಿ ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಅರ್ಜಿಗಳು ವಿಲೇವಾರಿಯಾಗದ ಕಾರಣ ರೈತರು ದಿನಂಪ್ರತಿ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿದೆ. ಎಷ್ಟೋ ಜನಕ್ಕೆ ಸರ್ಕಾರಿ ಕಚೇರಿಗೆ ಅಲೆಯುವುದೇ ಕೆಲಸವಾಗಿದೆ. ಜನರನ್ನು ಹೀಗೆ ಅಲೆಸುವುದು ಸರಿಯಲ್ಲ” ಎಂದರು.
“ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಿಗಳ ಅಥವಾ ರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು, ಬದಲಾಗಿ ಬಡ ಜನರಿಗೆ ಮತ್ತು ಅರ್ಹರಿಗೆ ನ್ಯಾಯ ಒದಗಿಸಲು ಬದ್ಧರಾಗಿರಬೇಕು. ಅಲ್ಲದೆ, ಅಧಿಕಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ “ಬಗರ್ ಹುಕುಂ ಆ್ಯಪ್” ಅಭಿವೃದ್ಧಿಪಡಿಸುತ್ತಿದ್ದು ಇದರ ಸಹಾಯದಿಂದ ಸ್ಯಾಟಲೈಟ್ ಇಮೇಜ್ ಪಡೆದು ನೈಜ ಸಾಗುವಳಿದಾರರನ್ನು ಗುರುತಿಸಬಹುದು. ಅಲ್ಲದೆ, ಇ-ಸಾಗುವಳಿ ಚೀಟಿಯನ್ನೂ ನೀಡಬಹುದು” ಎಂದು ಮಾಹಿತಿ ಹಂಚಿಕೊಂಡರು.
ಚಾಮರಾಜನಗರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬೆಳೆ ಸಮೀಕ್ಷೆ ಕುರಿತ ಎಲ್ಲಾ ರೈತರ ಸಂಪೂರ್ಣ ಮಾಹಿತಿಯನ್ನು “ಫ್ರೂಟ್ಸ್” (Fruits) ನಮೂದಿಸಿ ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಲು ಸರ್ಕಾರದ ಜೊತೆ ಸಹಕರಿಸಿ. ಅಧಿಕಾರಿಗಳು ಚಾಮರಾಜನಗರದಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ನಡೆಸಿದ್ದೀರಿ. ಆದರೆ, 2015-16ರ ಸಮೀಕ್ಷೆಯಂತೆ ಜಿಲ್ಲೆಯಲ್ಲಿ 2.16 ಲಕ್ಷ ರೈತರು ಇದ್ದು, ಈವರೆಗೆ 1.8 ಲಕ್ಷ ರೈತರ ಮಾಹಿತಿಯನ್ನು ಮಾತ್ರ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಲಾಗಿದೆ. ಜಿಲ್ಲೆಯ ಎಲ್ಲಾ ರೈತರ ಮಾಹಿತಿಯನ್ನು ಸರಿಯಾಗಿ ತಂತ್ರಾಂಶದಲ್ಲಿ ನಮೂದಿಸಿದರೆ ಮಾತ್ರ ಅವರಿಗೆ ಸೂಕ್ತ ಪರಿಹಾರ ನೀಡುವುದು ಸಾಧ್ಯ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಸವ ಅಥವಾ ಗರ್ಭಪಾತ; ಮಹಿಳೆಯ ಆಯ್ಕೆಯೇ ಅಂತಿಮ
“ಬೆಳೆ ನಷ್ಟಕ್ಕೆ ರೈತರಿಗೆ 5 ಎಕರೆ ವರೆಗೆ ಪರಿಹಾರ ಸಿಗಲಿದೆ. ಒಮ್ಮೆ ಬೆಳೆ ಸಮೀಕ್ಷೆ ಮುಗಿಸಿದ ನಂತರ ಬಿಟ್ಟುಹೋದ ರೈತರ ಹೆಸರನ್ನು ಮತ್ತೆ ಪರಿಹಾರದ ಪಟ್ಟಿಗೆ ಸೇರಿಸುವುದು ಅಸಾಧ್ಯ. ನಗದಿನ ಮೂಲಕವೂ ಪರಿಹಾರ ನೀಡಿಕೆಗೆ ಅವಕಾಶ ಇಲ್ಲ. ಪರಿಹಾರದ ಹಣ ಬ್ಯಾಂಕ್ ಖಾತೆಗೆ ಸಂದಾಯವಾಗಲಿದೆ. ಹೀಗಾಗಿ ಅಧಿಕಾರಿಗಳು ಈಗಲೇ ಬೆಳೆ ಸಮೀಕ್ಷೆಯನ್ನು ಶೇ.100 ರಷ್ಟು ದಕ್ಷತೆಯಿಂದ ಮುಗಿಸಬೇಕು” ಎಂದು ಸೂಚಿಸಿದರು.
“ಚಾಮರಾಜನಗರದಲ್ಲೂ ಒಟ್ಟು 67 ಕಂದಾಯ ಗ್ರಾಮಗಳು ರಚನೆಯಾಗಬೇಕಿತ್ತು. ಆದರೆ, ಈವರೆಗೆ 53 ಗ್ರಾಮಗಳಿಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದರೆ, 13 ಗ್ರಾಮಗಳಿಗೆ ಮಾತ್ರ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇನ್ನೂ 14 ಗ್ರಾಮಗಳಿಗೆ ಪ್ರಾಥಮಿ ಅಧಿಸೂಚನೆ, 32 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಬೇಕಾಗಿದೆ. ಹೀಗಾಗಿ ಮುಂದಿನ ಮೂರು ತಿಂಗಳಲ್ಲಿ ಕ್ರಮಕೈಗೊಂಡು ಕಂದಾಯ ಗ್ರಾಮ ರಚಿಸಿ ಹಕ್ಕುಪತ್ರ ವಿತರಿಸಿ” ಎಂದು ಸೂಚಿಸಿದರು.
ಹೈಕೋರ್ಟ್ ಕೇಸ್ಗಳ ಬಗ್ಗೆ ಅಸಡ್ಡೆ ಏಕೆ?
ಚಾಮರಾಜನಗರ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ 169 ಪ್ರಕರಣಗಳಿವೆ. ಈ ಪೈಕಿ 92 ಪ್ರಕರಣಗಳಲ್ಲಿ ತೆಗೆದುಕೊಂಡಿರು ಕ್ರಮ ಶೂನ್ಯ. ಅಲ್ಲದೆ, ನ್ಯಾಯಾಲಯದಲ್ಲಿ ವಕಾಲತ್ತನ್ನೂ ಸಹ ಸಲ್ಲಿಸುವ ಕೆಲಸವನ್ನು ನಮ್ಮ ಅಧಿಕಾರಿಗಳು ಮಾಡಿಲ್ಲ. ಹೀಗಾಗಿ ನ್ಯಾಯಾಲಯ ಇಲಾಖೆಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ. ನೀವು ಮಾಡುವ ಕೆಲಸಕ್ಕೆ ಸರ್ಕಾರದ ಜಮೀನು ಖಾಸಗಿಯವರ ಪಾಲಾಗಲು ನಾವು ಸಹಿ ಹಾಕಬೇಕ? ಎಂದು ಕಿಡಿಕಾರಿದರು. ಅಲ್ಲದೆ, ಈ ಸಮಸ್ಯೆಯನ್ನು ಶೀಘ್ರ ಪಡಿಹರಿಸಿ ಪ್ರತಿ 15 ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಬೇಕು” ಎಂದರು.