- ‘ರಾಹುಲ್ ಜಾರಕಿಹೊಳಿ, ಮೃಣಾಲ್ ಹೆಬ್ಬಾಳ್ಕರ್ ಟಿಕೆಟ್ ಕೇಳಿಲ್ಲ’
- ‘ಚುನಾವಣೆ ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಆಗಲಿದೆ’
ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಲಿಂಗಾಯತ ಸಮುದಾಯದ ಅಭ್ಯರ್ಥಿ ಮತ್ತು ಚಿಕ್ಕೋಡಿ ಕ್ಷೇತ್ರಕ್ಕೆ ಕುರುಬ ಸಮುದಾಯ ಅಭ್ಯರ್ಥಿಗೆ ಅವಕಾಶ ಕೊಡಲು ಚಿಂತನೆ ನಡೆಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದುಕೊಳ್ಳಲು ಕಸರತ್ತು ಆರಂಭಿಸಿರುವ ಕಾಂಗ್ರೆಸ್, ಬೆಳಗಾವಿಯಲ್ಲಿ ಯಾವ ಸಮುದಾಯದ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ ಎಂಬುದರ ಬಗ್ಗೆ ಸುಳಿವು ಕೊಟ್ಟಿದ್ದಾರೆ.
ವಿಧಾನಸಭೆ ಚುನಾವಣೆ ರೀತಿ ಆಕಾಂಕ್ಷಿ ಅಭ್ಯರ್ಥಿಗಳಿಂದ ಟಿಕೆಟ್ಗಾಗಿ ಹಣ ಪಡೆಯುತ್ತೀರಾ ಎಂದು ಪ್ರಶ್ನಿಸಿದಾಗ, “ಉಚಿತವಾಗಿ ಲೋಕಸಭೆ ಅಭ್ಯರ್ಥಿಗಳ ಅರ್ಜಿಯನ್ನು ಸ್ವೀಕರಿಸುತ್ತೇವೆ. ಸಚಿವರು ಚುನಾವಣೆಗೆ ಸ್ಪರ್ಧಿಸಬೇಕೆಂದು ವರಿಷ್ಠರು ಸೂಚನೆ ನೀಡಿಲ್ಲ. ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಆಕಾಂಕ್ಷಿಗಳ ಹೆಸರು ಚರ್ಚೆ ಆಗಲಿದೆ. ಜನವರಿಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಾದರೆ ಒಳ್ಳೆಯದು” ಎಂದರು.
“ಗೆಲ್ಲುವ ಕುದುರೆಗೆ ಟಿಕೆಟ್ ನೀಡಲಾಗುವುದು. ಕಾರ್ಯಕರ್ತರ ಹಂತದಲ್ಲಿ ಲೋಕಸಭೆ ಚುನಾವಣೆಗೆ ತಯಾರಿ ಆಗುತ್ತಿದೆ. ರಾಹುಲ್ ಜಾರಕಿಹೊಳಿ, ಮೃಣಾಲ್ ಹೆಬ್ಬಾಳ್ಕರ್ ಟಿಕೆಟ್ ಕೇಳಿಲ್ಲ. ಯಾರು ಆಕಾಂಕ್ಷಿಗಳು ಅನ್ನುವುದು ಡಿಸೆಂಬರ್ನಲ್ಲಿ ಚರ್ಚೆ ಆಗಲಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋತವರೂ ಸ್ಪರ್ಧೆ ಮಾಡಬಹುದು” ಎಂದರು.
ಈ ಸುದ್ದಿ ಓದಿದ್ದೀರಾ? ಡೂಪ್ಲಿಕೇಟ್ ಸಿಎಂಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಎಚ್ ಡಿ ಕುಮಾರಸ್ವಾಮಿ ಕಿಡಿ
“ಅಧಿವೇಶನದ ಬಳಿಕ ಅಭ್ಯರ್ಥಿಗಳ ಬಗ್ಗೆ ತೀರ್ಮಾನ ಮಾಡುತ್ತೇವೆ. ಅಭ್ಯರ್ಥಿ ಆಯ್ಕೆಗೆ ಮಾನದಂಡ ಅಂದರೆ ಗೆಲ್ಲುವವನು ಆಗಿರಬೇಕು. ಜಾತಿ ಜೊತೆಗೆ ಜನಪ್ರಿಯತೆಯನ್ನು ಸಹ ಅಭ್ಯರ್ಥಿ ಹೊಂದಿರಬೇಕು. ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲುವ ಟಾರ್ಗೆಟ್ ಇದೆ” ಎಂದು ಹೇಳಿದರು.
ಡಿಸಿಎಂ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಚಳಿಗಾಲ ಅಧಿವೇಶನದ ಒಳಗೆ ಯಾರೂ ಡಿಸಿಎಂ ಆಗುವುದಿಲ್ಲ. ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಚರ್ಚೆ ಮಾಡಲು ಅವಕಾಶವಿದೆ. ಲೋಕಸಭೆ ಚುನಾವಣೆ ಬಳಿಕ ಡಿಸಿಎಂ ಮಾಡುತ್ತಾರೋ ಇಲ್ಲವೋ ಗೊತ್ತಿಲ್ಲ. ಹೆಚ್ಚುವರಿ ಡಿಸಿಎಂ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಬೇಕು” ಎಂದು ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಪಂಚ ರಾಜ್ಯಗಳ ಚುನಾವಣೆ ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಆಗಲಿದೆ” ಎಂದು ತಿಳಿಸಿದರು.
ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, “ವಿರೋಧ ಪಕ್ಷದಲ್ಲಿ ಇದ್ದಾರೆ, ಅವರಿಗೆ ಎಲ್ಲ ಮಾತನಾಡಲು ಹಕ್ಕಿದೆ. ನಾವು ಮಾತಾಡಬೇಡಿ ಅಂತಾ ಹೇಳಲು ಆಗುವುದಿಲ್ಲ. ನಮ್ಮ ಪಕ್ಷದಲ್ಲಿ, ನಮ್ಮ ಮಂತ್ರಿ ಮಂಡಲದಲ್ಲಿ ಯಾರು ಹಣ ಸಂಗ್ರಹಿಸಲು ಹೇಳಿಲ್ಲ. ವಿರೋಧ ಪಕ್ಷದಲ್ಲಿ ಸುಮ್ಮನೇ ಹೇಳುತ್ತಿದ್ದಾರೆ” ಎಂದರು.