ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ, ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಅವರನ್ನು ಮತ್ತೆ ಪೊಲೀಸರು ವಶಕ್ಕೆ ಪಡೆದು 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಆದರೆ, ನ್ಯಾಯಾಲಯ ಜಾಮೀನು ಅರ್ಜಿಯ ತೀರ್ಪನ್ನು ನಾಳೆಗೆ ಕಾಯ್ದಿರಿಸಿದ ಹಿನ್ನೆಲೆ, ಅವರು ಇನ್ನೊಂದು ದಿನ ಜೈಲಿನಲ್ಲಿಯೇ ಕಳೆಯುವಂತಾಗಿದೆ.
ಬೆಂಗಳೂರಿನ ವಾಣಿಜ್ಯ ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕರವೇ ಅಧ್ಯಕ್ಷ ನಾರಾಯಣಗೌಡ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆ, ಅವರು ಮಂಗಳವಾರ ಬಿಡುಗಡೆಯಾಗಿದ್ದರು. ಅವರು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ, ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ ಪೊಲೀಸರು ಅವರನ್ನು ವಶಕ್ಕೆ ಪಡೆದು, ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ, ಕಾನೂನು ಪ್ರಕ್ರಿಯೆ ಆರಂಭಿಸಿ, ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಯ ನಂತರ 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಈ ಸಂದರ್ಭದಲ್ಲಿ ಜಾಮೀನು ಕೋರಿ ಕರವೇ ಪರ ವಕೀಲರು ವಾದ ಮಂಡಿಸಿದರು. ನ್ಯಾಯಾಲಯ ಜಾಮೀನು ಅರ್ಜಿಯ ತೀರ್ಪನ್ನು ಬುಧವಾರ ಕಾಯ್ದಿರಿಸಿದೆ. ಹೀಗಾಗಿ ಇನ್ನೊಂದು ದಿನ ಅವರು ಜೈಲಿನಲ್ಲಿ ಕಾಲ ಕಳೆಯಬೇಕಾಗಿದೆ.
ಏನಿದು ಹಳೆಯ ಪ್ರಕರಣ?
ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 2017ರಲ್ಲಿ ಹಿಂದಿ ಬಳಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸತತವಾಗಿ ಪ್ರತಿಭಟಿಸಿತ್ತು.
ಕರವೇಯ ಶಾಂತಿಯುತ ಹೋರಾಟಕ್ಕೆ ಕಿವಿಗೊಡದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧವೂ ಪ್ರತಿಭಟಿಸಿತ್ತು. ಈ ಹಿನ್ನೆಲೆ, 2017ರ ಜೂನ್ 20ರಂದು ಆ ಸಮಯದಲ್ಲಿ ಅಸ್ತಿತ್ವದಲ್ಲಿ ಇದ್ದ 24 ಮೆಟ್ರೋ ನಿಲ್ದಾಣಗಳಿಗೆ ಬೆಳಗಿನ ಜಾವ 4 ರಿಂದ 5 ಗಂಟೆಗೆ 24 ಕರವೇ ಮುಖಂಡರ ತಂಡಗಳು ಏಕಕಾಲಕ್ಕೆ ಮೆಟ್ರೋ ನಿಲ್ದಾಣಗಳಿಗೆ ದಾಳಿ ನಡೆಸಿದ್ದವು.
ಮೆಟ್ರೋ ನಿಲ್ದಾಣದಲ್ಲಿದ್ದ ಬೋರ್ಡ್ಗಳಿಗೆ ಕಪ್ಪು ಮಸಿ ಬಳಿದು ಆಕ್ರೋಶ ಹೊರಹಾಕಿದ್ದರು. ಈ ಘಟನೆ ದೊಡ್ಡಮಟ್ಟದಲ್ಲಿ ಸುದ್ದಿಯಾಗಿತ್ತು.
ಈ ಘಟನೆ ಬಳಿಕ ಆಗಿನ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ‘ಮೆಟ್ರೋ ರಾಜ್ಯ ಸರ್ಕಾರದ ಯೋಜನೆ. ಹಾಗಾಗಿ, ಇಲ್ಲಿ ಹಿಂದಿ ಬಳಕೆ ಅವಶ್ಯಕತೆ ಇಲ್ಲ. ಹಿಂದಿ ಪದ ತೆಗೆದುಹಾಕುವುದಾಗಿ’ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಘಟನೆ ಬಳಿಕ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹಿಂದಿ ಪದಗಳು ಮರೆಯಾಗಿವೆ.
