ಶ್ರೀರಾಮಸೇನೆ ಕಾರ್ಯಕರ್ತರಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನದ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ಹೇರಿರುವುದಾಗಿ ಚಿಕ್ಕಮಗಳೂರು ಜಿಲ್ಲಾಡಳಿತ ಹೇಳಿದೆ.
ಜಿಲ್ಲಾಡಳಿತದ ಆದೇಶದ ಹಿನ್ನೆಲೆಯಲ್ಲಿ ಕೈಮರ ಚೆಕ್ ಪೋಸ್ಟ್ ಬಳಿ ವಾಹನ ತಡೆದು ವಾಪಸ್ ಕಳುಹಿಸುತ್ತಿದ್ದಾರೆ. ವಾರಾಂತ್ಯದ ಹಿನ್ನೆಲೆಯಲ್ಲಿ ಸಾವಿರಾರು ಪ್ರವಾಸಿಗರು ಪ್ರವಾಸಿತಾಣಗಳಿಗೆ ಪ್ರವಾಸಕ್ಕೆ ಬಂದಿದ್ದು, ನಿರ್ಬಂಧದ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ವಾಪಸ್ ಕಳುಹಿಸುತ್ತಿದ್ದಾರೆ.
ಕಾಫಿನಾಡಿನ ಇನಾಂ ದತ್ತಾತ್ರೇಯ ಪೀಠದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು 20ನೇ ವರ್ಷದ ದತ್ತಮಾಲಾ ಅಭಿಯಾನ ಕೈಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಸಾವಿರಕ್ಕೂ ಹೆಚ್ಚು ದತ್ತ ಭಕ್ತರು ಮಾಲಾಧಾರಿಗಳಾಗಿ, 7 ದಿನಗಳ ಕಾಲ ವ್ರತಾಚರಣೆಯಲ್ಲಿದ್ದು, ನವೆಂಬರ್ 5ರಂದು ದತ್ತಪೀಠದಲ್ಲಿ ವಿಶೇಷ ಹೋಮ-ಹವನ ನಡೆಸಲಿದ್ದಾರೆ. ಈ ವರ್ಷದ ದತ್ತಮಾಲಾ ಅಭಿಯಾನಕ್ಕೆ ನಾಗಸಾಧು ಕೂಡ ಆಗಮಿಸಲಿದ್ದಾರೆ. ಹೀಗಾಗಿ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು, ಪ್ರವಾಸಿಗರಿಗೆ ನಿರ್ಬಂಧ ಹೇರಿದೆ.
“ದತ್ತಪೀಠದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಬೇಕು. ಪುರುಷರು-ಮಹಿಳೆಯರು ಹಿಂದೂ ಧರ್ಮದ, ಸಂಸ್ಕೃತಿಯ ವಸ್ತ್ರಗಳನ್ನೇ ಧರಿಸಿ ಬರುವಂತೆ ಸರ್ಕಾರ ಕಾನೂನು ರಚಿಸಬೇಕು. ದತ್ತಪೀಠದಲ್ಲಿನ ಗೋರಿಗಳನ್ನು ನಾಗೇನಗಳ್ಳಿಗೆ ಸ್ಥಳಾಂತರಿಸಬೇಕು. ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವೂ ಆಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಾಲಯದಲ್ಲಿ ಶಾಖಾದ್ರಿಗೆ ಏನು ಕೆಲಸ” ಎಂದು ಶ್ರೀರಾಮಸೇನೆ ಪ್ರಶ್ನಿಸಿದೆ.
ಈ ಸುದ್ದಿ ಓದಿದ್ದೀರಾ? ಗದಗ | ಬರಪರಿಹಾರ ಹಾಗೂ ಇತರ ಬೇಡಿಕೆ ಈಡೇರಿಕೆಗೆ ಆಗ್ರಹ
ನವೆಂಬರ್ 4ರಿಂದ 6ರವರೆಗೂ ಚಂದ್ರದ್ರೋಣ ಪವರ್ತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ವಿಧಿಸಿದೆ. ಈ ಹಿನ್ನೆಲೆಯಲ್ಲಿ ದತ್ತಪೀಠ ಹಾಗೂ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಮುಂಜಾಗೃತ ಕ್ರಮವಾಗಿ ಎಸ್ಪಿ ವಿಕ್ರಂ ಅಮಟೆ ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.