“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ನೀಡಲಾಗಿರುವ ಕಾರ್ಯಸೂಚಿಯಂತೆ, ಬೃಹತ್ ನೀರುಗಾಲುವೆ ವಿಭಾಗದ ಕಾರ್ಯಪಾಲಕ ಅಭಿಯಂತರರು 10 ದಿನಗಳಲ್ಲಿ ಹೊಸ ಒತ್ತುವರಿ ಗುರುತಿಸಬೇಕು. ಇದು ಕೊನೆಯ ಅವಕಾಶವಾಗಿರುತ್ತದೆ. ಒಂದು ವೇಳೆ ಒತ್ತುವರಿ ತೆರವು ಕಾರ್ಯಾಚರಣೆ ಮಾಡುವಲ್ಲಿ ವಿಫಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ವಿಭಾಗ ಹಾಗೂ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆ, ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳು ಹಾಗೂ ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಅವರು, “ರಾಜಕಾಲುವೆ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ, ತಹಶೀಲ್ದಾರ್ ಅವರು ತೆರವು ನೋಟಿಸ್ ಜಾರಿ ಮಾಡಿ, ಬಳಿಕ ಆಯಾ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ರಾಜಕಾಲುವೆಯ ಒತ್ತುವರಿ ತೆರವು ಮಾಡುವ ಜವಾಬ್ದಾರಿ ನೀಡಬೇಕು. ನಿಗದಿತ ಸಮಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕು” ಎಂದು ತಿಳಿಸಿದರು.
“ರಾಜಕಾಲುವೆ ಒತ್ತುವರಿಯಾಗಿದ್ದಲ್ಲಿ ಅದನ್ನು ಭೂಮಾಪಕರ ಮೂಲಕ ಸಮೀಕ್ಷೆ ನಡೆಸಿ ತಹಶೀಲ್ದಾರರ ಮೂಲಕ ಒತ್ತುವರಿದಾರರಿಗೆ ನೋಟಿಸ್ ನೀಡಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕು” ಎಂದು ಸೂಚನೆ ನೀಡಿದರು.
ಕೆರೆಗಳ ಒತ್ತುವರಿ ತೆರವು
“ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಯಾವ್ಯಾವ ಕೆರೆಯಲ್ಲಿ ಒತ್ತುವರಿಯಾಗಿದೆ ಎಂಬುದರ ಬಗ್ಗೆ ಕೆರೆಗಳ ವಿಭಾಗದ ಕಾರ್ಯಪಾಲಕ ಅಭಿಯಂತರರು 3 ದಿನಗಳಲ್ಲಿ ಆಯಾ ವಲಯ ಉಪ ವಿಭಾಗಗಳಲ್ಲಿ ಬರುವ ಕಾರ್ಯಪಾಲಕ ಅಭಿಯಂತರರಿಗೆ 7 ದಿನದೊಳಗಾಗಿ ಒತ್ತುವರಿಯಾಗಿದೆಯೇ ಎಂಬುದರ ಬಗ್ಗೆ ಮಾಹಿತಿ ನೀಡಬೇಕು. ಆ ಬಳಿಕ ತಹಶೀಲ್ದಾರರು 7 ದಿನಗಳಲ್ಲಿ ಸರ್ವೇ ನಡೆಸಿ ಒತ್ತುವರಿಯಾಗಿದ್ದರೆ, ಒತ್ತುವರಿ ಮಾಡಿರುವವರಿಗೆ ನೋಟಿಸ್ ಜಾರಿಗೊಳಿಸಬೇಕು. ಅನಂತರ ಸಕ್ಷಮ ಪ್ರಾಧಿಕಾರದಡಿ ಕಾಲಾವಕಾಶ ನೀಡಿ ಆ ಸಮಯದಲ್ಲಿ ಒತ್ತುವರಿ ತೆರವಾಗದಿದ್ದಲ್ಲಿ ಕೂಡಲೇ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ
“ನಗರದಲ್ಲಿ 198 ಪ್ರವಾಹ ಪೀಡಿದ ಸೂಕ್ಷ್ಮ ಪ್ರದೇಶಗಳ ಪೈಕಿ 124 ಸ್ಥಳಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಾಕಿ 74 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೂಕ್ತ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಿರಲು ಆಯಾ ವಲಯ ವ್ಯಾಪ್ತಿಯ ಪಾಲಿಕೆ ಹಿರಿಯ ಅಧಿಕಾರಿಗಳು ಪ್ರಮುಖ ಪ್ರವಾಹ ಪೀಡಿದ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ, ಆ ಸ್ಥಳಗಳಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು: ಮುಖ್ಯಮಂತ್ರಿ ಚಂದ್ರು
ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿ
“ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ಆಯಾ ವಲಯದ ಎಲ್ಲ ಮುಖ್ಯ ಅಭಿಯಂತರರು ಸೂಕ್ತ ಕ್ರಮಗಳನ್ನು ಕೈಗೊಂಡು ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಬೇಕು”ಎಂದು ಹೇಳಿದರು.
“ಫಿಕ್ಸ್ ಮೈ ಸ್ಟ್ರೀಟ್ ತಂತ್ರಾಂಶದಲ್ಲಿ ಬರುವಂತಹ ದೂರುಗಳ ಆಧಾರದ ಮೇಲೆ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಬೇಕು. ಈ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ನಿಯೋಜನೆ ಮಾಡಿರುವ ಗುತ್ತಿಗೆದಾರರಿಂದ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ದೋಷ ಮುಕ್ತ ಅವಧಿ(ಡಿ.ಎಲ್.ಪಿ)ಯಲ್ಲಿರುವ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದರೆ, ಸಂಬಂಧಪಟ್ಟ ಗುತ್ತಿಗೆದಾರರಿಂದಲೇ ರಸ್ತೆಗುಂಡಿಗಳನ್ನು ಮುಚ್ಚಿಸಬೇಕು” ಎಂದು ಸೂಚನೆ ನೀಡಿದರು.
ಸಭೆಯಲ್ಲಿ ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ಡಾ. ತ್ರಿಲೋಕ್ ಚಂದ್ರ, ಡಾ. ಹರೀಶ್ ಕುಮಾರ್, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್, ಎಲ್ಲ ವಲಯ ಜಂಟಿ ಆಯುಕ್ತರು, ಎಲ್ಲ ವಲಯ ಮುಖ್ಯ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.