- ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ಗಳವರೆಗಿನ ಬಳಕೆಯ ಮಿತಿ
- ಗೃಹಜ್ಯೋತಿ ಯೋಜನೆಯಡಿ ಭಾಗ್ಯ ಜ್ಯೋತಿ ಯೋಜನೆಯ ಫಲಾನುಭವಿಗಳು
2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದರೆ ಐದು ಗ್ಯಾರಂಟಿ ನೆರವೇರಿಸುವುದಾಗಿ ಭರವಸೆ ನೀಡಿತ್ತು. ಈಗ ಅದರಂತೆಯೇ ಜನರಿಗೆ ಗ್ಯಾರಂಟಿಗಳನ್ನು ನೀಡಲು ಮುಂದಾಗಿದ್ದು, ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಜ್ಯೋತಿ’ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದೆ.
‘ಗೃಹ ಜ್ಯೋತಿ’ ಯೋಜನೆಗೆ ಸರ್ಕಾರ ಈಗಾಗಲೇ ಅನುಮೋದನೆ ನೀಡಿದೆ. ಇದೀಗ ಯೋಜನೆ ಸಂಬಂಧ ಷರತ್ತು ಮತ್ತು ನಿಬಂಧನೆಗಳ ಕುರಿತು ಆದೇಶ ಹೊರಡಿಸಿದೆ.
‘ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್ಗಳ ಮೇಲೆ ಶೇಕಡ 10ರಷ್ಟು ಹೆಚ್ಚಿನ ವಿದ್ಯುತ್ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಸರ್ಕಾರ ಸೂಚಿಸಿದೆ. ಜತೆಗೆ 200 ಯೂನಿಟ್ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಹೇಳಿದೆ.
ಸರ್ಕಾರದಿಂದ ಪ್ರಸ್ತುತವಾಗಿ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ/ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯಡಿಯ ಫಲಾನುಭವಿಗಳನ್ನು ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಸೇರ್ಪಡೆಗೊಳಿಸಲಾಗಿದೆ ಎಂದು ತಿಳಿಸಿದೆ.
ಈ ಯೋಜನೆಯನ್ನು 2023ರ ಜುಲೈತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಕೆಲವು ಷರತ್ತುಗಳೊಂದಿಗೆ ಜಾರಿಗೆ ತರಲು ಸರ್ಕಾರ ಆದೇಶಿಸಿದೆ. ಅವು ಇಂತಿವೆ.
ಈ ಸುದ್ದಿ ಓದಿದ್ದೀರಾ? ಜೂನ್ 12 ಅಥವಾ 14 ರಂದು ಸಿಇಟಿ ಪ್ರವೇಶ ಪರೀಕ್ಷೆಯ ಫಲಿತಾಂಶ
1. ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ. ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.
2. ಪ್ರತಿ ತಿಂಗಳ ಮಿಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.
3. ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ ನೆಟ್ ಬಿಲ್ ನೀಡುವುದು ಹಾಗೂ ಗ್ರಾಹಕರು ನೆಟ್ ಬಿಲ್ ಅನ್ನು ಪಾವತಿಸುವುದು.
4. ಅರ್ಹ ಯೂನಿಟ್/ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ ನೀಡಲಾಗುವುದು.
5. ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು
6. ಪ್ರತಿ ಫಲಾನುಭವಿಯು ತನ್ನ ಕಸ್ಟಮರ್ ಐಡಿ ಅಥವಾ ಅಕೌಂಟ್ ಐಡಿ (Customer ID / Account ID) ಅನ್ನು ಆಧಾರ್ಗೆ ಕಡ್ಡಾಯವಾಗಿ ಜೋಡಣೆ ಮಾಡಿರಬೇಕು.
7. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ | ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸಲಾಗುವುದು.
8. ಜೂನ್ ಅಂತ್ಯಕ್ಕೆ ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸಬೇಕು. ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಹೇಳಿದೆ.
9. ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು ಎಂದು ತಿಳಿಸಿದೆ.
Good