ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಯ ಮೇಲೆ ಸಂಘಪರಿವಾರದ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಗಿಸಲಾಗಿದೆ. ಪರೀಕ್ಷಾ ಅಕ್ರಮಗಳ ಕಾರಣಕ್ಕಾಗಿ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂದು ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಆಗ್ರಹಿಸಿದ್ದರು. ಆ ಕಾರಣಕ್ಕಾಗಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಜಾಲಹಳ್ಳಿಯಲ್ಲಿ ಹಲ್ಲೆ ಘಟನೆ ನಡೆದಿದೆ. ಜುಲೈ 28ರ ರಾತ್ರಿ ವಿದ್ಯಾರ್ಥಿ ತನ್ನ ಮನೆಗೆ ತೆರಳುತ್ತಿದ್ದಾಗ, ನಾಲ್ವರು ಅಪರಿಚಿತ ಮುಸುಕುಧಾರಿಗಳು ಆತನ ಮೇಲೆ ಹಲ್ಲೆ ನಡೆದಿದ್ದಾರೆ ಎಂದು ಹೇಳಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮರದ ದಿಮ್ಮಿಗಳಿಂದ ಹಲ್ಲೆ ನಡೆಸಿರುವ ಗೂಂಡಾಗಳು, “ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಕೇಳಲು ನಿನಗೆಷ್ಟು ಧೈರ್ಯ” ಎಂದು ಬೆದರಿಕೆ ಹಾಕಿದ್ದಾರೆ ಎಂದು ವಿದ್ಯಾರ್ಥಿ ಆರೋಪಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ‘ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್’ (ಎಐಎಸ್ಎ), “ತಮ್ಮ ಸಂಘಟನೆಯ ಸದಸ್ಯನ ಮೇಲೆ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಈ ಕೃತ್ಯದ ಹಿಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ಗೆ ಸಂಬಂಧಿಸಿದವರು ಇದ್ದಾರೆ” ಎಂದು ಆರೋಪಿಸಿದೆ.
ವಿದ್ಯಾರ್ಥಿಯ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಗುರುತು ಪತ್ತೆ ಹಚ್ಚಿ, ಬಂಧಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.



