ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ಟಿಸಿ)ಯ ಎಲ್ಲ ಸಿಬ್ಬಂದಿ ಹತ್ತು ಮಾದರಿಯ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಿಸಲು ಐದು ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯವರೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ ಎಂದು ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನಿಗಮ, “ಕೆಎಸ್ಆರ್ಟಿಸಿಯಲ್ಲಿ ಒಟ್ಟು 34,000 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ 24,686 ಚಾಲಕ ಮತ್ತು ನಿರ್ವಾಹಕರಿದ್ದಾರೆ. ನಿಗಮದ ನೌಕರರ ಕಾರ್ಯಸ್ವರೂಪ, ಜೀವನಶೈಲಿ ಮತ್ತು ಇತರೆ ಕಾರಣಗಳಿಂದಾಗಿ ನೌಕರರಲ್ಲಿ ಹೃದಯಾಘಾತ/ ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ತೀರಾ ಸಾಮಾನ್ಯವಾಗಿದೆ. ಅದರಲ್ಲೂ 40 ವರ್ಷ ಮೇಲ್ಪಟ್ಟ ಚಾಲಕರು, ನಿರ್ವಾಹಕರು ಹಾಗೂ ಇತರೆ ಸಿಬ್ಬಂದಿಗಳಲ್ಲಿ ಹೃದಯ ಸಂಬಂಧಿ ಖಾಯಿಲೆ ಹೆಚ್ಚಾಗಿ ಕಂಡುಬರುತ್ತಿವೆ” ಎಂದು ಹೇಳಿದೆ.
“ಹಾಗಾಗಿ, ನಿಗಮದ ಸಮಸ್ತ ಸಿಬ್ಬಂದಿ ಹೃದಯ ಸಂಬಂಧಿಸಿದ ನಿರ್ದಿಷ್ಟವಾದ ಪರೀಕ್ಷೆ/ ತಪಾಸಣೆಗಳಿಗೆ ಒಳಪಡಿಸುವ ಅವಶ್ಯಕತೆ ಮನಗಂಡು, ನೌಕರರಲ್ಲಿ ಜಾಗೃತಿ/ ಅರಿವು ಮೂಡಿಸಿ, ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಅನುವಾಗುವ ಉದ್ದೇಶದಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಹೃದಯ ಸಂಬಂಧಿ ಹತ್ತು ಇತರೆ ವೈದ್ಯಕೀಯ ತಪಾಸಣೆಗಳನ್ನು ನೌಕರರಿಗೆ ಮಾಡಿಸಲು ತೀರ್ಮಾನಿಸಿ, ಮುಂದಿನ ಐದು ವರ್ಷಗಳ ಅವಧಿಯ ಒಡಂಬಡಿಕೆಯನ್ನು ನ.2 ರಂದು ಮಾಡಿಕೊಳ್ಳಲಾಗಿದೆ” ಎಂದು ತಿಳಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಸಿ.ಎನ್ ಮಂಜುನಾಥ್ ರವರು, “ಮನುಷ್ಯನ ಆರೋಗ್ಯ ಬಹಳ ಮುಖ್ಯ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಮಾಣ ಅತಿ ಹೆಚ್ಚಳವಾಗಿದ್ದು, ಚಿಕ್ಕ ವಯಸ್ಸಿನವರಲ್ಲಿ ಇದು ಅಧಿಕವಾಗಿದೆ. ವಯಸ್ಸಾದ ತಂದೆ ತಾಯಿಗಳು ಮಕ್ಕಳನ್ನು ಆಸ್ಪತ್ರೆಗೆ ಕರೆತರುವ ಸ್ಥಿತಿ ಎದುರಾಗಿದೆ. ಮನುಷ್ಯನ ದೇಹವೇ ಅವನ ಪ್ರಮುಖ ಬಾಳ ಸಂಗಾತಿಯಾಗಿದ್ದು, ಅದನ್ನು ಯಾವುದೇ ಖಾಯಿಲೆಗಳಿಂದ ರಕ್ಷಿಸಿಕೊಳ್ಳುವುದು ಅವರ ಪ್ರಮುಖ ಜವಾಬ್ದಾರಿ ಆಗಿರುತ್ತದೆ” ಎಂದು ಹೇಳಿದ್ದಾರೆ.
