- ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಅಧ್ಯಕ್ಷೆಯಾಗಿದ್ದ ಮಾಲಿನಿ
- ಸಾಲಿಗ್ರಾಮದಲ್ಲಿ ಕಾರಂತ ಸ್ಮೃತಿ ಭವನ ನಿರ್ಮಿಸಿದ್ದ ಮಾಲಿನಿ ಮಲ್ಯ
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಾಗೂ ನಾಡು ಕಂಡ ಪ್ರಖ್ಯಾತ ಸಾಹಿತಿ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ, ಸಾಹಿತಿ ಮಾಲಿನಿ ಮಲ್ಯ ಅವರು ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಅವರು ಮೃತಪಟ್ಟಿದ್ದಾರೆ. 72 ವರ್ಷದ ಮಾಲಿನಿ ಮಲ್ಯ ಅವರು ದೀರ್ಘಕಾಲದಿಂದ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದರು. ರೋಗವು ಉಲ್ಬಣವಾದ ಕಾರಣ ನಗರದ ಸಂಬಂಧಿಯೊಬ್ಬರ ಮನೆಯಲ್ಲಿ ನೆಲೆಸಿ, ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.
ಆರಂಭದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಬೆರಳಚ್ಚುಗಾರರಾಗಿ, ಅನಂತರ ಜೀವ ವಿಮಾ ನಿಗಮದಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿದ್ದರು. ಶಿವರಾಮ ಕಾರಂತರ ಕೊನೆಯ ದಿನಗಳವರೆಗೆ ಅವರೊಂದಿಗೆ ಆಪ್ತ ಸಹಾಯಕಿಯಾಗಿದ್ದರು. ಡಾ. ಶಿವರಾಂ ಕಾರಂತ ಅಧ್ಯಯನ ಕೇಂದ್ರದ ಅಧ್ಯಕ್ಷೆಯೂ ಆಗಿದ್ದರು.
ಸಾಲಿಗ್ರಾಮದಲ್ಲಿ ಕಾರಂತ ಸ್ಮೃತಿ ಭವನ ನಿರ್ಮಿಸಿ ಕಾರಂತ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದರು. ಶಿವರಾಮ ಕಾರಂತರ ಬದುಕು ಬರಹಗಳನ್ನು ಕನ್ನಡ ಓದುಗರಿಗೆ ಉಣಬಡಿಸಿದ ಅವರು, ಕಾರಂತರ ವೈಚಾರಿಕ ನೆಲೆ, ಜೀವನ ಪ್ರೀತಿಯನ್ನು ಮತ್ತಷ್ಟು ಅರ್ಥೈಸಿಕೊಳ್ಳುವಲ್ಲಿ ಕೊಡುಗೆ ನೀಡಿದವರು.
ಈ ಸುದ್ದಿ ಓದಿದ್ದೀರಾ? ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿ: ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರವಾಗಿ ನಿವೇಶನ
ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಉದ್ಯೋಗಿಯಾಗಿದ್ದ ಮಾಲಿನಿ, ಸ್ವತಃ ಕಾದಂಬರಿಗಾರ್ತಿಯಾಗಿದ್ದರು. ನಾನು ಕಂಡ ಕಾರಂತರು (ವ್ಯಕ್ತಿಚಿತ್ರ), ಗೊಂದಲಪುರದ ನಿಂದಲರು (ಕಾದಂಬರಿ), ದಾಂಪತ್ಯ ಗಾಥೆ (ಕಿರುಕಾದಂಬರಿ), ಶಿವರಾಮಕಾರಂತರ ಕಿನ್ನರಲೋಕ (ಲೇಖನ ಸಂಗ್ರಹ), ಚಿಣ್ಣರ ಲೋಕದಲ್ಲಿ ಕಾರಂತರು ಭಾಗ 1 ಮತ್ತು 2, ಸಾಹಿತ್ಯೇತರ ಕಾರಂತರು, ಕಾರಂತ ಉವಾಚ, ’ಶಿವರಾಮ ಕಾರಂತರ ವಾಙ್ಮಯ ವೃತ್ತಾಂತ, ಶಿವರಾಮ ಕಾರಂತರ ಕೃತಿ ಕೈಪಿಡಿ, ಶಿವರಾಮ ಕಾರಂತರ ಲೇಖನಗಳು-8 ಸಂಪುಟಗಳು, ಪಕ್ಷಿಗಳ ಅದ್ಭುತ ಲೋಕ, ಬಾಲಪ್ರಪಂಚ-3’ ಕೃತಿಗಳನ್ನು ಅವರು ರಚಿಸಿದ್ದಾರೆ.
ಅವರು ‘ನಾನು ಕಂಡ ಕಾರಂತರು ಕೃತಿ‘ ಸೇರಿದಂತೆ 30ಕ್ಕೂ ಹೆಚ್ಚು ಪುಸ್ತಕಗಳು, ಗೊಂದಲಪುರದ ಗಿಂದಲರು, ದಾಂಪತ್ಯಗಾಥೆ ಕಾದಂಬರಿಗಳು, ಹಿಮಾಲಯ ಪ್ರವಾಸಿ ಕಥನ ರಚಿಸಿದ್ದರು.
ಕಾರಂತರ ನಿಧನದ ನಂತರ ಅವರು ವಾಸವಿದ್ದ ಸಾಲಿಗ್ರಾಮದ ಮನೆಯಲ್ಲಿ ಡಾ.ಶಿವರಾಮ ಕಾರಂತ ಪ್ರತಿಷ್ಠಾನವನ್ನು ಸ್ಥಾಪಿಸಿದ್ದರು.