ಸಾಹಿತಿ ಡಾ. ಪಿ.ವಿ ನಾರಾಯಣ (82) ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೊನೆಯುಸಿಳೆದಿದ್ದಾರೆ.
ಬೆಂಗಳೂರಿನ ಜಯನಗರದ 8ನೇ ಬ್ಲಾಕ್ನಲ್ಲಿರುವ ಹೇಮಂತ ಅರಿಷ್ಠ ಅಪಾರ್ಟ್ಮೆಂಟ್ನಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬನಶಂಕರಿ ಚಿತಾಗಾರದಲ್ಲಿ ಮಧ್ಯಾಹ್ನದ 3 ಗಂಟೆಗೆ ಅವರ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಪಿ.ವಿ ನಾರಾಯಣ ಅವರು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ 1942ರ ಡಿಸೆಂಬರ್ 18ರಂದು ಜನಿಸಿದವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೆ, ‘ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ’ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪಡೆದಿದ್ದಾರೆ.
ಅವರು ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಬರವಣಿಗೆಯ ಮೇಲೆ ಹೆಚ್ಚು ಆಸಕ್ತಿ ಹೊಂದಿದ್ದ ಅವರು ಒಟ್ಟು 45ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಅವರ ಕೃತಿಗಳಲ್ಲಿ ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ, ಅಂತರ, ಬಳ್ಳಿಗಾವೆ, ಕಾಯಕತತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ, ಪದ್ಮಿನೀ ಪರಿಣಯ, ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ವಿಕಾಸ, ಶೋಧನೆ ನಿರ್ಧಾರ, ಧರ್ಮಕಾರಣ ಪ್ರಮುಖವಾದವು.
ಅವರ ಸಮಾಜದ ಮೇಲೆ ವಿಜ್ಞಾನದ ಪ್ರಭಾವ ಕೃತಿಗೆ ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ, ವಚನ ವ್ಯಾಸಂಗ ಕೃತಿಗೆ ಇಳಕಲ್ಲಿನ ಶ್ರೀವಿಜಯ ಮಹಂತೇಶ ಮಠ ಪುರಸ್ಕಾರ, ‘ಶೋಧನೆ’ ಕಾದಂಬರಿಗೆ ಸುಧಾ ವಾರ ಪತ್ರಿಕೆಯ ಕಾದಂಬರಿ ಸ್ಪರ್ಧೆ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ ಸೇರಿ ವಿವಿಧ ಪ್ರಶಸ್ತಿಗಳು ಅವರಿಗೆ ಸಂದಿವೆ.