ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಪೂಜಾರಿಗೆ ₹5 ಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ನ.11ರಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹಾಲಶ್ರೀ ಜೈಲಿನಿಂದ ಹೊರಬರುತ್ತಿದ್ದಂತೆಯೇ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೇಸರಿ ಶಾಲು ಹೊದಿಸಿ ಸ್ವಾಗತಿಸಿದ್ದಾರೆ.
ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಹೈಕೋರ್ಟ್ನಿಂದ ಜಾಮೀನು ಮಂಜೂರು ಹಿನ್ನೆಲೆ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಏನಿದು ಪ್ರಕರಣ?
ಚೆಫ್ ಟಾಕ್ ಸಂಸ್ಥೆ ಮುಖ್ಯಸ್ಥನಾಗಿರುವ ಗೋವಿಂದ ಬಾಬು ಪೂಜಾರಿ ಎಂಬುವವರು ಬೈಂದೂರು ವಿಧಾನಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಕಳೆದ 2023 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಮತ್ತು ಸಹಚರರು ಪೂಜಾರಿ ಅವರಿಗೆ ₹5 ಕೋಟಿ ವಂಚಿಸಿದ್ದರು.
ಟಿಕೆಟ್ ಸಿಗದೆ ವಂಚನೆಗೆ ಒಳಗಾದ ಗೋವಿಂದ ಬಾಬು ಪೂಜಾರಿ ಬೆಂಗಳೂರು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಚೈತ್ರಾ ಕುಂದಾಪುರ ವಿರುದ್ಧ ದೂರು ದಾಖಲಿಸಿದ್ದರು. ಬಳಿಕ ಈ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತೆ ಚೈತ್ರಾ ಕುಂದಾಪುರ, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಎಂಬವರನ್ನು ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದರು.
ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಹಾಲಶ್ರೀ ಪರ ವಕೀಲರು ಮನವಿ ಮಾಡಿದ್ದರು.
ದೂರುದಾರರಿಂದ 1.5 ಕೋಟಿ ರೂ. ಪಡೆದ ಆರೋಪದ ಮೇಲೆ ಹಾಲಶ್ರೀ ಸ್ವಾಮೀಜಿಯನ್ನು 2023 ರ ಸೆ.19 ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್ನಲ್ಲಿ ಬಂಧಿಸಿದ್ದರು. ಬಂಧನದ ಭೀತಿಯಿಂದ ಕಾವಿ ತೆಗೆದು ಅಭಿನವ ಹಾಲಶ್ರೀ ಟೀ ಶರ್ಟ್ ಧರಿಸಿದ್ದರು.
ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿಗೆ ಸೂಚಿಸಿತ್ತು. ಈ ನಡುವೆ ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ಕೂಡ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.
ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಅಭಿನವ ಹಾಲಶ್ರೀ, ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಹಾಲಾಶ್ರೀಗೆ ಜಾಮೀನು ನೀಡದಂತೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿತ್ತು. ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು.
ಹೈಕೋರ್ಟ್ ಏಕ ಸದಸ್ಯ ಪೀಠವು ಅಭಿನವ ಹಾಲಶ್ರೀಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆ, ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಇಸ್ಟೀಟ್ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು
ಜೈಲಿನಿಂದ ಬಿಡುಗಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಭಿನವ ಹಾಲಶ್ರೀ, “ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡಬೇಕು. ತನಿಖೆ ನಡೆಸುವಾಗ ಇದನ್ನು ಪರಿಗಣನೆ ಮಾಡಬೇಕು. ಮುಂದೊಂದು ದಿನ ಈ ಪ್ರಕರಣದ ಬಗ್ಗೆ ಮಾತನಾಡುತ್ತೇನೆ” ಎಂದು ಹೇಳಿದರು.
“ನಮ್ಮನ್ನು ನಂಬಿ ಆರಾಧಿಸುವ ಸಮಾಜಕ್ಕೆ ನಮ್ಮ ಮೇಲೆ ನಂಬಿಕೆಯಿಟ್ಟಿರುವ ಭಕ್ತ ಸಮೂಹದ ಆಶಯಕ್ಕೆ ಯಾವುದೇ ಧಕ್ಕೆ ಬರದಂತೆ ಬದುಕು ಕಟ್ಟಿಕೊಂಡು ಬಂದಿದ್ದೇನೆ. ಮುಂದೆಯೂ ಆದೇ ರೀತಿ ಬದುಕು ಸಾಗಿಸುತ್ತೇನೆ” ಎಂದು ಹೇಳಿದರು.
ಈ ಪ್ರಕರಣದಲ್ಲಿ ಅಭಿನವ ಹಾಲಶ್ರೀ ಜಾಮೀನು ಪಡೆದ ಮೊದಲ ಆರೋಪಿಯಾಗಿದ್ದಾರೆ.