“ಬಿಎಂಟಿಸಿಯಲ್ಲಿಯೂ ಈ ಯೋಜನೆಯಿದ್ದು, ಅಲ್ಲಿ 45 ವರ್ಷ ಮೇಲ್ಪಟ್ಟ ಸಿಬ್ಬಂದಿಗಳು ಈ ಯೋಜನೆಗೆ ಒಳಪಡುತ್ತಾರೆ. ಆದರೆ, ಕೆಎಸ್ಆರ್ಟಿಸಿಯಲ್ಲಿ 40 ವರ್ಷ ಮೇಲ್ಪಟ್ಟ ಸಿಬ್ಬಂದಿಗಳಿಗೆ ಈ ಯೋಜನೆ ಅನುಷ್ಠಾನ ಮಾಡಿರುವುದು ಒಳ್ಳೆಯದು. ಏಕೆಂದರೆ, ಈಗ 40 ರ ಆಸುಪಾಸಿನಲ್ಲಿಯೇ ಹೃದಯ ಸಂಬಂಧಿ ತೊಂದರೆಗಳು ಹೆಚ್ಚು ವರದಿಯಾಗುತ್ತಿವೆ” ಎಂದು ತಿಳಿಸಿದ್ದಾರೆ.
“ನಿಗಮವು ನಮ್ಮ ಜಯದೇವ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು ಇನ್ನು ಮುಂದೆ ಸಿಬ್ಬಂದಿಗಳ ಹೃದಯ ಸಂಬಂಧಿ ಕಾಯಿಲೆಗಳನ್ನು ಗುರುತಿಸಿ ಅಗತ್ಯ ಚಿಕಿತ್ಸೆ ಕೊಡುವ ಜವಾಬ್ದಾರಿ ನಮ್ಮ ಸಂಸ್ಥೆಯ ಮೇಲಿದ್ದು ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ತಪಾಸಣೆ ಹಾಗೂ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ನಮ್ಮ ಸಂಸ್ಥೆಯ ಮೈಸೂರಿನ ಕೇಂದ್ರದಲ್ಲಿಯೂ ಸಹ ಅಲ್ಲಿಗೆ ಸಮೀಪವಿರುವ ವಿಭಾಗಗಳ ಸಿಬ್ಬಂದಿಗಳಿಗೆ ತಪಾಸಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚೈತ್ರಾ ವಂಚನೆ ಪ್ರಕರಣ | ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಮುಂದಾದ ಸಿಸಿಬಿ
ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ವಿ ಅನ್ಬುಕುಮಾರ್ ಮಾತನಾಡಿ, “ಈಗಾಗಲೇ ನಿಗಮದ ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬದ ಹಿತದೃಷ್ಟಿಯಿಂದ ಹಲವು ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳನ್ನು ನಿಗಮವು ಜಾರಿಗೆ ತಂದಿದ್ದು, ಮುಂದುವರೆದ ಭಾಗವಾಗಿ ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವುದರಿಂದ 40 ವರ್ಷ ಮೇಲ್ಪಟ್ಟ 21 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಈ ಯೋಜನೆಯು ಉಪಯೋಗವಾಗಲಿದ್ದು, ತಪಾಸಣೆಗೆ ಒಳಗಾಗುವ ಪ್ರತಿ ನೌಕರರ ಪರವಾಗಿ ನಿಗಮವು ₹1200 ಅಂದರೆ ವಾರ್ಷಿಕ ₹ 2.55 ಕೋಟಿ ಜಯದೇವ ಆಸ್ಪತ್ರೆಗೆ ಪಾವತಿ ಮಾಡುತ್ತದೆ. ಈ ಯೋಜನೆಯು ಅಂದಾಜು 62% ಕಾರ್ಮಿಕರಿಗೆ ಅನುಕೂಲವಾಗಲಿದೆ” ಎಂದು ತಿಳಿಸಿದರು.