- ಬೈಕ್ ಟ್ಯಾಕ್ಸಿ ಚಾಲಕರ ಸುರಕ್ಷತೆಗೆ ಸರ್ಕಾರ ಒತ್ತು ನೀಡಬೇಕು
- ಬೈಕ್ ಸುಡುವುದಾಗಿ ಬೆದರಿಕೆ ಹಾಕಿದ್ದ ಒರ್ವ ಆಟೋ ಚಾಲಕ
ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕರ ಮತ್ತು ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ನಡುವಿನ ಹಗ್ಗಜಗ್ಗಾಟ ಮುಂದುವರೆದಿದ್ದು, ಆಟೋ ಚಾಲಕರ ದೌರ್ಜನ್ಯ ಖಂಡಿಸಿ ಬೈಕ್ ಟ್ಯಾಕ್ಸಿ ಅಸೋಸಿಯೇಶನ್ ನೇತೃತ್ವದಲ್ಲಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಧರಣಿ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಆಟೋ ಚಾಲಕರಿಂದ ನಡೆಯುತ್ತಿರುವ ನಿರಂತರ ದೌರ್ಜನ್ಯ ಖಂಡಿಸಿ, ಸೋಮವಾರ ನಗರದ ಪ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಿರಂತರ ದೌರ್ಜನ್ಯ ನಡೆಸಲಾಗುತ್ತಿದ್ದು, ಈ ಬಗ್ಗೆ ಸರ್ಕಾರ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು ಹಾಗೂ ಬೈಕ್ ಟ್ಯಾಕ್ಸಿ ಚಾಲಕರ ಸುರಕ್ಷತೆಗೆ ಒತ್ತು ನೀಡಬೇಕು ಎಂದು ಸಾವಿರಾರು ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ನಿರಂತರವಾಗಿ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಆಟೋ ಚಾಲಕರು ಹಲ್ಲೆ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ವಿಡಿಯೋಗಳು ವೈರಲ್ ಆಗಿವೆ. ಕೆಲವು ದಿನಗಳ ಹಿಂದೆ, ಒರ್ವ ಆಟೋ ಚಾಲಕ ಹೆಚ್ಎಸ್ಆರ್ ಲೇಔಟ್ನಲ್ಲಿ ಬೈಕ್ ಚಾಲಕನ ಹೆಲ್ಮೆಟ್ ಅನ್ನು ಒಡೆದು ಹಾಕಿದ್ದ ಘಟನೆ ನಡೆದಿತ್ತು. ಇಂದಿರಾನಗರ ಮೆಟ್ರೊ ನಿಲ್ದಾಣದ ಬಳಿ ಒರ್ವ ವಿದೇಶಿ ಯುವಕನ ಮೊಬೈಲ್ ಅನ್ನು ಆಟೋ ಚಾಲಕ ಒಡೆದು ಹಾಕಿ. ಆತನ ಮೇಲೆ ಕೈ ಮಾಡಲು ಮುಂದಾಗಿದ್ದನು. ಬೈಕ್ ಟ್ಯಾಕ್ಸಿ ರೈಡರ್ ವಾಣಿಜ್ಯ ಉದ್ದೇಶಗಳಿಗಾಗಿ ತನ್ನ ವಾಹನವನ್ನು ಬಳಸಿದ್ದಕ್ಕಾಗಿ ಆತನನ್ನು ಅವಾಚ್ಯವಾಗಿ ನಿಂದಿಸಿದಲ್ಲದೇ, ಬೈಕ್ ಸುಡುವುದಾಗಿ ಬೆದರಿಕೆ ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಹೀಗೆ ನಗರದಲ್ಲಿ ಬೈಕ್ ಟ್ಯಾಕ್ಸಿ ರೈಡರ್ಗಳ ಮೇಲೆ ಆಟೋ ಚಾಲಕರು ಪದೇ ಪದೇ ಕಿರುಕುಳ ನೀಡುತ್ತಿರುವ ಘಟನೆಗಳು ವರದಿಯಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಸೂಕ್ತ ಸುರಕ್ಷತಾ ಕ್ರಮಕ್ಕೆ ಆಗ್ರಹಿಸಿ ಬೈಕ್ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆಟೋ ಚಾಲಕರು ತಮ್ಮ ಸಮಸ್ಯೆಗೆ ಸಾರಿಗೆ ಇಲಾಖೆ ಜೊತೆ ಹಾಗೂ ಸರ್ಕಾರದ ಜೊತೆ ಮಾತಾಡಿ ಪರಿಹರಿಸಿಕೊಳ್ಳಡಬೇಕು. ಆದರೆ, ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ದೌರ್ಜನ್ಯ ಮಾಡಿದರೆ ಏನು ಪ್ರಯೋಜನ ಎಂದು ಬೈಕ್ ಟ್ಯಾಕ್ಸಿ ಚಾಲಕರು ಪ್ರಶ್ನಿಸುತ್ತಿದ್ದಾರೆ.