ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಮಕ್ಕಳಿಗಿದು ಸುರಕ್ಷಿತ ತಾಣವೇ?

Date:

Advertisements

ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೂ ರಾಜ್ಯದ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳು ದುಸ್ಥಿತಿಯಲ್ಲಿವೆ. ಬೆಂಗಳೂರಿನ ಶಿವಾಜಿನಗರದ ಹಳೆಯ ಬಿಬಿಎಂಪಿ ಶಾಲೆಯೊಂದು ಮಂಗಳವಾರ ಕುಸಿದು ಬಿದ್ದಿರುವುದು ರಾಜ್ಯದ ಸರ್ಕಾರಿ ಶಾಲೆಗಳ ಪರಿಸ್ಥಿತಿಗೆ ನಿದರ್ಶನವಾಗಿದೆ. ಸರ್ಕಾರಿ ಶಾಲಾ ಕಟ್ಟಡಗಳನ್ನು ನಿರ್ವಹಣೆಗೆ ಅಗತ್ಯ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಸೂಚಿಸುತ್ತಿದೆ. ಅಲ್ಲದೆ, ಮಕ್ಕಳ ಜೀವಕ್ಕೆ ಅಪಾಯವಿದೆ ಎಂಬುದನ್ನೂ ತೋರಿಸುತ್ತಿದೆ.

ಶಿವಾಜಿನಗರ ಬಿಬಿಎಂಪಿ ಶಾಲೆ ಮಾತ್ರವಲ್ಲದೆ, ರಾಜ್ಯಾದ್ಯಂತ ಕುಸಿದು ಬೀಳುವ ಪರಿಸ್ಥಿತಿಯಲ್ಲಿ ಹಲವಾರು ಶಾಲಾ ಕಟ್ಟಡಗಳಿವೆ. ಹಲವೆಡೆ, ಕಟ್ಟಡಗಳ ಗೋಡೆಗಳು ಬಿರುಕುಬಿಟ್ಟಿವೆ. ಛಾವಣಿ ಹಾಳಾಗಿದೆ. ಸೆಪ್ಟೆಂಬರ್ 8ರಂದು ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಸರ್ಕಾರಿ ಶಾಲೆಯ ಛಾವಣಿ ಕುಸಿದು ಬಿದ್ದಿತ್ತು. ಅಲ್ಲದೆ, ಜುಲೈ 25ರಂದು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಛಾವಣಿಯೂ ಕುಸಿದಿತ್ತು. ಇಂತಹ ಹಲವಾರು ಘಟನೆಗಳು ಈ ವರ್ಷವೇ ನಡೆದಿವೆ. ಈ ಘಟನೆಗಳಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಲು ಹಿಂದೇಟು ಹಾಕುವುದಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತಿವೆ.

ಶಾಲಾ ಸಾಕ್ಷರತೆ ಮತ್ತು ಶಿಕ್ಷಣ ಇಲಾಖೆಗಳ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಸುಮಾರು 47,000 ಸರ್ಕಾರಿ ಶಾಲೆಗಳಿವೆ. ಅವುಗಳಲ್ಲಿ 45.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 2019 ಮತ್ತು 2023ರ ನಡುವೆ ಮುಖ್ಯಮಂತ್ರಿಗಳು ಶಿಕ್ಷಣಕ್ಕೆ ಉತ್ತೇಜನ ನೀಡುವುದಾಗಿ ಹೇಳುತ್ತಲೇ ಇದ್ದಾರೆ. ಆದರೆ, ಬೇರೆ ಬೇರೆ ಇಲಾಖೆಗಳಿಂದ ಅಗತ್ಯ ಮಂಜೂರಾತಿ ಪಡೆಯಲು ಶಿಕ್ಷಣ ಇಲಾಖೆ ಹರಸಾಹಸ ಪಡುತ್ತಲೇ ಇದೆ.

