- ಮೇ 8ರ ಸಂಜೆ 6 ಗಂಟೆಯಿಂದ ಚುನಾವಣಾ ವಿಷಯ ಪ್ರಸಾರ ನಿರ್ಬಂಧ ಜಾರಿ
- ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126ರ ಅನ್ವಯ ಪ್ರಸಾರ ನಿರ್ಬಂಧ
2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತದಾನ ಮೇ 10ರಂದು ನಡೆಯಲಿದೆ. ಈ ಹಿನ್ನೆಲೆ, ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126ರ ಪ್ರಕಾರ ಮೇ 9 ಮತ್ತು 10ರಂದು ಮುದ್ರಣ/ಎಲೆಕ್ಟ್ರಾನಿಕ್/ ಸೋಶಿಯಲ್ ಮೀಡಿಯಾ ಮಾಧ್ಯಮಗಳಲ್ಲಿ ಚುನಾವಣಾ ವಿಷಯ/ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ನಿರ್ಬಂಧಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, “ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮಾಟೋಗ್ರಾಫ್, ದೃಶ್ಯಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ನಿಷೇಧಿಸಲಾಗಿದೆ” ಎಂದು ತಿಳಿಸಿದ್ದಾರೆ.
“ಚುನಾವಣಾ ಸಂಬಂಧಿ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವಂತಹ ವಿಷಯಗಳಾಗಿರುತ್ತವೆ. ಈ ಕಾಯ್ದೆಯನ್ನು ಉಲ್ಲಂಘಿಸುವವರಿಗೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿದೆ” ಎಂದು ಹೇಳಿದ್ದಾರೆ.
“ಟಿವಿ/ರೇಡಿಯೋ/ಕೇಬಲ್ ನೆಟ್ವರ್ಕ್ ಮತ್ತು ಎಲ್ಲ ಡಿಜಿಟಲ್ ಮಾಧ್ಯಮಗಳು ಮತದಾನಪೂರ್ವ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳು ಪ್ರಸಾರ ಮಾಡದಂತೆ ಕ್ರಮವಹಿಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವವರು (ಪ್ಯಾನಲಿಸ್ಟ್) ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು/ಮನವಿಗಳು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಕೂಡ ಪ್ರಸಾರ ಮಾಡಕೂಡದು” ಎಂದು ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೋಚಾ ಚಂಡಮಾರುತ | ರಾಜ್ಯದಲ್ಲಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
“ನಿಗದಿತ 48 ಗಂಟೆಗಳ ಅವಧಿಯಲ್ಲಿ ಓಪಿನಿಯನ್ ಪೋಲ್ ಫಲಿತಾಂಶ ಪ್ರಕಟಿಸುವುದು ಚರ್ಚೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು. ಅದೇ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವುದು ಕೂಡ ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 126 ರ ವ್ಯಾಪ್ತಿಯಲ್ಲಿ ಬರುತ್ತದೆ. ಕರ್ನಾಟಕ ವಿಧಾನಸಭೆ ಚುನಾವಣೆ-2023ರ ಅಂಗವಾಗಿ ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದ್ದರಿಂದ ಎಲ್ಲ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮಗಳು ಮೇ 8 ರ ಸಂಜೆ 6 ಗಂಟೆಯಿಂದ ಮೇ 10 ರ ಸಂಜೆ 6.30 ಗಂಟೆಯವರೆಗೆ ನಿರ್ದೇಶನಗಳನ್ನು ಪಾಲಿಸಬೇಕು” ಎಂದು ತಿಳಿಸಿದ್ದಾರೆ.