“ವಿರೋಧ ಪಕ್ಷದ ನಾಯಕರ ಆಯ್ಕೆ ಸಂಬಂಧ ಮುಂದಿನ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ಆಗಲಿದೆ. ಬಿಜೆಪಿಯ ಶಾಸಕರೆಲ್ಲರೂ ಆಕಾಂಕ್ಷಿಗಳಾಗಿದ್ದು, ಅದರಲ್ಲಿ ನಾನೂ ಕೂಡ ಒಬ್ಬ” ಎಂದು ಶಾಸಕ ಡಾ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ 28ಕ್ಕೆ 28 ಸ್ಥಾನವನ್ನೂ ಗೆಲ್ಲಲಿದ್ದೇವೆ. ಈ ಬಾರಿ ಮತ್ತೆ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ಬಿ ವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವುದನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ವಿಜಯೇಂದ್ರ ಯುವಕರಿದ್ದಾರೆ, ಪಕ್ಷವನ್ನು ಸಮರ್ಥವಾಗಿ ಕಟ್ಟುತ್ತಾರೆ. ಸಾಕಷ್ಟು ಜನ ಅಕಾಂಕ್ಷಿಗಳಿದ್ದು, ಅದರಲ್ಲಿ ಹಿರಿಯರೂ ಇದ್ದರು. ಅದರ ನಡುವೆಯೂ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ. ಇದರ ನಡುವೆ ಸೋಮಣ್ಣ ಪ್ರಭಾವಿ ನಾಯಕರು, ಅವರಿಗೆ ಎಲ್ಲ ರೀತಿಯ ಅರ್ಹತೆ ಇದೆ. ಜೊತೆಗೆ ಸಿ ಟಿ ರವಿ ಪಕ್ಷದ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಒಬ್ಬರಿಗೆ ಒಂದು ಹುದ್ದೆ ಮಾತ್ರ ಕೊಡಲು ಸಾಧ್ಯ” ಎಂದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ನ.15ರಂದು ಅಧಿಕಾರ ಸ್ವೀಕಾರ: ಶಾಸಕ ಬಿ ವೈ ವಿಜಯೇಂದ್ರ
“ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಪತನವನ್ನು ನಾವೇನು ಮಾಡುವುದಿಲ್ಲ. ಅವರ ಪಕ್ಷದವರಿಂದಲೇ ಸರ್ಕಾರ ಬೀಳಲಿದೆ. ಅವರ ಪಕ್ಷದಲ್ಲೇ ಸಾಕಷ್ಟು ಒಡಕುಗಳಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಕಾಂಕ್ಷಿಗಳ ದಂಡೇ ಇದೆ. ನಾನು ಸಿಎಂ ಆಗುತ್ತೇನೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಜತೆಗೆ ಪಕ್ಷದಲ್ಲಿಅಸಮಾಧಾನಗೊಂಡವರೂ ಇದ್ದಾರೆ. ಅವರೆಲ್ಲ ಸಿದ್ದರಾಮಯ್ಯ ಅವರನ್ನ ಉಡೀಸ್ ಮಾಡುತ್ತಿದ್ದು, ಮಂತ್ರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ. ಅಂತಹವರನ್ನು ಸಚಿವ ಸಂಪುಟದಿಂದ ಹೊರ ಹಾಕಬೇಕು. ಜತೆಗೆ ಚಾಮುಂಡೇಶ್ವರಿ ತಾಯಿ ಸಿದ್ದರಾಮಯ್ಯಗೆ ಶಕ್ತಿ ನೀಡಲಿ” ಎಂದು ಹೇಳಿದರು.