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 2023ರಲ್ಲಿ ತಮ್ಮ ಬಜೆಟ್ ಮಂಡಿಸಿದಾಗ, ‘ಸರ್ಕಾರವು 3,833 ಹಳೆಯದಾದ, ಶಿಥಿಲಗೊಂಡ ಮತ್ತು ಮಳೆಯಿಂದ ಹಾನಿಗೊಳಗಾದ ಶಾಲಾ ಕಟ್ಟಡಗಳನ್ನು ನವೀಕರಣಕ್ಕಾಗಿ ಪಟ್ಟಿ ಮಾಡಿದೆ. ಅದರಲ್ಲಿ 724 ಪದವಿಪೂರ್ವ ಕಾಲೇಜು ಕೊಠಡಿಗಳನ್ನು 100 ಕೋಟಿ ರೂ.ಗಳಲ್ಲಿ ನವೀಕರಿಸಲಾಗುತ್ತದೆ’ ಎಂದು ಹೇಳಿದ್ದರು. ಆದರೂ, ಹಲವೆಡೆ ಇನ್ನೂ ಕಾಮಗಾರಿಗಳು ಆರಂಭವಾಗಿಲ್ಲ. ಆರಂಭವಾಗಿರುವ ಕಾಮಗಾರಿಗೂ ಕುಂಟುತ್ತಾ ಸಾಗುತ್ತಿವೆ ಎಂದು ವರದಿಯಾಗಿದೆ.

ಬಸವರಾಜ ಬೊಮ್ಮಾಯಿ ಅವರ ಅಧಿಕಾರಾವಧಿಯಲ್ಲಿ 2,777 ಕೊಠಡಿಗಳು ಕಳಪೆ ಸ್ಥಿತಿಯಲ್ಲಿವೆ ಅಥವಾ ಮಳೆಯಿಂದ ಹಾನಿಗೊಳಗಾಗಿವೆ ಎಂದು ಸರ್ಕಾರ ಗುರುತಿಸಿತ್ತು. 2020-2021ರ ಬಜೆಟ್‌ನಲ್ಲಿ ಆಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 26 ಜಿಲ್ಲೆಗಳ 3,386 ಸರ್ಕಾರಿ ಶಾಲೆಗಳಲ್ಲಿ 6,469 ತರಗತಿ ಕೊಠಡಿಗಳನ್ನು 758 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತು ನಬಾರ್ಡ್ ಸಹಯೋಗದಲ್ಲಿ ಪುನರ್ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದರು. ಅದಕ್ಕೂ ಮುಂಚೆ, ಎಚ್‌ಡಿ ಕುಮಾರಸ್ವಾಮಿ ಅವರ ಸರ್ಕಾರದ ಅವಧಿಯಲ್ಲಿ 1,500 ಹೊಸ ಕೊಠಡಿಗಳನ್ನು ನಿರ್ಮಿಸಿ, 5,000 ತರಗತಿ ಕೊಠಡಿಗಳನ್ನು ಮೇಲ್ದರ್ಜೆಗೇರಿಸುವುದಾಗಿ ಹೇಳಲಾಗಿತ್ತು.

ಉದ್ದೇಶಿತ ಯೋಜನೆಗಳು ಮತ್ತು ಭರವಸೆಗಳು ಕಾರ್ಯರೂಪಕ್ಕೆ ಬರುವ ವೇಳೆಗೆ ಸರಿಯಾಗಿ ಅನುಷ್ಠಾನಗೊಳ್ಳುವುದಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪ್ರತಿ ವರ್ಷ ಕಟ್ಟಡಗಳ ಸ್ಥಿತಿಯನ್ನು ಪರಿಶೀಲಿಸಬೇಕು ಎಂದು ಶಿಕ್ಷಣ ತಜ್ಞರು ಹೇಳುತ್ತಾರೆ.

‘‘ಕಟ್ಟಡಗಳು ಎಷ್ಟು ಹಳೆಯವು, ಎಷ್ಟು ಕಾಲ ನಿರ್ವಹಣೆ ಮಾಡಬಹುದು ಎಂಬುದನ್ನು ನೋಡಿಕೊಳ್ಳಲು ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ವಿಭಾಗ ಇರಬೇಕು. ಅತ್ಯಂತ ಕಳಪೆ ಸ್ಥಿತಿಯಲ್ಲಿರುವ ಕಟ್ಟಡಗಳನ್ನು ನೆಲಸಮ ಮಾಡಬೇಕು. ಅಂತಹ ವಿಚಾರಗಳಲ್ಲಿ ಅನಾಹುತಗಳು ಸಂಭವಿಸುವವರೆಗೆ ಕಾಯಬಾರದು” ಎಂದು ಚೈಲ್ಡ್ ರೈಟ್ಸ್ ಟ್ರಸ್ಟ್ (ಸಿಆರ್‌ಟಿ) ನಿರ್ದೇಶಕ ವಾಸುದೇವ್ ಶರ್ಮಾ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X