ಮಡಿಕೇರಿ ನಗರದ ಮನೆಯೊಂದರಲ್ಲಿದ್ದ ವೃದ್ಧೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಿದ್ದು, ಈತನ ಬಳಿಯಲ್ಲಿದ್ದ 27 ಗ್ರಾಂನ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಐಡಿಬಿಐ ಬ್ಯಾಂಕ್ ಮುಂಭಾಗದ ಮನೆಯ ನಿವಾಸಿ, ಬಿ ಇ ಸಾಕಮ್ಮ ಪ್ರಭಾಕರ ಎಂಬುವವರ ಮೇಲೆ ಭಾನುವಾರ ಸಂಜೆ ಸುಮಾರು 6 ಗಂಟೆಯ ಹೊತ್ತಿಗೆ, ಮನೆಯ ಹಿಂಭಾಗದಿಂದ ಅಕ್ರಮವಾಗಿ ಒಳಗೆ ಪ್ರವೇಶಿಸಿದ ಆರೋಪಿ, ಸಾಕಮ್ಮ ಅವರ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಹಾಗೂ ಉಂಗುರವನ್ನು ದೋಚಿದ್ದ ಎಂದು ಹೇಳಲಾಗಿದೆ.
ಘಟನೆ ನಡೆದ ಬಳಿಕ ಎಸ್ಪಿ ಕೆ. ರಾಮರಾಜನ್, ಎಎಸ್ಪಿ ಸುಂದರ್ ರಾಜ್ ಕೆ ಎಸ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಪೊಲೀಸ್ ಠಾಣೆಯ ಪಿಎಸ್ಐ ಲೋಕೇಶ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ, ಸಾಕ್ಷಾಧಾರಗಳನ್ನು ಕಲೆಹಾಕಿದ್ದರು. ಆದರೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ಉಮೇಶ್, ಉಪ್ಪಳಿಕೆ ಅವರು ಎಲ್ಲ ಹೊಟೇಲ್, ಹೋಂಸ್ಟೇ ಮತ್ತು ರೆಸಾರ್ಟ್ ಮಾಹಿತಿ ನೀಡಿ ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.
ಪ್ರಕರಣವನ್ನು ಭೇದಿಸುವ ಸಲುವಾಗಿ ಮಡಿಕೇರಿ ನಗರ ವೃತ್ತದ ಸಿಪಿಐ ಅನೂಪ್ ಮಾದಪ್ಪ ಅವರು ಉಪವಿಭಾಗ ಮಟ್ಟದಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳು ಮತ್ತು ಡಿಸಿಆರ್ಬಿ ಸಿಬ್ಬಂದಿಗಳನ್ನು ಒಳಗೊಂಡಂತೆ ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡು, ನಗರದ ಅಂಚಿನ ಇಬ್ಬನಿ ರೆಸಾರ್ಟ್ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಆರೋಪಿ ವಿಕಾಸ್ ಜೋರ್ಡಿಯಾ ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಅಧಿಕಾರಿ ಪ್ರತಿಮಾ ಹತ್ಯೆ | ನ.15 ರವರೆಗೆ ಆರೋಪಿ ಕಿರಣ್ ಪೊಲೀಸ್ ಕಸ್ಟಡಿಗೆ
ಪ್ರಕರಣ ಭೇದಿಸುವಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಸ್ಪಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.
“ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಇಲ್ಲವೇ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಹಾಗೂ ಕೆಎಸ್ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸಬೇಕು. ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ” ಎಂದು ಎಸ್ಪಿ ಕೆ ರಾಮರಾಜನ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.