ಈ ಘಟನೆಗೆ ಸಂಬಂಧಿಸಿದಂತೆ ಕರವೇ ಅಧ್ಯಕ್ಷ ಮತ್ತು ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.
ನಾರಾಯಣಗೌಡ ಯಾವುದೇ ಮೆಟ್ರೋ ನಿಲ್ದಾಣಗಳಿಗೆ ಖುದ್ದಾಗಿ ಭೇಟಿ ನೀಡಿ, ಭಾಗವಹಿಸದೇ ಇದ್ದರೂ ಸಹ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದಲ್ಲಿರುವ ಹಿಂದಿ ನಾಮಫಲಕಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವೊಂದರಲ್ಲಿ ನಾರಾಯಣಗೌಡರನ್ನು ಸಹ ಆರೋಪಿಯನ್ನಾಗಿ ಮಾಡಲಾಗಿತ್ತು.
2017ರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಿನ್ನೆಲೆ, ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆ, ಪೊಲೀಸರು ನಾರಾಯಣಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ; ಶೀಘ್ರ ಜಾರಿ ಸಾಧ್ಯತೆ
ನಾರಾಯಣಗೌಡ ಬಂಧನದ ಹಿನ್ನೆಲೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಿಗೆ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಪದ ಬಳಕೆ ಮಾಡಬೇಕೆಂದು 2023ರ ಡಿಸೆಂಬರ್ 27ರಂದು ನಗರದಾದ್ಯಂತ ಪ್ರತಿಭಟನೆ ಮಾಡಿದ್ದರು.
ಪ್ರತಿಭಟನೆ ವೇಳೆ, ಕರವೇ ಕಾರ್ಯಕರ್ತರು ಮಾಲ್, ಹೋಟೆಲ್ ಹಾಗೂ ಇನ್ನಿತರ ವಾಣಿಜ್ಯ ಮಳಿಗೆಗಳ ನಾಮಫಲಕಗಳನ್ನು ಒಡೆದು ಹಾಕಿದ್ದರು. ಬೋರ್ಡ್ಗಳಿಗೆ ಕಪ್ಪು ಮಸಿ ಬಳಿದು ಆಕ್ರೋಶ ಹೊರಹಾಕಿದ್ದರು. ಮಾಲ್ ಹಾಗೂ ಹೋಟೆಲ್ಗಳ ಮೇಲೆ ಕಲ್ಲು, ಚಪ್ಪಲಿ ತೂರಾಡಿ, ಮಳಿಗೆಗಳ ಮುಂದಿದ್ದ ಗಾಜು ಹಾಗೂ ಹೂಕುಂಡಗಳನ್ನು ಒಡೆದು ಹಾಕಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ ನಾರಾಯಣಗೌಡ ಮತ್ತು ಕರವೇ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದವು. ಈ ಹಿನ್ನೆಲೆ, ಪೊಲೀಸರು ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿದ್ದರು.
ದೇವನಹಳ್ಳಿ ಐದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ನಾರಾಯಣಗೌಡರಿಗೆ ಶನಿವಾರ ಜಾಮೀನು ಮಂಜೂರು ಮಾಡಿತ್ತು. ಮಂಗಳವಾರ ಬೆಳಗ್ಗೆ ಪರಪ್ಪನ ಅಗ್ರಹಾರ ಜೈಲು ಬಳಿ ಬಂದ ಕುಮಾರಸ್ವಾಮಿ ಲೇಔಟ್ ಪೊಲೀಸರು ನಾರಾಯಣಗೌಡರನ್ನು ವಶಕ್ಕೆ ಪಡೆದು ಬಿಗಿಭದ್ರತೆಯಲ್ಲಿ ಕರೆದುಕೊಂಡು ಹೋದರು.
ನಾರಾಯಣಗೌಡ ಜತೆಗೆ ಬಂಧನಕ್ಕೊಳ್ಳಪ್ಪಟ್ಟಿದ್ದ ಉಳಿದ 28 ಮಂದಿ ಕರವೇ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ನಲ್ಲಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.